ADVERTISEMENT

ರಮೇಶ ಜಾರಕಿಹೊಳಿ‌ ಆಪ್ತನ ಮೇಲೆ ಚನ್ನರಾಜ ಹಟ್ಡಿಹೊಳಿ ಆಪ್ತರಿಂದ ಹಲ್ಲೆ: ಆರೋಪ

ಆಸ್ಪತ್ರೆಗೆ ದಾಖಲಾದ ಬಿಜೆಪಿ ಮುಖಂಡ, ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಭೇಟಿ

​ಪ್ರಜಾವಾಣಿ ವಾರ್ತೆ
Published 4 ಡಿಸೆಂಬರ್ 2023, 14:35 IST
Last Updated 4 ಡಿಸೆಂಬರ್ 2023, 14:35 IST
<div class="paragraphs"><p>ಪೃಥ್ವಿ ಸಿಂಗ್</p></div>

ಪೃಥ್ವಿ ಸಿಂಗ್

   

ಬೆಳಗಾವಿ: ಶಾಸಕ ರಮೇಶ ಜಾರಕಿಹೊಳಿ ಅವರ ಆಪ್ತ, ಬಿಜೆಪಿ‌ ಮುಖಂಡ ಪೃಥ್ವಿ ಸಿಂಗ್ ಅವರ ಮೇಲೆ ಚಾಕುವಿನಿಂದ ಹಲ್ಲೆ ಮಾಡಲಾಗಿದೆ. ಹಲ್ಲೆ ಮಾಡಿದ್ದು ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಸಹೋದರ ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಬೆಂಬಲಿಗರು ಎಂದು ದೂರಲಾಗಿದೆ.

‘ಬಿಜೆಪಿ ಕಾರ್ಯಕರ್ತನ ಮೇಲೆ ಮಾರಣಾಂತಿಕ ಹಲ್ಲೆಯಾಗಿದೆ. ಜಯನಗರದಲ್ಲಿರುವ ಪೃಥ್ವಿ ಸಿಂಗ್ ಅವರ ಮನೆಗೆ ಬಂದ, ಚನ್ನರಾಜ ಹಟ್ಟಿಹೊಳಿ ಅವರ ಐದಾರು ಬೆಂಬಲಿಗರು ದಾಳಿ ಮಾಡಿದ್ದಾರೆ. ಏಕಾಏಕಿ ಬಂದು ಹೊರಗೆ ಕರೆದೊಯ್ದು ಹಲ್ಲೆ ಮಾಡಿದ್ದಾರೆ. ಪೃಥ್ವಿ ಅವರನ್ನು ಕೆಎಲ್ಇ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಬಿಜೆಪಿ ಮುಖಂಡರು ಅಸ್ಪತ್ರೆ ಎದುರಿಗೆ ಮಾಹಿತಿ‌‌ ನೀಡಿದರು.

ADVERTISEMENT

ಚನ್ನರಾಜ ಅವರ ಆಪ್ತರು ಪೃಥ್ವಿ ಸಿಂಗ್ ಜೊತೆಗೆ ಮಾತನಾಡುತ್ತಿರುವುದು ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಘಟನೆ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಗಾಯಾಳು ಪೃಥ್ವಿ ಸಿಂಗ್ ಪುತ್ರ ಜಸ್ವೀರ್ ಸಿಂಗ್, ‘ಸಂಜೆ 4.50ರ ಸುಮಾರಿಗೆ ನಮ್ಮ ಮನೆಗೆ ಬಂದ ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರ ಆಪ್ತ ಸಹಾಯಕ ಮತ್ತು ಅಂಗರಕ್ಷಕರು ಹೊರಗೆ ಕರೆದುಕೊಂಡು ಬಂದರು. ಆಗ ಫೋನ್ ಮಾಡಿ ಚನ್ನರಾಜ‌ ಬೈಯುತ್ತಿದ್ದರು. ಹೊರಗೆ ಬಾ ಎಂದು ಬೆದರಿಕೆ ಹಾಕಿದರು. ಹೊರಗೆ ಬರುತ್ತಿದ್ದಂತೆ ಐದಾರು ಜನರು ಕೂಡಿಕೊಂಡು ಕಟ್ಟರ್ ನಿಂದ ಕೈ, ಹೊಟ್ಟೆ, ಬೆನ್ನಿಗೆ ಇರಿದು ಹಲ್ಲೆ ಮಾಡಿದ್ದಾರೆ. ರಕ್ತ ಬರುತ್ತಿತ್ತು. ಅಲ್ಲದೇ ಪ್ರಜ್ಞೆ ತಪ್ಪಿದ ತಂದೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈಗ ಅವರ ಸ್ಥಿತಿ ಹೇಗಿದೆ ಎಂದು ನನಗೂ ಗೊತ್ತಿಲ್ಲ. ಯಾವ ಕಾರಣಕ್ಕೆ ಹಲ್ಲೆ ಮಾಡಿದ್ದಾರೆ ಎಂಬುದೂ ಗೊತ್ತಿಲ್ಲ‘ ಎಂದರು.

ಗಾಯಾಳು ಪೃಥ್ವಿ ಸಿಂಗ್ ಕೂಡ ವಿಡಿಯೊ ಹೇಳಿಕೆ ಬಿಡುಗಡೆ ಮಾಡಿದ್ದು, ‘ನನ್ನ ಮನೆಗೆ ಬಂದ ಚನ್ನರಾಜ ಹಟ್ಟಿಹೊಳಿ ಚಾಕುವಿನಿಂದ ಹಲ್ಲೆ ಮಾಡಿದ್ದಾರೆ‘ ಎಂದು ಆರೋಪಿಸಿದ್ದಾರೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ, ಜಿಲ್ಲಾ‌ ಘಟಕಗಳ ಅಧ್ಯಕ್ಷರಾದ ಸಂಜಯ ಪಾಟೀಲ, ಅನಿಲ ಬೆನಕೆ, ವಿಧಾನ ಪರಿಷತ್ ಮಾಜಿ ಸದಸ್ಯ ಮಹಾಂತೇಶ ಕವಟಗಿಮಠ, ಎಂ.ಬಿ.ಜೀರಲಿ ಅವರು ಆಸ್ಪತ್ರೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದರು.

ಎಪಿಎಂಸಿ ಠಾಣೆಯ ಪೊಲೀಸರೂ ಸ್ಥಳಕ್ಕೆ ಧಾವಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.