
ರಾಯಬಾಗ: ಕೇಂದ್ರ ಗೃಹಸಚಿವ ಅಮಿತ್ ಷಾ ವಿರುದ್ದ ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಗ್ರಾಮೀಣಭಿವೃದ್ದಿ ಮತ್ತು ಪಂಚಾಯತ್ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೂಡಲೇ ಕ್ಷಮೆ ಕೇಳಬೇಕು ಎಂದು ಶಾಸಕ ಡಿ ಎಂ ಐಹೊಳೆ ಆಗ್ರಹಿಸಿದ್ದಾರೆ.
ಮಂಗಳವಾರ ಪಟ್ಟಣದ ಸ್ವಗೃಹದಲ್ಲಿ ಸುದ್ಧಿಗೋಷ್ಠಿ ನಡೆಸಿದ ಅವರು, ಸಂಸತ್ ಹಾಗೂ ವಿಧಾನಸಭೆ ಎಂಬುದು ಜನತಂತ್ರದ ಪವಿತ್ರ ವೇದಿಕೆ. ಅಲ್ಲಿ ಬಳಸುವ ಪ್ರತಿಯೊಂದು ಪದಕ್ಕೂ ಜವಾಬ್ದಾರಿ ಇರಬೇಕು. ರಾಜಕೀಯ ಭಿನ್ನಾಭಿಪ್ರಾಯಗಳಿದ್ದರೂ ಸಹ ಕೇಂದ್ರ ಗೃಹಸಚಿವರಂತಹ ಸಂವಿಧಾನಾತ್ಮಕ ಹುದ್ದೆ ವಹಿಸಿಕೊಂಡಿರುವ ವ್ಯಕ್ತಿಗಳ ಬಗ್ಗೆ ಅಸಭ್ಯ, ಅವಮಾನಕಾರಿ ಪದ ಬಳಕೆ ಮಾಡುವುದು ಸಂಸದೀಯ ಮೌಲ್ಯಗಳಿಗೆ ಧಕ್ಕೆ ತರುವಂತದ್ದು ಎಂದು ಹೇಳಿದರು.
‘ಅಮಿತ್ ಷಾ ವಿರುದ್ಧ ಆಕ್ಷೇಪಾರ್ಹ ಪದ ಬಳಕೆ ಮಾಡುವ ಮೂಲಕ ಸಚಿವ ಪ್ರಿಯಾಂಕ್ ಖರ್ಗೆ ಅವರು ಕೇವಲ ವ್ಯಕ್ತಿಯನ್ನಷ್ಟೇ ಅಲ್ಲ, ದೇಶದ ಸಂವಿಧಾನಾತ್ಮಕ ವ್ಯವಸ್ಥೆಯನ್ನೇ ಅವಮಾನಿಸಿದ್ದಾರೆ. ಈ ಕೂಡಲೇ ಪ್ರಿಯಾಂಕ ಖರ್ಗೆ ತಮ್ಮ ಹೇಳಿಕೆಯನ್ನು ಹಿಂಪಡೆದು ಕ್ಷಮೆ ಕೇಳದಿದ್ದರೆ ಜಿಲ್ಲೆಯಾದ್ಯಂತ ಹೋರಾಟ ನಡೆಸಲಾಗುವುದು’ ಎಂದು ಅವರು ಎಚ್ಚರಿಕೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.