ಹಂದಿಗುಂದ: ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಅವರು ಪುತ್ರಿ ಪ್ರಿಯಾಂಕಾ ಪರವಾಗಿ ಹಿಡಕಲ್ ಜಿಲ್ಲಾ ಪಂಚಾಯಿತಿ ಕ್ಷೇತ್ರ ವ್ಯಾಪ್ತಿಯ ಹಿಡಕಲ್, ಪಾಲಬಾವಿ, ಸುಲ್ತಾನಪುರ, ಹಂದಿಗುಂದ ಹಾಗೂ ಕಪ್ಪಲಗುದ್ದಿ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ ಬುಧವಾರ ಬಿರುಸಿನ ಪ್ರಚಾರ ನಡೆಸಿ ಮತಯಾಚಿಸಿದರು.
ಬಳಿಕ ಕಾರ್ಯಕರ್ತರೊಂದಿಗೆ ಮಾತನಾಡಿದ ಅವರು, ‘ದೇಶದಲ್ಲಿ ಅತ್ಯುತ್ತಮ ಆಡಳಿತ ನಡೆಸಿದವರು ಮುಖ್ಯಮಂತ್ರಿ ಸಿದ್ದರಾಮಯ್ಯ. ಗ್ಯಾರಂಟಿ ಯೋಜನೆಗಳನ್ನು ನೀಡುವ ಮೂಲಕ ಕಲ್ಯಾಣದ ನಾಡನ್ನು ನಿರ್ಮಿಸಿದ್ದಾರೆ. ಬಿಜೆಪಿ ಸುಳ್ಳು ಆಶ್ವಾಸನೆಗಳನ್ನು ನೀಡುವ ಮುಖಾಂತರ ಜನರನ್ನು ದಾರಿ ತಪ್ಪಿಸುತ್ತಿದೆ’ ಎಂದರು.
ಶಾಸಕ ಮಹೇಂದ್ರ ತಮ್ಮಣ್ಣವರ ಮಾತನಾಡಿ, ‘ಬಿಜೆಪಿಗರು ಹಿಂದುತ್ವ ಹೆಸರಿನಲ್ಲಿ ಅಮಾಯಕರ ಮೇಲೆ ದೌರ್ಜನ್ಯ ಎಸುಗುತ್ತಿದ್ದಾರೆ. ಇದು ಕೀಳು ಮಟ್ಟದ ರಾಜಕಾರಣ. ಶಾಂತಿ– ನೆಮ್ಮದಿಯಿಂದ ಬದುಕಬೇಕಾದರೆ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕು. ಪ್ರಿಯಾಂಕಾ ಜಾರಕಿಹೊಳಿ ಅವರನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಬೇಕು’ ಎಂದು ಮನವಿ ಮಾಡಿದರು.
ಮಾಜಿ ಶಾಸಕ ಶ್ಯಾಮ್ ಘಾಟಗೆ, ಮಾಜಿ ಸಚಿವ ವೀರಕುಮಾರ ಪಾಟೀಲ, ಡಾ.ಸಿ.ಬಿ. ಕುಲಿಗೋಡ, ಡಿ.ಎಸ್. ನಾಯಿಕ, ರಾಮಣ್ಣ ಗಸ್ತಿ, ಅರ್ಜುನ ನಾಯಕವಾಡಿ, ಗ್ರಾಮ ಪಂಚಾಯಿತಿ ಅಧ್ಯಕ್ಷ ಭೀಮಪ್ಪ ಪಾರತನಹಳ್ಳಿ, ಸಚಿನ ಘಂಟಿ ಜಿನ್ನಪ್ಪ ಅಸ್ಕಿ, ಕುಡಚಿ ಮಹಿಳಾ ಘಟಕದ ಅಧ್ಯಕ್ಷೆ ಜಸ್ಮಿನ ಅಲಾಸೆ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.