ADVERTISEMENT

ಎಂಜಿನಿಯರಿಂಗ್ ವಿದ್ಯಾರ್ಥಿಗಳಿಗೆ ಕೌಶಲ ಅಗತ್ಯ

​ಪ್ರಜಾವಾಣಿ ವಾರ್ತೆ
Published 22 ಮೇ 2019, 12:51 IST
Last Updated 22 ಮೇ 2019, 12:51 IST
ಬೆಳಗಾವಿಯ ಡಾ.ಎಂ.ಎಸ್. ಶೇಷಗಿರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ನಡೆದ ಪ್ರಾಜೆಕ್ಟ್‌ಗಳ ಪ್ರದರ್ಶನವನ್ನು ತುಮಕೂರಿನ ಚನ್ನಬಸವೇಶ್ವರ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಚಾರ್ಯ ಡಿ.ಎಸ್. ಸುರೇಶ ಉದ್ಘಾಟಿಸಿದರು
ಬೆಳಗಾವಿಯ ಡಾ.ಎಂ.ಎಸ್. ಶೇಷಗಿರಿ ಎಂಜಿನಿಯರಿಂಗ್ ಕಾಲೇಜಿನಲ್ಲಿ ಬುಧವಾರ ನಡೆದ ಪ್ರಾಜೆಕ್ಟ್‌ಗಳ ಪ್ರದರ್ಶನವನ್ನು ತುಮಕೂರಿನ ಚನ್ನಬಸವೇಶ್ವರ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಚಾರ್ಯ ಡಿ.ಎಸ್. ಸುರೇಶ ಉದ್ಘಾಟಿಸಿದರು   

ಬೆಳಗಾವಿ: ‘ಇಂದಿನ ತಾಂತ್ರಿಕ ಯುಗದಲ್ಲಿ ಎಂಜಿನಿಯರಿಂಗ್‌ ವಿದ್ಯಾರ್ಥಿಗಳು ಪ್ರಾಯೋಗಿಕ ಜ್ಞಾನ ಮತ್ತು ಕೌಶಲ ಹೊಂದುವುದು ಅತ್ಯಂತ ಅವಶ್ಯವಾಗಿದೆ’ ಎಂದು ತುಮಕೂರಿನ ಚನ್ನಬಸವೇಶ್ವರ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಚಾರ್ಯ ಡಿ.ಎಸ್. ಸುರೇಶ ಹೇಳಿದರು.

ಇಲ್ಲಿನ ಕೆಎಲ್‌ಇ–ಡಾ.ಎಂ.ಎಸ್. ಶೇಷಗಿರಿ ಎಂಜಿನಿಯರಿಂಗ್‌ ಮತ್ತು ತಾಂತ್ರಿಕ ಕಾಲೇಜಿನಲ್ಲಿ ಬುಧವಾರ ಆಯೋಜಿಸಿದ್ದ ಪ್ರಾಜೆಕ್ಟ್‌ಗಳ ಪ್ರದರ್ಶನ ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ತಾವೇ ರೂಪಿಸಿದ ಪ್ರಾಜೆಕ್ಟ್‌ಗಳನ್ನು ಪ್ರದರ್ಶಿಸುವುದರಿಂದ ಪ್ರಾಯೋಗಿಕ ಜ್ಞಾನ ಹಾಗೂ ಕೌಶಲ ವೃದ್ಧಿಯಾಗುತ್ತದೆ’ ಎಂದು ತಿಳಿಸಿದರು.

ADVERTISEMENT

ಬೀದರ್‌ ಬಸವಕಲ್ಯಾಣ ಎಂಜಿನಿಯರಿಂಗ್‌ ಕಾಲೇಜಿನ ಪ್ರಾಚಾರ್ಯ ಡಾ.ಎಸ್.ಬಿ. ಕಿವಡೆ ಮಾತನಾಡಿ, ‘ಪ್ರಾಜೆಕ್ಟ್‌ ಪ್ರದರ್ಶನ ವಿದ್ಯಾರ್ಥಿಗಳ ಆಂತರಿಕ ಕೌಶಲ ಪ್ರದರ್ಶನಕ್ಕೆ ಉತ್ತಮ ವೇದಿಕೆಯಾಗಿದೆ. ಜನಸಾಮಾನ್ಯರಿಗೆ ಉಪಯುಕ್ತವಾಗುವಂತಹ ಯೋಜನೆ ಸಿದ್ಧಪಡಿಸುವುದರಿಂದ ಜೀವನದಲ್ಲಿ ಯಶಸ್ವಿ ಉದ್ಯಮಿಯಾಗಲು ಸಾಧ್ಯವಿದೆ. ಇದಕ್ಕೆ ಯೋಗ ಗುರು ಬಾಬಾ ರಾಮದೇವ್ ನಿದರ್ಶನವಾಗಿದ್ದಾರೆ’ ಎಂದರು.

ಅಧ್ಯಕ್ಷತೆ ವಹಿಸಿದ್ದ ಪ್ರಾಚಾರ್ಯ ಡಾ.ಬಸವರಾಜ ಕಟಗೇರಿ ಮಾತನಾಡಿ, ‘ವಿವಿಧ ವಿಭಾಗಗಳ ವಿದ್ಯಾರ್ಥಿಗಳು ಸಿದ್ಧಪಡಿಸಿದ, ರಾಷ್ಟ್ರ ಹಾಗೂ ರಾಜ್ಯ ಮಟ್ಟದಲ್ಲಿ ಪ್ರಶಸ್ತಿ ಪಡೆದ 200 ಯೋಜನೆಗಳನ್ನು ಪ್ರದರ್ಶಿಸಲಾಗಿದೆ. ಬಿ.ಇ. ಪ್ರಥಮ ವರ್ಷದ ವಿದ್ಯಾರ್ಥಿಗಳು ಭಾಗವಹಿಸಿರುವುದು ವಿಶೇಷ. ಕಂಕಣವಾಡಿ ಆಯುರ್ವೇದ ಕಾಲೇಜಿಗೆ ನಮ್ಮ ವಿದ್ಯಾರ್ಥಿಗಳು ಸಿದ್ಧಪಡಿಸಿದ 20 ಪ್ರಾಜೆಕ್ಟ್‌ಗಳು ಕೂಡ ಇವೆ’ ಎಂದು ಮಾಹಿತಿ ನೀಡಿದರು.

ಪ್ರದರ್ಶನದ ಸಂಚಾಲಕ ಡಾ.ರಾಜಕುಮಾರ ರಾಯ್ಕರ ಸ್ವಾಗತಿಸಿದರು. ಡಾ.ಮಹೇಶ ಕಾಮೋಜಿ ಪರಿಚಯಿಸಿದರು. ಪ್ರೊ.ವರ್ಷಾ ಗೋಕಾಕ ನಿರೂಪಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.