ADVERTISEMENT

ಹುತಾತ್ಮ ಪೊಲೀಸರ ತ್ಯಾಗ, ಬಲಿದಾನ ಸದಾ ಸ್ಮರಿಸಿ: ಮೊಹಮ್ಮದ್‌ ರೋಷನ್‌

ಪೊಲೀಸ್‌ ಹುತಾತ್ಮ ದಿನಾಚರಣೆ ಕಾರ್ಯಕ್ರಮ

​ಪ್ರಜಾವಾಣಿ ವಾರ್ತೆ
Published 21 ಅಕ್ಟೋಬರ್ 2025, 7:32 IST
Last Updated 21 ಅಕ್ಟೋಬರ್ 2025, 7:32 IST
   

ಬೆಳಗಾವಿ: ‘ಹಬ್ಬ–ಹರಿದಿನಗಳನ್ನು ಬದಿಗೊತ್ತಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡಲು ಹಗಲಿರುಳು ಶ್ರಮಿಸುತ್ತಿರುವ ಪೊಲೀಸರ ಕಾರ್ಯ ಶ್ಲಾಘನೀಯ’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್‌ ರೋಷನ್‌ ಹೇಳಿದರು.

ಇಲ್ಲಿನ ಡಿಎಆರ್ ಮೈದಾನದಲ್ಲಿ ನಗರ ಪೊಲೀಸ್‌ ಕಮಿಷನರೇಟ್‌ ಹಾಗೂ ಜಿಲ್ಲಾ ಪೊಲೀಸ್‌ ಇಲಾಖೆ ವತಿಯಿಂದ ಮಂಗಳವಾರ ಆಯೋಜಿಸಿದ್ದ ಪೊಲೀಸ್‌ ಹುತಾತ್ಮ ದಿನಾಚರಣೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

‘ಪ್ರತಿ ಪೊಲೀಸ್‌ ಅಧಿಕಾರಿ ಜೀವನದಲ್ಲಿ ವಿವಿಧ ಕಷ್ಟದ ಸಂದರ್ಭ ಎದುರಾಗುತ್ತವೆ. ಅವುಗಳನ್ನು ಹೇಗೆ ಎದುರಿಸುತ್ತೇವೆ ಮತ್ತು ಸಂದರ್ಭಕ್ಕೆ ಹೇಗೆ ಪ್ರತಿಕ್ರಿಯಿಸುತ್ತೇವೆ ಎಂಬುದರ ಮೇಲೆ ಅವರ ವೃತ್ತಿಜೀವನ ನಿರ್ಧಾರವಾಗುತ್ತದೆ. ದೇಶದ ರಕ್ಷಣೆಗಾಗಿ ಹುತಾತ್ಮರಾದ ಪೊಲೀಸರ ತ್ಯಾಗ, ಬಲಿದಾನವನ್ನು ಸದಾ ಸ್ಮರಿಸಬೇಕು’ ಎಂದರು.

ADVERTISEMENT

‘ಪೊಲೀಸ್‌ ಇಲಾಖೆಗೆ ಜಿಲ್ಲಾಡಳಿತ ಸದಾ ಪ್ರಾಶಸ್ತ್ಯ ನೀಡುತ್ತ ಬಂದಿದೆ. ನಿಮ್ಮೊಂದಿಗೆ ನಾವು ಸದಾ ಇದ್ದೇವೆ’ ಎಂದು ಹೇಳಿದರು.

ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಅವರು, ಹುತಾತ್ಮ ಪೊಲೀಸರನ್ನು ಸ್ಮರಿಸಿದರು.

ನಗರ ಪೊಲೀಸ್ ಆಯುಕ್ತ ಭೂಷಣ ಬೊರಸೆ, ಉಪ ಆಯುಕ್ತ(ಕಾನೂನು ಮತ್ತು ಸುವ್ಯವಸ್ಥೆ) ನಾರಾಯಣ ಭರಮನಿ, ಹೆಚ್ಚುವರಿ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಆರ್‌.ಬಿ.ಬಸರಗಿ ಇತರರಿದ್ದರು.

ಆಕರ್ಷಕವಾಗಿ ಪಥಸಂಚಲನ ನಡೆಸಿದ ಪೊಲೀಸರು, ಹುತಾತ್ಮರಿಗೆ ಗೌರವ ಸಲ್ಲಿಸಿದರು. ಗಾಳಿಯಲ್ಲಿ ಮೂರು ಸುತ್ತು ಗುಂಡು ಹಾರಿಸಿ ಗೌರವ ಸಮರ್ಪಿಸಲಾಯಿತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.