ಬೆಳಗಾವಿ: ‘ರಾಜ್ಯದಲ್ಲಿರುವ ಖನಿಜ ಸಂಪತ್ತಿನ ಸಮಗ್ರ ಸಮೀಕ್ಷೆಗೆ ಅಂತರರಾಷ್ಟ್ರೀಯ ಟೆಂಡರ್ ಕರೆಯಲಾಗಿದೆ’ ಎಂದು ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ ನಿರಾಣಿ ತಿಳಿಸಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
‘ಸಮೀಕ್ಷೆಯಿಂದ, ನಮ್ಮಲ್ಲಿರುವ ಒಟ್ಟಾರೆ ಖನಿಜ ಸಂಪತ್ತಿನ ಪ್ರಮಾಣದ ನಿಖರ ಮಾಹಿತಿ ದೊರೆಯಲಿದೆ. ಇದರಿಂದ ಅದರ ಸಮರ್ಪಕ ಬಳಕೆಯ ಯೋಜನೆ ರೂಪಿಸಬಹುದು’ ಎಂದು ಹೇಳಿದರು.
‘ಈಗ, 50 ವರ್ಷಗಳ ಹಿಂದಿನ ಸಮೀಕ್ಷೆ ಆಧರಿಸಿ ಖನಿಜ ಸಂಪತ್ತು ಬಳಕೆ ಮಾಡಿಕೊಳ್ಳಲಾಗುತ್ತಿದೆ. ಆದರೆ, ಅತ್ಯಾಧುನಿಕ ತಂತ್ರಜ್ಞಾನವನ್ನು ಬಳಸಿ ಸಮೀಕ್ಷೆ ನಡೆಸುವ ಮೂಲಕ ಖನಿಜ ಸಂಪತ್ತು ಪತ್ತೆ ಹಚ್ಚಿದಾಗ ಪ್ರಸ್ತುತ ಸನ್ನಿವೇಶದಲ್ಲಿ ಕರ್ನಾಟಕ ಅತ್ಯಂತ ಶ್ರೀಮಂತ ರಾಜ್ಯ ಎನಿಸಲಿದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.
‘ಖನಿಜ ಸಂಪತ್ತಿನ ಸದ್ಬಳಕೆ ಜೊತೆಗೆ ಉದ್ಯೋಗಗಳನ್ನು ಸೃಷ್ಟಿಸುವುದು ಕೂಡ ನನ್ನ ಆದ್ಯತೆಯಾಗಿದೆ’ ಎಂದು ತಿಳಿಸಿದರು.
‘ಮರಳನ್ನು ಗ್ರೇಡ್ ಪ್ರಕಾರ ವಿಂಗಡಿಸಿ ಅಗತ್ಯತೆ ಆಧರಿಸಿ ಜಿಲ್ಲಾ ಹಾಗೂ ತಾಲ್ಲೂಕು ಮಟ್ಟದಲ್ಲಿ ಸಮಿತಿಗಳ ಮೂಲಕ ವಿತರಣೆಗೆ ಅನುಕೂಲ ಆಗುವಂತೆ ‘ಮರಳು ನಿಗಮ’ (ಸ್ಯಾಂಡ್ ಕಾರ್ಪೋರೇಷನ್) ಸ್ಥಾಪನೆ ಚಿಂತನೆ ಇದೆ. ಶೀಘ್ರವೇ ಕಾರ್ಯಕತಗೊಳಿಸಲು ಕ್ರಮ ವಹಿಸಲಾಗುವುದು’ ಎಂದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.