ಬೆಳಗಾವಿ: ‘ಎಲ್ಲ ಸಂಪತ್ತುಗಳಿಗಿಂತ ಆರೋಗ್ಯ ಸಂಪತ್ತು ದೊಡ್ಡದು. ಇಂದು ಎಲ್ಲರೂ ಧನ ಸಂಪತ್ತಿಗಾಗಿ ಆರೋಗ್ಯ ಸಂಪತ್ತು ನಿರ್ಲಕ್ಷಿಸುತ್ತಿದ್ದಾರೆ’ ಎಂದು ಬಾಳೆಹೊನ್ನೂರಿನ ರಂಭಾಪುರಿ ಪೀಠದ ಡಾ.ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ಕಳವಳ ವ್ಯಕ್ತಪಡಿಸಿದರು.
ಇಲ್ಲಿನ ಹುಕ್ಕೇರಿ ಹಿರೇಮಠದಲ್ಲಿ ಅಂತರರಾಷ್ಟ್ರೀಯ ಯೋಗ ದಿನ ಅಂಗವಾಗಿ ಸೋಮವಾರ ಹಮ್ಮಿಕೊಂಡಿದ್ದ ಯೋಗ ಶಿಬಿರದಲ್ಲಿ ಮಾತನಾಡಿದ ಅವರು, ‘ಇಂದು ಜನರು ಆರೋಗ್ಯ ಕಡೆಗಣಿಸುತ್ತಿದ್ದಾರೆ. ಬಳಿಕ ಜೀವನವಿಡೀ ಗಳಿಸಿದ ಹಣವನ್ನು ಆರೋಗ್ಯಕ್ಕಾಗಿ ವ್ಯಯಿಸುತ್ತಿದ್ದಾರೆ. ಯೋಗದಿಂದ ಆರೋಗ್ಯ ಮತ್ತು ಮಾನಸಿಕ ಶಾಂತಿ ಹೊಂದಲು ಸಾಧ್ಯ’ ಎಂದು ಅಭಿಪ್ರಾಯಪಟ್ಟರು.
ಯೋಗ ಶಿಬಿರದಲ್ಲಿ ಭಾಗವಹಿಸಿದ್ದ ಶಿಬಿರಾರ್ಥಿಗಳಿಗೆ ರುದ್ರಾಕ್ಷಿ ಮತ್ತು ಮಾಸ್ಕ್ ವಿತರಿಸಲಾಯಿತು. ಹುಕ್ಕೇರಿ ಹಿರೇಮಠದ ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಆಶೀರ್ವಚನ ನೀಡಿದರು. ಬೈಲಹೊಂಗಲ ಆರಾದ್ರಿಮಠದ ಡಾ.ಮಹಾಂತೇಶ ಶಾಸ್ತ್ರಿ, ಗುರುಲಿಂಗ ಶಿವಾಚಾರ್ಯ ಸ್ವಾಮೀಜಿ, ಡಾ.ಪದ್ಮನಾಭ ದರಬಾರೆ, ಅಮೋಘ್ ಜೈನ, ರೇಣುಕ ಗಡದೇಶ್ವರ ದೇವರು ಇತರರಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.