ADVERTISEMENT

‘ಕಪ್ಪು ಶಿಲೀಂಧ್ರ ಸರ್ಜರಿಗೆ ಬೇಕು 2–3 ಗಂಟೆ’: ಆಮ್ಲಾನ್ ಆದಿತ್ಯ ಬಿಸ್ವಾಸ್

​ಪ್ರಜಾವಾಣಿ ವಾರ್ತೆ
Published 9 ಜೂನ್ 2021, 14:06 IST
Last Updated 9 ಜೂನ್ 2021, 14:06 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಬೆಳಗಾವಿ: ‘ಕಪ್ಪು ಶಿಲೀಂಧ್ರ ಸರ್ಜರಿಗೆ 2ರಿಂದ 3 ಗಂಟೆ ಬೇಕಾಗುತ್ತದೆ. ಹುಬ್ಬಳ್ಳಿಯ ಕಿಮ್ಸ್ ಹಾಗೂ ಗದಗ ವೈದ್ಯಕೀಯ ಕಾಲೇಜಿನಿಂದ ತಲಾ ಒಬ್ಬ ತಜ್ಞರನ್ನು ಇಲ್ಲಿನ ಬಿಮ್ಸ್‌ಗೆ ನಿಯೋಜಿಸಲು ಕ್ರಮ ಕೈಗೊಳ್ಳಲಾಗಿದೆ’ ಎಂದು ಬಿಮ್ಸ್ ಆಡಳಿತ ಮೇಲುಸ್ತುವಾರಿ ಅಧಿಕಾರಿಯಾಗಿರುವ ಪ್ರಾದೇಶಿಕ ಆಯುಕ್ತ ಆಮ್ಲಾನ್ ಆದಿತ್ಯ ಬಿಸ್ವಾಸ್ ತಿಳಿಸಿದರು.

ಇಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಅಧ್ಯಕ್ಷತೆಯಲ್ಲಿ ಬುಧವಾರ ನಡೆದ ಸಭೆಯಲ್ಲಿ ಅವರು ಮಾತನಾಡಿದರು.

‘ಬಿಮ್ಸ್‌ನಲ್ಲಿ ಸದ್ಯಕ್ಕೆ ಸ್ವಚ್ಛತೆ ಹಾಗೂ ಸೋಂಕಿತರಿಗೆ ಉತ್ತಮ ಪ್ರೋಟಿನ್‌ಯುಕ್ತ ಆಹಾರ ಪೂರೈಕೆಗೆ ಕ್ರಮ ಕೈಗೊಳ್ಳಲಾಗಿದೆ’ ಎಂದು ಹೇಳಿದರು.

ADVERTISEMENT

ನೀರಾವರಿ ಇಲಾಖೆಯ ಉತ್ತರ ವಲಯದ ಮುಖ್ಯ ಎಂಜಿನಿಯರ್ ಅರವಿಂದ ಕಣಗಲಿ, ‘ಮುಂಗಾರು ಮಳೆ ಆರಂಭವಾಗುತ್ತಿರುವುದರಿಂದ, ಮಹಾರಾಷ್ಟ್ರದ ಕೊಯ್ನಾ ಸೇರಿದಂತೆ ವಿವಿಧ ಜಲಾಶಯ ಮಟ್ಟಗಳ ಮೇಲೆ ನಿಗಾ ವಹಿಸಲಾಗಿದೆ’ ಎಂದು ತಿಳಿಸಿದರು.

‘ಗ್ರಾಮ ಮಟ್ಟದಲ್ಲಿ ಕಾರ್ಯಪಡೆಯ ಮೂಲಕ ಮನೆ ಮನೆ ಸಮೀಕ್ಷೆ ಮಾಡಲಾಗುತ್ತಿದೆ. ಐಸೊಲೇಷನ್‌ ಇದ್ದವರಿಗೆ ಕಿಟ್‌ಗಳನ್ನು ನೀಡಲಾಗುತ್ತಿದೆ. ಗ್ರಾಮೀಣ ಪ್ರದೇಶಗಳಲ್ಲಿ ಸೋಂಕು ಪ್ರಮಾಣ ಕಡಿಮೆಯಾಗಿದೆ’ ಎಂದು ಡಿಎಚ್‌ಒ ಡಾ.ಎಸ್.ವಿ.ಮುನ್ಯಾಳ ಮಾಹಿತಿ ನೀಡಿದರು.

ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ರವೀಂದ್ರ ಹಕಾಟಿ, ‘ಕೋವಿಡ್ ಹಿನ್ನೆಲೆಯಲ್ಲಿ ಸರ್ಕಾರದ ಪ್ಯಾಕೇಜ್ ಪ್ರಕಾರ ಈಗಾಗಲೇ ₹ 5 ಕೋಟಿ ಪರಿಹಾರ ಧನ ಫಲಾನುಭವಿಗಳಿಗೆ ತಲುಪಿದೆ’ ಎಂದರು.

ಪಶುಪಾಲನೆ ಇಲಾಖೆಯ ಉಪ ನಿರ್ದೇಶಕ ಡಾ.ಅಶೋಕ ಕೊಳ್ಳಾ, ‘12.81 ಜಾನುವಾರು ಪೈಕಿ 11.72 ಲಕ್ಷ ಜಾನುವಾರುಗೆ ಲಸಿಕೆ ಹಾಕಲಾಗಿದೆ. 2ನೇ ಹಂತದಲ್ಲಿ ಆಗಸ್‌ನಿಂದ ನೀಡಲಾಗುವುದು. 56ಸಾವಿರ ಡೋಸ್ ಲಸಿಕೆ ದಾಸ್ತಾನಿದ್ದು, ಕೊರತೆ ಇಲ್ಲ’ ಎಂದು ತಿಳಿಸಿದರು.

ಹೆಚ್ಚುವರಿ ಜಿಲ್ಲಾಧಿಕಾರಿ ಅಶೋಕ ದುಡಗುಂಟಿ, ಮಹಾನಗರ ಪಾಲಿಕೆಯ ಆಯುಕ್ತ ಕೆ.ಎಚ್. ಜಗದೀಶ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಬಾಲಕೃಷ್ಣ ತುಕ್ಕಾರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.