ಉಗರಗೋಳ (ಸವದತ್ತಿ ತಾ.): ಈ ಊರಲ್ಲಿ ಮುಸ್ಲಿಂ ಕುಟುಂಬಗಳಿಲ್ಲ. ಆದರೆ, ಪ್ರತಿ ವರ್ಷ ಇಲ್ಲಿ ಮೊಹರಂ ಹಬ್ಬದ ಆಚರಣೆ ನಡೆಯುವುದು ವಿಶೇಷ. ಪಂಜಾ ಪ್ರತಿಷ್ಠಾಪಣೆಯಿಂದ ಹಿಡಿದು ಎಲ್ಲ ಧಾರ್ಮಿಕ ಆಚರಣೆಗಳನ್ನು ಕೈಗೊಳ್ಳುವವರು ಹಿಂದೂಗಳೆ. ಭಾವ್ಯಕೈ ಸಾರುತ್ತಾ ಸಮಾಜದಲ್ಲಿ ಸಾಮರಸ್ಯ ಮೂಡಿಸುತ್ತಿರುವುದು ಸವದತ್ತಿ ತಾಲ್ಲೂಕಿನ ಹರ್ಲಾಪೂರ ಗ್ರಾಮ.
ಸದ್ಯ 3,500 ಜನಸಂಖ್ಯೆ ಹೊಂದಿರುವ ಈ ಗ್ರಾಮದಲ್ಲಿ 50 ವರ್ಷಗಳಿಂದಲೂ ಮೊಹರಂ ಹಬ್ಬವನ್ನು ಸಂಭ್ರಮದಿಂದ ಆಚರಿಸಿಕೊಂಡು ಬರಲಾಗುತ್ತಿದೆ. 11 ವರ್ಷಗಳ ಹಿಂದೆ ಗ್ರಾಮದಲ್ಲಿನ ಹಿಂದೂಗಳೆ ಸೇರಿ ಹಣ ಸಂಗ್ರಹಿಸಿ ಫಕ್ಕಿರೇಶ್ವರ ಧಾರ್ಮಿಕ ಕೇಂದ್ರ ನಿರ್ಮಿಸಿದ್ದಾರೆ. ಪ್ರತಿ ವರ್ಷ ಅದೇ ಕೇಂಧ್ರದಲ್ಲಿ ಪಂಜಾ ಪ್ರತಿಷ್ಠಾಪಿಸುತ್ತಾ ಬಂದಿದ್ದಾರೆ. ಈ ವರ್ಷವೂ ಆಚರಣೆ ನಡೆಯಲಿದೆ. ಆದರೆ, ಕೋವಿಡ್ ಸಾಂಕ್ರಾಮಿಕದ ಹಿನ್ನೆಲೆಯಲ್ಲಿ ಸರಳವಾಗಿ ಸಂಪ್ರದಾಯದಂತೆ ಹಬ್ಬ ಆಚರಿಸುತ್ತಿದ್ದಾರೆ. ಸರ್ಕಾರದ ಆದೇಶದಂತೆ ಕೋವಿಡ್-19 ಮಾರ್ಗಸೂಚಿ ಪಾಲಿಸಿ ಧಾರ್ಮಿಕ ವಿಧಿವಿಧಾನಗಳನ್ನು ಕೈಗೊಳ್ಳುತ್ತಿದ್ದಾರೆ.
ಗುರುವಾರ(ಆ.19) ಮೊಹರಂ ಕಡೆ ದಿನವಾಗಿದ್ದು, ಧಾರ್ಮಿಕ ಆಚರಣೆಯನ್ನು ಸರಳವಾಗಿ ನಡೆಸಲು ತೀರ್ಮಾನಿಸಿದ್ದಾರೆ. ದೇಶವು ಕೊರೊನಾದಿಂದ ಮುಕ್ತವಾಗಲಿ ಮತ್ತು ರೈತರು, ಕೂಲಿ ಕಾರ್ಮಿಕರು ಹಾಗೂ ಜನಸಾಮಾನ್ಯರ ಬದುಕು ಸಮೃದ್ಧಿಯಾಗಲಿ ಎಂದು ಪ್ರಾರ್ಥಿಸುತ್ತಿದ್ದಾರೆ. ಇಲ್ಲಿನ ದೇವರು ಇಷ್ಟಾರ್ಥಗಳನ್ನು ಈಡೇರಿಸುತ್ತದೆ ಎಂಬ ನಂಬಿಕೆ ಗ್ರಾಮಸ್ಥರದು ಹಾಗೂ ಭಕ್ತರದಾಗಿದೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.