ಬೆಳಗಾವಿ: ‘ಕೊರೊನಾ 2ನೇ ಅಲೆ ಹರಡುವಿಕೆ ತಡೆಯುವ ಮುಂಜಾಗ್ರತಾ ಕ್ರಮವಾಗಿ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗುತ್ತಿದೆ. ಆದರೆ, ರಾಜ್ಯ ರಸ್ತೆ ಸಾರಿಗೆ ಬಸ್ಗಳ ಸಂಚಾರಕ್ಕೆ ಯಾವುದೇ ತೊಂದರೆ ಅಥವಾ ವ್ಯತ್ಯಯ ಆಗುವುದಿಲ್ಲ’ ಎಂದು ಸಾರಿಗೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.
ಬುಧವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಸಾರಿಗೆ ಬಸ್ಗಳ ಸಂಚಾರದಲ್ಲಿ ತೊಂದರೆ ಆಗದಂತೆ ನೋಡಿಕೊಳ್ಳಲಾಗುವುದು ಎಂದು ಮುಖ್ಯಮಂತ್ರಿಯೂ ಹೇಳಿದ್ದಾರೆ. ರಾತ್ರಿ ಹೊರಡುವ ಬಸ್ಗಳಲ್ಲಿ ಯಾವುದೇ ವ್ಯತ್ಯಾಸ ಆಗುವುದಿಲ್ಲ. ಸರಕು ಸಾಗಣೆ ವಾಹನಗಳು ಓಡಾಡಲಿವೆ. ಯಥಾಸ್ಥಿತಿ ಮುಂದುವರಿಯಲಿದೆ’ ಎಂದರು.
ರಾತ್ರಿ ಕರ್ಫ್ಯೂಗೆ ಟ್ಯಾಕ್ಸಿ ಮಾಲೀಕರ ಸಂಘ ಹಾಗೂ ಬಾರ್ಗಳ ಮಾಲೀಕರು ವಿರೋಧ ವ್ಯಕ್ತಪಡಿಸಿರುವ ಕುರಿತು ಪ್ರತಿಕ್ರಿಯಿಸಿದ ಸಚಿವರು, ‘ಮೊದಲು ಜೀವ ಅಮೂಲ್ಯ. ಲಾಭ–ನಷ್ಟದ ಲೆಕ್ಕ ಹಾಕುವುದು ಸರಿಯಲ್ಲ. ಪ್ರಾಣವೊಂದಿದ್ದರೆ ಏನೆಲ್ಲಾ ಮಾಡಬಹುದು. ಹೀಗಾಗಿ, ಜನರ ಜೀವ ರಕ್ಷಣೆಗೆ ಆದ್ಯತೆ ನೀಡಲಾಗುತ್ತಿದೆ. ಕಾಂಗ್ರೆಸ್ನವರು ಮೊದಲಿನಿಂದಲೂ ಎಲ್ಲದಕ್ಕೂ ವಿರೋಧಿಸುವ ಪರಿಪಾಠ ಬೆಳೆಸಿಕೊಂಡು ಬಂದಿದ್ದಾರೆ. ಅದೇ ಧರ್ಮವೆಂದು ಭಾವಿಸಿದ್ದಾರೆ. ಜೀವದ ಜೊತೆಗೆ ಚೆಲ್ಲಾಟ ಆಡುವುದು ಆಗಬಾರದು’ ಎಂದು ಹೇಳಿದರು.
‘ರಾಜ್ಯದಲ್ಲಿ ಮತ್ತೆ ಲಾಕ್ಡೌನ್ ಆಗುವುದಿಲ್ಲ ಎಂದು ತಿಳಿದುಕೊಂಡಿದ್ದೇನೆ. ಅಂತೆಯೇ, ಯಾವ ರಾಜ್ಯಕ್ಕೂ ಬಸ್ ಸಂಚಾರ ಸ್ಥಗಿತಗೊಳಿಸುವುದಿಲ್ಲ’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.