ADVERTISEMENT

ಎಂಇಎಸ್‌ನಿಂದ ಹುತಾತ್ಮ ದಿನಾಚರಣೆ: ಅನುಮತಿ ನೀಡದಂತೆ ಒತ್ತಾಯ

​ಪ್ರಜಾವಾಣಿ ವಾರ್ತೆ
Published 14 ಜನವರಿ 2020, 13:27 IST
Last Updated 14 ಜನವರಿ 2020, 13:27 IST
ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಯವರು ಜ. 17ರಂದು ಆಯೋಜಿಸಲು ಉದ್ದೇಶಿಸಿರುವ ಹುತಾತ್ಮರ ದಿನಾಚರಣೆಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು
ಬೆಳಗಾವಿಯಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿ (ಎಂಇಎಸ್)ಯವರು ಜ. 17ರಂದು ಆಯೋಜಿಸಲು ಉದ್ದೇಶಿಸಿರುವ ಹುತಾತ್ಮರ ದಿನಾಚರಣೆಗೆ ಅನುಮತಿ ನೀಡಬಾರದು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನಿ ಬಣದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು   

ಬೆಳಗಾವಿ: ಮಹಾರಾಷ್ಟ್ರ ಏಕೀಕರಣ ಸಮೀತಿಯವರು (ಎಂಇಎಸ್‌) ಜನವರಿ17ರಂದು ಆಯೋಜಿಸಿರುವ ಹುತಾತ್ಮ ದಿನಾಚರಣೆ, ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ಅನುಮತಿ ನೀಡದಂತೆ ಒತ್ತಾಯಿಸಿ ಮಂಗಳವಾರ ಕರ್ನಾಟಕ ರಕ್ಷಣಾ ವೇದಿಕೆ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಸ್ವಾಭಿಮಾನ ಬಣದ ಕಾರ್ಯಕರ್ತರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಿದರು.

ರಾಣಿ ಚನ್ನಮ್ಮ ವೃತ್ತದಿಂದ ಪ್ರತ್ಯೇಕವಾಗಿ ಮೆರವಣಿಗೆ ನಡೆಸಿದರು.

‘ಮಹಾರಾಷ್ಟ್ರದಲ್ಲಿ ಶಿವಸೇನೆ ನೇತೃತ್ವದ ಸಮ್ಮಿಶ್ರ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಗಡಿ ವಿವಾದ ಕೆದಕುತ್ತಿದೆ. ಇದರಿಂದ ಗಡಿಯಲ್ಲಿ ಶಾಂತಿಯನ್ನು ಕದಡುವ ಪ್ರಯತ್ನಗಳು ನಡೆಯುತ್ತಿವೆ. ಇದಕ್ಕೆಪ್ರಚೋದನೆ ನೀಡುವ ಉದ್ದೇಶದಿಂದ ಎಂಇಎಸ್ ಮುಖಂಡರು ಹುತಾತ್ಮ ದಿನಾಚರಣೆ ಹೆಸರಿನಲ್ಲಿ ನಾಡ ವಿರೋಧಿ ಕಾರ್ಯಕ್ರಮ ಮಾಡುತ್ತಿದ್ದಾರೆ. ಅದಕ್ಕೆ ಅನುಮತಿ ಕೊಡಬಾರದು’ ಎಂದು ಒತ್ತಾಯಿಸಿದರು.

ADVERTISEMENT

ಕರವೇ ಜಿಲ್ಲಾ ಘಟಕದ ಅಧ್ಯಕ್ಷ ಮಹಾದೇವ ತಳವಾರ, ‘ಎಂಇಎಸ್‌ನವರು ಮರಾಠಿ ಸಾಹಿತ್ಯ ಸಮ್ಮೇಳನಕ್ಕೆ ಮಹಾರಾಷ್ಟ್ರದ ಸಾಹಿತಿಗಳನ್ನು ಕರೆತಂದು ಗಡಿ ಭಾಗದಲ್ಲಿ ಶಾಂತಿ ಹಾಳು ಮಾಡುತ್ತಿದ್ದಾರೆ. ಅವರ ಸಾಹಿತ್ಯ ಸಮ್ಮೇಳನಕ್ಕೆ ನಮ್ಮ ವಿರೋಧವಿಲ್ಲ. ಕರ್ನಾಟಕದಲ್ಲೇ ಅನೇಕ ಮರಾಠಿ ಸಾಹಿತಿಗಳಿದ್ದಾರೆ. ಅವರನ್ನು ಕರೆತಂದು ಸಾಹಿತ್ಯ ಸಮ್ಮೇಳನ ನಡೆಸಬೇಕು. ಮಹಾರಾಷ್ಟ್ರ ಸಾಹಿತಿಗಳು ಮತ್ತು ರಾಜಕಾರಣಿಗಳಿಗೆ ಅವಕಾಶ ನೀಡಬಾರದು’ ಎಂದು ಒತ್ತಾಯಿಸಿದರು.

ಕರವೇ ಸ್ವಾಭಿಮಾನಿ ಬಣದ ರಾಜ್ಯ ಸಂಘಟನಾ ಕಾರ್ಯದರ್ಶಿ ಯಶೋಧಾ ಬಿರಡೆ, ಮುಖಂಡರಾದ ದೀಪಕ ಗುಡಗನಟ್ಟಿ, ಗಣೇಶ ರೊಕಡೆ, ಹೊಳೆಪ್ಪ ಸುಲದಾಳ, ದೇವೇಂದ್ರ ತಳವಾರ, ಲಗಮಣ್ಣ ಎಚ್.ಎನ್., ಸಾವಂತ ಹೊಸಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.