ಬೆಳಗಾವಿ: ಬೆಳಗಾವಿ ಸೇರಿದಂತೆ ಮೂರು ಮಹಾನಗರ ಪಾಲಿಕೆಗಳ ಚುನಾವಣೆಯನ್ನು ಚುನಾವಣಾ ಆಯೋಗವು ತರಾತುರಿಯಲ್ಲಿ ಘೋಷಿಸಿರುವ ಕ್ರಮಕ್ಕೆ ಜಿಲ್ಲಾ ಕನ್ನಡ ಸಂಘಟನೆಗಳ ಕ್ರಿಯಾ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ.
ಈ ಬಗ್ಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದು, ‘ತರಾತುರಿಯಲ್ಲಿ ಚುನಾವಣೆ ಸರಿಯಲ್ಲ. ಕೋವಿಡ್ ಮೂರನೇ ಅಲೆಯ ಭೀತಿ ಆವರಿಸಿರುವ ಸಂದರ್ಭದಲ್ಲಿ ಚುನಾವಣೆ ವೇಳಾಪಟ್ಟಿ ಪ್ರಕಟಿಸಿ ಆರೇ ದಿನಗಳಲ್ಲಿ ನಾಮಪತ್ರ ಸಲ್ಲಿಕೆ ಆರಂಭಿಸುವ ಪ್ರಕ್ರಿಯೆ ಅತ್ಯಂತ ಅಸಮಂಜಸವಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳನ್ನು ಮುಂದೂಡಲು ರಾಜ್ಯ ಸಚಿವ ಸಂಪುಟ ಎರಡು ಬಾರಿ ನಿರ್ಧಾರ ಕೈಗೊಂಡರೂ ಆಯೋಗವು ಪ್ರತಿಷ್ಠೆಯ ಪ್ರಶ್ನೆಯನ್ನಾಗಿ ಮಾಡಿಕೊಂಡು ವೇಳಾಪಟ್ಟಿ ಪ್ರಕಟಿಸಿದಂತಿದೆ’ ಎಂದು ಅಧ್ಯಕ್ಷ ಅಶೋಕ ಚಂದರಗಿ ದೂರಿದ್ದಾರೆ.
‘ಕೋವಿಡ್ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಚುನಾವಣೆ ನಡೆಸುವುದು ಸೂಕ್ತವಲ್ಲ ಎಂಬ ಅಂಶವನ್ನು ಹೈಕೋರ್ಟ್ ಗಮನಕ್ಕೆ ತರುವ ಮೂಲಕ ಚುನಾವಣೆ ಮುಂದೂಡಲು ಸಾಧ್ಯವಿರುವ ಕ್ರಮಗಳನ್ನು ಸರ್ಕಾರ ಕೈಗೊಳ್ಳಬೇಕು. ಆ ದಿನಗಳಲ್ಲಿ ರಾಜಕೀಯ ಪಕ್ಷಗಳು ಮತ್ತು ಸರ್ಕಾರಿ ಯಂತ್ರವು ಎಲ್ಲ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಿಲ್ಲ ಎನ್ನುವುದನ್ನೂ ಹೈಕೋರ್ಟ್ಗೆ ಮನವರಿಕೆ ಮಾಡಿಕೊಡಬೇಕು’ ಎಂದು ಕೋರಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.