ಬೆಳಗಾವಿ: ಹೈದರಾಬಾದ್ ಕರ್ನಾಟಕ ವಿಭಾಗದ ಪದವೀಧರ ಹಿರಿಯ ಪ್ರಾಥಮಿಕ ಶಿಕ್ಷಕರನ್ನು 371 (ಜೆ) ಅಡಿಯಲ್ಲಿ ಜೇಷ್ಠತೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವುದಕ್ಕೆ ಸಂಬಂಧಿಸಿದಂತೆ 2ನೇ ಪಟ್ಟಿ ಬಿಡುಗಡೆ ಮಾಡುವಂತೆ ಆಗ್ರಹಿಸಿ ಕಲಬುರಗಿಯ ಹೈದರಾಬಾದ್ ಕರ್ನಾಟಕ ಪದವೀಧರ ನಿರುದ್ಯೋಗಿ ಶಿಕ್ಷಕರ ಸಂಘದವರು ತಾಲ್ಲೂಕಿನ ಸುವರ್ಣ ವಿಧಾನಸೌಧ ಬಳಿಯ ಸುವರ್ಣ ಗಾರ್ಡನ್ನಲ್ಲಿ ಧರಣಿ ನಡೆಸಿದರು.
ಪದವೀಧರ ಹಿರಿಯ ಪ್ರಾಥಮಿಕ ಶಿಕ್ಷಕರ (6ರಿಂದ 8ನೇ ತರಗತಿ) ನೇಮಕ ಪ್ರಕ್ರಿಯೆ ನಡೆಯುತ್ತಿದೆ. ಇದರಲ್ಲಿ ಹೈ.ಕ. ಭಾಗಕ್ಕೆ 3966 ಹುದ್ದೆಗಳನ್ನು ಅಧಿಸೂಚಿಸಲಾಗಿದೆ. ಈ ಅಧಿಸೂಚನೆ ಪ್ರಕಾರ, ಇವು ಗಣಿತ, ವಿಜ್ಞಾನ, ಇಂಗ್ಲಿಷ್ ಹಾಗೂ ಸಮಾಜವಿಜ್ಞಾನ ಶಿಕ್ಷಕರ ಹುದ್ದೆಗಳಾಗಿವೆ. ಈ ಪೈಕಿ ಗಣಿತ, ವಿಜ್ಞಾನ ಹಾಗೂ ಇಂಗ್ಲಿಷ್ ಹುದ್ದೆಗಳ ಸಂಖ್ಯೆ ಹೆಚ್ಚಾಗಿದೆ. ಆದರೆ, ಆ ಭಾಗದಲ್ಲಿ ಟಿಇಟಿ ಪಾಸಾದವರ ಸಂಖ್ಯೆ ಅಧಿಸೂಚಿಸಿದ ಹುದ್ದೆಗಳಿಗೆ ಸಂಖ್ಯೆಗಳಿಗಿಂತ ಕಡಿಮೆ ಇದೆ. ಹೀಗಾಗಿ, ಆ ಭಾಗದಲ್ಲಿ ಶಿಕ್ಷಣದ ಪ್ರಗತಿಯಲ್ಲಿ ಕುಂಠಿತವಾಗುವ ಸಾಧ್ಯತೆ ಇದೆ ಎಂದು ತಿಳಿಸಿದರು.
371 (ಜೆ) ಅನ್ವಯ ಮಾಡಿಕೊಳ್ಳಲಾದ ನೇಮಕಾತಿಯಲ್ಲಿ ಉಳಿದಿರುವ ಇಂಗ್ಲಿಷ್, ಗಣಿತ ಹಾಗೂ ವಿಜ್ಞಾನ ಅಭ್ಯರ್ಥಿಗಳನ್ನು ಜೇಷ್ಠತೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಅಡ್ವೊಕೇಟ್ ಜನರಲ್ ಅವರು ಡಿಪಿಇಆರ್ಗೆ ಅನುಮತಿ ನೀಡಿದ್ದರೂ ಇಲಾಖೆ ಮೀನಮೇಷ ಎಣಿಸುತ್ತಿದೆ. ಸರ್ಕಾರ ಈ ನಿಟ್ಟಿನಲ್ಲಿ ಗಮನಹರಿಸಬೇಕು. ಎರಡನೇ ಪಟ್ಟಿಯನ್ನು ಶೀಘ್ರವೇ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಸಿ.ಜಿ. ಹೊಸಮನಿ ನೇತೃತ್ವ ವಹಿಸಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.