ಬೆಳಗಾವಿ: ಇಲ್ಲಿನ ಕೇಂದ್ರ ಬಸ್ ನಿಲ್ದಾಣದಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ಒದಗಿಸಲಾದ 3 ಮಲ್ಟಿಅಕ್ಸಲ್ ಬಸ್ ಸೇರಿ ಒಟ್ಟು 9 ನೂತನ ಬಸ್ಗಳ ಅಧಿಕೃತ ಸಂಚಾರಕ್ಕೆ ಉಪ ಮುಖ್ಯಮಂತ್ರಿಯೂ ಆಗಿರುವ ಸಾರಿಗೆ ಸಚಿವ ಲಕ್ಷ್ಮಣ ಸವದಿ ಸೋಮವಾರ ಹಸಿರು ನಿಶಾನೆ ತೋರಿದರು. ನಂತರ ಬಸ್ ನಿಲ್ದಾಣದ ಕಾಮಗಾರಿ ಪರಿಶೀಲಿಸಿದರು.
ಬಳಿಕ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕೇಂದ್ರ ಬಸ್ ನಿಲ್ದಾಣದ ಕಾಮಗಾರಿ ಈಗಾಗಲೇ ವಿಳಂಬವಾಗಿದೆ. ಇದರಿಂದ ಪ್ರಯಾಣಿಕರು ತೊಂದರೆ ಅನುಭವಿಸುವಂತಾಗಿದೆ. ₹ 30 ಕೋಟಿ ವೆಚ್ಚದ ಕಾಮಗಾರಿ ಇದು. ಜೂನ್ ಅಂತ್ಯದೊಳಗೆ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ಸೂಚಿಸಿದರು.
ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಗುತ್ತಿಗೆದಾರರಿಗೆ ತರಾಟೆ ತೆದುಕೊಂಡರು. ‘ಬಸ್ ನಿಲ್ದಾಣ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದಾಗಿ ಪ್ರಯಾಣಿಕರು ಸಮಸ್ಯೆ ಅನುಭವಿಸುತ್ತಿದ್ದಾರೆ. ಆದಷ್ಟು ಬೇಗ ಕಾಮಗಾರಿ ಪೂರ್ಣಗೊಳಿಸಬೇಕು’ ಎಂದು ತಿಳಿಸಿದರು.
ಬೆಳಗಾವಿ-ಬೆಂಗಳೂರು, ಚೆನೈ, ಹೈದರಾಬಾದ್ ಮಾರ್ಗಗಳಿಗೆ ತಲಾ ಒಂದುಮಲ್ಟಿ ಅಕ್ಸೆಲ್ ಬಸ್ಗಳು ಹಾಗೂ ಬೆಳಗಾವಿ-ವಿಜಯಪುರ6 ಬಸ್ಗಳು ಸೋಮವಾರದಿಂದ ಸೇವೆ ಆರಂಭಿಸಿದವು.
ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ರಾಜ್ ಸಚಿವ ಕೆ.ಎಸ್. ಈಶ್ವರಪ್ಪ, ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ, ಚಿಕ್ಕೋಡಿ ಸಂಸದ ಅಣ್ಣಾಸಾಹೇಬ ಜೊಲ್ಲೆ, ಶಾಸಕರಾದ ಮಹೇಶ ಕುಮಠಳ್ಳಿ, ಅನಿಲ ಬೆನಕೆ, ಅಭಯ ಪಾಟೀಲ, ಮಹಾಂತೇಶ ದೊಡ್ಡಗೌಡರ, ಬಿಜೆಪಿ ಮುಖಂಡ ಸಂಜಯ ಪಾಟೀಲ, ಮಾರುತಿ ಅಷ್ಟಗಿ, ಸಾರಿಗೆ ನಿಗಮದ ವಿಭಾಗೀಯ ನಿಯಂತ್ರಣಾಧಿಕಾರಿ ಮಹಾದೇವಪ್ಪ ಮುಂಜಿ ಇದ್ದರು.
ಬಳಿಕ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ, ಸಚಿವ ಈಶ್ವರಪ್ಪ ಸೇರಿದಂತೆ ಶಾಸಕರು ನೂತನ ಮಲ್ಟಿಅಕ್ಸೆಲ್ ಬಸ್ನಲ್ಲಿ ಸುವರ್ಣ ವಿಧಾನಸೌಧದವರೆಗೆ ಪ್ರಯಾಣಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.