ADVERTISEMENT

ಕೋವಿಡ್ 3ನೇ ಅಲೆ ನಿರ್ವಹಣೆಗೆ ಸಜ್ಜಾಗಿ

ಅಧಿಕಾರಿಗಳಿಗೆ ಶಾಸಕ ಬಾಲಚಂದ್ರ ಸೂಚನೆ

​ಪ್ರಜಾವಾಣಿ ವಾರ್ತೆ
Published 16 ಜುಲೈ 2021, 15:48 IST
Last Updated 16 ಜುಲೈ 2021, 15:48 IST
ಗೋಕಾಕದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾತನಾಡಿದರು
ಗೋಕಾಕದಲ್ಲಿ ಶುಕ್ರವಾರ ನಡೆದ ಅಧಿಕಾರಿಗಳ ಸಭೆಯಲ್ಲಿ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮಾತನಾಡಿದರು   

ಗೋಕಾಕ (ಬೆಳಗಾವಿ ಜಿಲ್ಲೆ): ‘ಸಂಭವನೀಯ ಕೋವಿಡ್ 3ನೇ ಹಾಗೂ ಪ್ರವಾಹ ಪರಿಸ್ಥಿತಿ ನಿಭಾಯಿಸಲು ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಬೇಕು’ ಎಂದು ಕೆಎಂಎಫ್ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸೂಚಿಸಿದರು.

ಇಲ್ಲಿನ ತಾ.ಪಂ. ಸಭಾಂಗಣದಲ್ಲಿ ಶುಕ್ರವಾರ ನಡೆದ ಗೋಕಾಕ ಹಾಗೂ ಮೂಡಲಗಿ ತಾಲ್ಲೂಕು ಮಟ್ಟದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಜುಲೈ ಕೊನೆಯಿಂದ ಆಗಸ್ಟ್ ಅಂತ್ಯದವರೆಗೆ ಪ್ರವಾಹ ಭೀತಿ ಎದುರಾಗುವ ಸಾಧ್ಯತೆ ಇದೆ. ಸಾರ್ವಜನಿಕರಿಗೆ ಯಾವುದೇ ರೀತಿಯ ತೊಂದರೆ ಆಗದಂತೆ ಅಧಿಕಾರಿಗಳು ಸಿದ್ಧತೆ ಮಾಡಿಕೊಳ್ಳಬೇಕು. ಈಗಿನಿಂದಲೇ ಕಾರ್ಯಪ್ರವೃತ್ತರಾಗಬೇಕು. ಅವಘಡಗಳಿಗೆ ಅವಕಾಶ ಕೊಡಬಾರದು’ ಎಂದು ನಿರ್ದೇಶನ ನೀಡಿದರು.

ADVERTISEMENT

‘ನೆರೆಯ ಮಹಾರಾಷ್ಟ್ರ, ಕೇರಳ ಮತ್ತು ತಮಿಳುನಾಡು ರಾಜ್ಯಗಳಲ್ಲಿ ಸಂಭವನೀಯ ಕೊರೊನಾ ಮೂರನೇ ಅಲೆ ಹರಡುತ್ತಿರುವ ಕುರಿತು ವರದಿಯಾಗುತ್ತಿದೆ. ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳಾದ್ಯಂತ ಅಂತಹ ಅಲೆ ಪಸರಿಸದಂತೆ ತಡೆಯಲು ಜನಸಾಮಾನ್ಯರಲ್ಲಿ ಜಾಗೃತಿ ಮೂಡಿಸಬೇಕು’ ಎಂದು ತಿಳಿಸಿದರು.

‘ನಗರದ ಸರ್ಕಾರಿ ಆಸ್ಪತ್ರೆ ಆವರಣದಲ್ಲಿ ಆಮ್ಲಜನಕ ಉತ್ಪಾದನಾ ಘಟಕ ಸ್ಥಾಪನೆಗೆ ಕ್ರಮ ಜರುಗಿಸಲಾಗಿದೆ. ಇಷ್ಟರಲ್ಲೇ ಇನ್ನೊಂದು ಘಟಕ ಮಂಜೂರಾಗಲಿದೆ. ಏಕ ಕಾಲಕ್ಕೆ 200 ರೋಗಿಗಳಿಗೆ ಆಮ್ಲಜನಕ ಪೂರೈಕೆಯೊಂದಿಗೆ ಚಿಕಿತ್ಸೆ ನೀಡಬಹುದಾಗಿದೆ ಎಂದು ವಿವರಿಸಿದರು.

‘ಶಾಸಕರ ನಿಧಿಯಿಂದ ಗೋಕಾಕ ಮತ್ತು ಮೂಡಲಗಿ ತಾಲ್ಲೂಕುಗಳಿಗೆ ಅಗತ್ಯ ಆಂಬ್ಯುಲೆನ್ಸ್‌ಗಳ ವ್ಯವಸ್ಥೆ ಮಾಡಲಾಗಿದೆ. ತುರ್ತು ಚಿಕಿತ್ಸೆ ನೀಡಲು ಅವುಗಳಲ್ಲಿ ಆಮ್ಲಜನಕ ಯಂತ್ರ ವ್ಯವಸ್ಥೆಯನ್ನೂ ಕಲ್ಪಿಸಲಾಗುತ್ತಿದೆ. ಅಲೆ ಎದುರಿಸಲು ಆರೋಗ್ಯ ಇಲಾಖೆ ಸಮಗ್ರವಾಗಿ ಸನ್ನದ್ಧವಾಗಬೇಕು’ ಎಂದು ತಿಳಿಸಿದರು.

ಟಿಎಚ್‌ಒ ಡಾ.ಮುತ್ತಣ್ಣ ಕೊಪ್ಪದ, ಡಾ.ಆರ್.ಎಸ್. ಬೆಣಚಿನಮರಡಿ, ಗೋಕಾಕ ತಹಶೀಲ್ದಾರ್ ಪ್ರಕಾಶ ಹೊಳೆಪ್ಪಗೋಳ, ಮೂಡಲಗಿ ತಹಶೀಲ್ದಾರ್ ಡಿ.ಜಿ. ಮಹಾತ್, ಎಸ್.ಐ. ನಾಗರಾಜ ಖಿಲಾರೆ ಪಾಲ್ಗೊಂಡಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.