ಬೆಳಗಾವಿ: ಸಂಗೀತ ಶಿಕ್ಷಕರ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳುವಂತೆ ಆಗ್ರಹಿಸಿ ರಾಜ್ಯ ನಿರುದ್ಯೋಗಿ ಸಂಗೀತಗಾರರ ಹೋರಾಟ ಸಮಿತಿ ಸದಸ್ಯರು ಸೋಮವಾರ ತಾಲ್ಲೂಕಿನ ಸುವರ್ಣ ವಿಧಾನಸೌಧ ಬಳಿಯ ಸುವರ್ಣ ಗಾರ್ಡನ್ನಲ್ಲಿ ಹಾಡುತ್ತಾ ಪ್ರತಿಭಟನೆ ನಡೆಸಿದರು.
‘ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಸಂಗೀತ ಶಿಕ್ಷಕರನ್ನು ನೇಮಕಾತಿ ಮಾಡುವಲ್ಲಿ ವಿಳಂಬವಾಗಿದೆ. ಸಂಗೀತವು ಕೇವಲ ಮನರಂಜನೆಗೆ ಸೀಮಿತವಾಗಿಲ್ಲ. ಅದು ಶಿಕ್ಷಣಕ್ಕೆ ಹಾಗೂ ಕಲಿಕೆಗೆ ಪೂರಕವಾಗಿದೆ. ವಿದ್ಯಾರ್ಥಿಗಳ ಮಾನಸಿಕ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಈ ನಿಟ್ಟಿನಲ್ಲಿ ಶಾಲೆಗಳಲ್ಲಿ ಸಂಗೀತ ಶಿಕ್ಷಕರ ನೇಮಕಕ್ಕೆ ಕ್ರಮ ಕೈಗೊಳ್ಳಬೇಕು. ಈ ಮೂಲಕ ನಿರುದ್ಯೋಗಿ ಸಂಗೀತ ಶಿಕ್ಷಕರಿಗೆ ನೆರವಾಗಬೇಕು’ ಎಂದು ಕೋರಿದರು.
‘ಸಂಗೀತ ಶಿಕ್ಷಕರಾಗುವ ಕನಸು ಹೊತ್ತು ವಿದ್ವತ್ ಹಾಗೂ ಸೀನಿಯರ್ ಪದವಿ ಪಡೆದ ಸಾವಿರಾರು ಯುವಕ, ಯುವತಿಯರು ನೇಮಕಾತಿ ನಡೆಯದೇ ಇರುವುದರಿಂದ ನಿರುದ್ಯೋಗಿಗಳಾಗಿದ್ದಾರೆ. ಇದರಿಂದ ಅವರ ಬದುಕು ದುಸ್ತರವಾಗಿದೆ. ರಾಜ್ಯದಲ್ಲಿ 15ಸಾವಿರಕ್ಕೂ ಹೆಚ್ಚು ಮಂದಿ ನಿರುದ್ಯೋಗಿಗಳಾಗಿ ಅಲೆದಾಡುವಂಥ ಪರಿಸ್ಥಿತಿ ಬಂದಿದೆ. ಈ ಸರ್ಕಾರವಾದರೂ ನಮಗೆ ನೆರವಾಗಬೇಕು’ ಎಂದು ಒತ್ತಾಯಿಸಿದರು.
‘ವಯೋಮಿತಿ ಮೀರಿದ ಸಂಗೀತ ಶಿಕ್ಷಕರಿಗೆ ಮೀಸಲಾತಿ ಒದಗಿಸಬೇಕು. ವಸತಿ ಶಾಲೆಗಳಲ್ಲಿ ಸಂಗೀತ ಶಿಕ್ಷಕರ ನೇಮಕಾತಿಗೆ ಕ್ರಮ ಕೈಗೊಳ್ಳಬೇಕು’ ಎಂದು ಆಗ್ರಹಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.