ADVERTISEMENT

ಬೆಳಗಾವಿ ಲೋಕಸಭಾ ಕ್ಷೇತ್ರ: ‘ಕರಿ’ಯಂದು ಸತೀಶ ಜಾರಕಿಹೊಳಿ ನಾಮಪತ್ರ ಸಲ್ಲಿಕೆ

​ಪ್ರಜಾವಾಣಿ ವಾರ್ತೆ
Published 28 ಮಾರ್ಚ್ 2021, 6:27 IST
Last Updated 28 ಮಾರ್ಚ್ 2021, 6:27 IST
   

ಬೆಳಗಾವಿ: ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆಗೆ ಕಾಂಗ್ರೆಸ್ ಅಭ್ಯರ್ಥಿಯಾಗಿ ಸತೀಶ ಜಾರಕಿಹೊಳಿ ಮಾರ್ಚ್‌ 29ರಂದು ಬೆಳಿಗ್ಗೆ 11ಕ್ಕೆ ನಾಮಪತ್ರ ಸಲ್ಲಿಸಲಿದ್ದಾರೆ.

ಈ ಭಾಗದಲ್ಲಿ, ಹೋಳಿ ಹುಣ್ಣಿಮೆಯ ಮರು ದಿನವನ್ನು (ಸೋಮವಾರ) ‘ಕರಿ’ ಎಂದು ಆಚರಿಸಲಾಗುತ್ತಿದೆ. ಅಂದು ಶುಭ ಕಾರ್ಯ ಮಾಡಲು ಇಲ್ಲಿನ ಬಹುತೇಕರು ಬಯಸುವುದಿಲ್ಲ. ನಾಮಪತ್ರ ಸಲ್ಲಿಕೆಗೆ ಸತೀಶ ಅವರು ಈ ದಿನವನ್ನು ಆಯ್ಕೆ ಮಾಡಿಕೊಂಡಿದ್ದಾರೆ.

‘ಹಿಂದಿನಂತೆಯೇ ಯಾವುದೇ ಆಡಂಬರ, ಮೆರವಣಿಗೆ ಮಾಡದೆ ಅತ್ಯಂತ ಸರಳವಾಗಿ ಪಕ್ಷದ ಮುಖಂಡರೊಂದಿಗೆ ತೆರಳಿ ನಾಮಪತ್ರ ಸಲ್ಲಿಸಲು ನಿರ್ಧರಿಸಲಾಗಿದೆ. ಹೀಗಾಗಿ, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬಾರದು’ ಎಂದು ಕೋರಿದ್ದಾರೆ.

ADVERTISEMENT

‘ಯಮಕನಮರಡಿ ವಿಧಾನಸಭಾ ಕ್ಷೇತ್ರದ ಚುನಾವಣೆ ವೇಳೆ ರಾಹುಕಾಲದಲ್ಲಿ ನಾಮಪತ್ರ ಸಲ್ಲಿಸಿದ್ದೆ. ಕರಿ ದಿನವೆಂದರೆ ಇಡೀ ದಿನ ರಾಹುಕಾಲ ಇದ್ದಂತೆಯೇ. ಅದರಲ್ಲೆಲ್ಲಾ ನನಗೆ ನಂಬಿಕೆ ಇಲ್ಲ. ಒಳ್ಳೆಯ ಕೆಲಸ ಮಾಡಿದರೆ ಒಳ್ಳೆಯ ಕಾಲ. ಕೆಟ್ಟ ಕೆಲಸ ಮಾಡಿದರೆ ಕೆಟ್ಟ ಕಾಲವಷ್ಟೆ’ ಎಂದು ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.