ADVERTISEMENT

ಸೇವಾ ಭದ್ರತೆ ಒದಗಿಸಲು ಆಗ್ರಹಿಸಿ ಅತಿಥಿ ಉಪನ್ಯಾಸಕರಿಂದ ಆನ್‌ಲೈನ್‌ ಚಳವಳಿ

​ಪ್ರಜಾವಾಣಿ ವಾರ್ತೆ
Published 21 ಜುಲೈ 2020, 10:41 IST
Last Updated 21 ಜುಲೈ 2020, 10:41 IST
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರು ಮಂಗಳವಾರ ಆನ್‌ಲೈನ್‌ ಚಳವಳಿ ನಡೆಸಿದರು
ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರು ಮಂಗಳವಾರ ಆನ್‌ಲೈನ್‌ ಚಳವಳಿ ನಡೆಸಿದರು   

ಬೆಳಗಾವಿ: ‘ಸೇವಾ ಭದ್ರತೆ ಒದಗಿಸಬೇಕು’ ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರು ಎಐಎಸ್‌ಇಸಿ (ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿ) ಸಹಯೋಗದಲ್ಲಿ ಮಂಗಳವಾರ ಆನ್‌ಲೈನ್‌ ಚಳವಳಿ ನಡೆಸಿದರು.

ಜಿಲ್ಲೆಯ ಸರ್ಕಾರಿ ಪಿಯು ಅತಿಥಿ ಉಪನ್ಯಾಸಕರು ಚಳವಳಿಯಲ್ಲಿ ಪಾಲ್ಗೊಂಡು, ಸಮಸ್ಯೆ ಮತ್ತು ಬೇಡಿಕೆಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಳ್ಳುವ ಮೂಲಕ ಸರ್ಕಾರದ ಗಮನಸೆಳೆದರು. ಕೊರೊನಾ ಸೋಂಕಿನ ಹಿನ್ನೆಲೆಯಲ್ಲಿ ಮನವಿಯನ್ನು ಇ–ಮೇಲ್‌ ಮೂಲಕ ಜಿಲ್ಲಾಧಿಕಾರಿ, ಮುಖ್ಯಮಂತ್ರಿ ಹಾಗೂ ಶಿಕ್ಷಣ ಸಚಿವರಿಗೆ ಕಳುಹಿಸಿದರು.

‘ಎಲ್ಲ ಅತಿಥಿ ಶಿಕ್ಷರು, ಉಪನ್ಯಾಸಕರು, ಖಾಸಗಿ ಶಾಲಾ-ಕಾಲೇಜುಗಳ ಶಿಕ್ಷಕರು ಹಾಗೂ ಉಪನ್ಯಾಸಕರಿಗೆ ಕೋವಿಡ್ ವಿಶೇಷ ಆರ್ಥಿಕ ಪ್ಯಾಕೇಜ್ ಘೋಷಿಸಬೇಕು. ಸರ್ಕಾರಿ ಪದವಿ ಪೂರ್ವ ಕಾಲೇಜುಗಳ ಅತಿಥಿ ಉಪನ್ಯಾಸಕರನ್ನು ಯಾವುದೇ ಕಾರಣಕ್ಕೂ ಕೆಲಸದಿಂದ ವಜಾ ಮಾಡಬಾರದು. ಎಲ್ಲ ನೇಮಕಾತಿ ಪ್ರಕ್ರಿಯೆಯಲ್ಲಿ ಅರ್ಹ ಹುದ್ದೆಗಳಿಗೆ ಅತಿಥಿ ಉಪನ್ಯಾಸಕರಿಗೆ ಆದ್ಯತೆ ನೀಡಬೇಕು. ಈ ನಿಟ್ಟಿನಲ್ಲಿ ಅವರ ಸೇವೆಗೆ ನಿರ್ದಿಷ್ಟ ವಿಶೇಷ ಅಂಕ ನೀಡುವುದು ಅಥವಾ ವಯೋಮಿತಿ ಏರಿಸುವುದು ಮೊದಲಾದ ಪ್ರಜಾತಾಂತ್ರಿಕ ಪದ್ಧತಿಯನ್ನು ಅನುಷ್ಠಾನಕ್ಕೆ ತರಬೇಕು. ಗೌರವಧನ ಹೆಚ್ಚಿಸಬೇಕು. ವರ್ಷದ 12 ತಿಂಗಳೂ ಗೌರವಧನ ನೀಡಬೇಕು. ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆಯ ಉತ್ತರಪತ್ರಿಕೆಗಳ ಮೌಲ್ಯಮಾಪನ ಕಾರ್ಯದಲ್ಲಿ ನಮ್ಮನ್ನೂ ಪರಿಗಣಿಸಬೇಕು. ಸೇವಾ ಪ್ರಮಾಣಪತ್ರ ನೀಡಬೇಕು ಮತ್ತು ಗುರುತಿನ ಚೀಟಿ ಕೊಡಬೇಕು’ ಎಂದು ಒತ್ತಾಯಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.