ಬೆಳಗಾವಿ: ‘ಮಹಾನಗರ ಪಾಲಿಕೆ ಚುನಾವಣೆಯ ಮತದಾನ ಹಾಗೂ ಮತ ಎಣಿಕೆ ಸಂದರ್ಭದಲ್ಲಿ ಯಾವುದೇ ರೀತಿಯ ಲೋಪದೋಷಗಳು ಉಂಟಾಗದಂತೆ ಎಚ್ಚರ ವಹಿಸಬೇಕು’ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚಿಸಿದರು.
ಚುನಾವಣಾ ಕಾರ್ಯಕ್ಕೆ ನಿಯೋಜಿತರಾಗಿರುವ ಅಧಿಕಾರಿಗಳು ಹಾಗೂ ಸಿಬ್ಬಂದಿಯ ತರಬೇತಿ ಕೇಂದ್ರಗಳಿಗೆ ಸೋಮವಾರ ಭೇಟಿ ನೀಡಿ ಅವರು ಮಾತನಾಡಿದರು.
‘ವಿದ್ಯುನ್ಮಾನ ಮತಯಂತ್ರಗಳ ಬಳಕೆ, ಮತದಾರರ ಪಟ್ಟಿ ಪರಿಶೀಲನೆ ಹಾಗೂ ಮತದಾನ ಪ್ರಕ್ರಿಯೆ ಕುರಿತು ಎಲ್ಲ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ನುರಿತ ತರಬೇತುದಾರರಿಂದ ಮಾರ್ಗದರ್ಶನ ಕೊಡಿಸಲಾಗುತ್ತಿದೆ. ಯಾವುದೇ ಸಂದೇಹಗಳಿದ್ದರೆ ಈ ಅವಧಿಯಲ್ಲಿ ಪರಿಹರಿಸಿಕೊಳ್ಳಬೇಕು. ಚುನಾವಣೆ ಸಂದರ್ಭದಲ್ಲಿ ಅನಗತ್ಯ ಗೊಂದಲ ಮಾಡಿಕೊಳ್ಳಬಾರದು’ ಎಂದು ತಿಳಿಸಿದರು.
‘ಈಗಾಗಲೇ ಹಲವು ಸುತ್ತಿನ ತರಬೇತಿ ಕಾರ್ಯಕ್ರಮಗಳನ್ನು ನಡೆಸಲಾಗಿದೆ. ಆದಾಗ್ಯೂ ಏನೇ ಸಂದೇಹ ಅಥವಾ ಸಮಸ್ಯೆಗಳಿದ್ದರೆ ಹಿರಿಯ ಅಧಿಕಾರಿಗಳು ಅಥವಾ ತರಬೇತುದಾರರಿಂದ ಸಲಹೆಗಳನ್ನು ಪಡೆದುಕೊಳ್ಳಬಹುದು’ ಎಂದರು.
ಚುನಾವಣಾ ಸಿಬ್ಬಂದಿ ತರಬೇತಿ ಕೇಂದ್ರಗಳಾಗಿರುವ ಸೇಂಟ್ ಜೋಸೆಫ್, ಸೇಂಟ್ ಪಾಲ್ ಹಾಗೂ ಸೇಂಟ್ ಮೇರಿ ಶಾಲೆಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಪಾಲಿಕೆ ಉಪ ಆಯುಕ್ತೆ ಲಕ್ಷ್ಮಿ ನಿಪ್ಪಾಣಿಕರ ಹಾಗೂ ಆರೋಗ್ಯಾಧಿಕಾರಿ ಡಾ.ಸಂಜಯ ಡುಮ್ಮಗೋಳ ಇದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.