ಬೆಳಗಾವಿ: ‘ಹತ್ತನೇ ರಾಷ್ಟ್ರೀಯ ಮತದಾರರ ದಿನವನ್ನು ಜ. 25ರಂದು ಅರ್ಥಪೂರ್ಣವಾಗಿ ಆಚರಿಸಲಾಗುವುದು’ ಎಂದು ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ ತಿಳಿಸಿದರು.
ಸೋಮವಾರ ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಆಂದು ಕುಮಾರಗಂಧರ್ವ ಕಲಾಮಂದಿರದಲ್ಲಿ ಸಮಾರಂಭ ನಡೆಯಲಿದೆ. ಅದಕ್ಕೂ ಮುನ್ನ ರಾಣಿ ಚನ್ನಮ್ಮ ವೃತ್ತದಿಂದ ಕಲಾಮಂದಿರದವರೆಗೆ ಜಾಥಾ ಹಮ್ಮಿಕೊಳ್ಳಲಾಗಿದೆ. ಪ್ರಾದೇಶಿಕ ಆಯುಕ್ತರು, ಜಿಲ್ಲಾ ನ್ಯಾಯಾಧೀಶರು, ಉತ್ತರ ವಲಯ ಐಜಿಪಿ, ನಗರ ಪೊಲೀಸ್ ಆಯುಕ್ತರು ಮುಖ್ಯಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಜಿಲ್ಲಾಧಿಕಾರಿ ಡಾ.ಎಸ್.ಬಿ. ಬೊಮ್ಮನಹಳ್ಳಿ ಅಧ್ಯಕ್ಷತೆ ವಹಿಸಲಿದ್ದಾರೆ. ಚುನಾವಣಾ ಆಯೋಗದ ನಿರ್ದೇಶನದಂತೆ ಜ. 24ರಂದು ಎಲ್ಲ ಸರ್ಕಾರಿ ಕಚೇರಿಗಳಲ್ಲಿ ಪ್ರತಿಜ್ಞೆ ಬೋಧಿಸಬೇಕು’ ಎಂದು ತಿಳಿಸಿದರು.
‘ಬೂತ್ ಮಟ್ಟದಲ್ಲೂ ಕಡ್ಡಾಯವಾಗಿ ರಾಷ್ಟ್ರೀಯ ಮತದಾರರ ದಿನ ಆಚರಿಸಬೇಕು. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಾಯಿಸಿದ ನವ ಮತದಾರರಿಗೆ ಜಿಲ್ಲಾಮಟ್ಟದ ಕಾರ್ಯಕ್ರಮದಲ್ಲಿ ಗುರುತಿನ ಚೀಟಿ ವಿತರಿಸಲಾಗುವುದು. ಉತ್ತಮ ಕಾರ್ಯಚಟುವಟಿಕೆ ಹಮ್ಮಿಕೊಂಡ ಮತದಾರರ ಸಾಕ್ಷರತಾ ಕ್ಲಬ್ಗಳಿಗೆ ಪ್ರಶಸ್ತಿ ನೀಡಲಾಗುವುದು. ಜಾಗೃತಿಗೆ ನಡೆಸಿದ ರಸಪ್ರಶ್ನೆ, ಚಿತ್ರಕಲೆ, ನಿಬಂಧ ಮೊದಲಾದ ಸ್ಪರ್ಧೆಗಳ ವಿಜೇತರಿಗೆ ಬಹುಮಾನ ಮತ್ತು ಪ್ರಶಸ್ತಿಪತ್ರಗಳನ್ನು ವಿತರಿಸಲಾಗುವುದು’ ಎಂದು ಮಾಹಿತಿ ನೀಡಿದರು.
ವಾಯವ್ಯ ಸಾರಿಗೆ ಸಂಸ್ಥೆಯ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್. ಮುಂಜಿ, ನಗರಪಾಲಿಕೆ ಉಪ ಆಯುಕ್ತೆ ಡಾ.ಕವಿತಾ ಯೋಗಪ್ಪನವರ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಗುರುನಾಥ ಕಡಬೂರ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಎಫ್.ಬಿ. ನದಾಫ್ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.