ಮೂಡಲಗಿ: ಅಸಂಘಟಿತ ಕಾರ್ಮಿಕರು ವಿವಿಧ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನಗಳನ್ನು ಪಡೆಯಲು ಕರ್ನಾಟಕ ರಾಜ್ಯದ 1.6 ಕೋಟಿಗೂ ಹೆಚ್ಚು ಅಸಂಘಟಿತ ಕಾರ್ಮಿಕರು ಇ-ಶ್ರಮ್ ಪೋರ್ಟಲ್ನಲ್ಲಿ ನೋಂದಾಯಿಸಿಕೊಂಡಿದ್ದಾರೆಂದು ಕೇಂದ್ರ ಕಾರ್ಮಿಕ ಮತ್ತು ಉದ್ಯೋಗ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಲಿಖಿತ ಉತ್ತರದಲ್ಲಿ ಮಾಹಿತಿ ನೀಡಿರುವುದಾಗಿ ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ನವದೆಹಲಿಯಲ್ಲಿ ನಡೆಯುತ್ತಿರುವ ಸಂಸತ್ತಿನ ಬಜೆಟ್ ಅಧಿವೇಶನದಲ್ಲಿ ನೋಂದಾಯಿತ ಕಾರ್ಮಿಕರಿಗೆ ಇ-ಶ್ರಮ್ ಪೋರ್ಟಲ್ ಮೂಲಕ ನೀಡುತ್ತಿರುವ ಕಲ್ಯಾಣ ಯೋಜನೆಗಳ ಕುರಿತು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ದೇಶದಲ್ಲಿ 30.68 ಕೋಟಿಗೂ ಹೆಚ್ಚು ಅಸಂಘಟಿತ ಕಾರ್ಮಿಕರು ಈಗಾಗಲೇ ಇ–ಶ್ರಮ್ ಪೋರ್ಟ್ಲ್ನಲ್ಲಿ ನೋಂದಾಯಿಸಿಕೊಂಡಿದ್ದಾರೆ, ಅರ್ಧಕ್ಕಿಂತ ಹೆಚ್ಚು(ಶೇ.53.68) ಮಹಿಳೆಯರು ಇದ್ದಾರೆ ಎಂದರು.
‘ಕಾರ್ಮಿಕ ಮತ್ತು ಉದ್ಯೋಗ ಸಚಿವಾಲಯವು 2025ರ ಜನವರಿ 7 ರಂದು ಭಾಷಿಣಿ ವೇದಿಕೆ ಬಳಸಿಕೊಂಡು ಇ-ಶ್ರಮ್ ಪೋರ್ಟಲ್ನಲ್ಲಿ ಕಾರ್ಮಿಕರಿಗೆ 22 ಭಾರತೀಯ ಭಾಷೆಗಳಲ್ಲಿ ಸಂವಹನ ನಡೆಸಲು ಅನುವು ಮಾಡಿಕೊಟ್ಟಿತು, ಫೆಬ್ರವರಿ 24 ರಂದು ಇ-ಶ್ರಮ್ ಮೊಬೈಲ್ ಅಪ್ಲಿಕೇಶನ್ ಪ್ರಾರಂಭಿಸಿತು. ಇ–ಶ್ರಮದಲ್ಲಿ ನೋಂದಾಯಿಸಿಕೊಳ್ಳಲು ಕಾರ್ಮಿಕರಿಗೆ ಜಾಗೃತಿ ಮೂಡಿಸಲು ಸಾಮಾಜಿಕ ಮಾಧ್ಯಮ ವೇದಿಕೆಗಳನ್ನು ಸಹ ಬಳಸಲಾಗುತ್ತಿದೆ ಎಂದು ಸಚಿವರು ಉತ್ತರಿಸಿದ್ದಾರೆ’ ಎಂದು ಸಂಸದ ಈರಣ್ಣ ಕಡಾಡಿ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.