ಬೆಳಗಾವಿ: ನಗರವೂ ಸೇರಿದಂತೆ ಜಿಲ್ಲೆಯ ವಿವಿಧೆಡೆ ಮಂಗಳವಾರ ಕೆಲಕಾಲ ಗುಡುಗು–ಸಿಡಿಲು ಸಹಿತ ಮಳೆಯಾಗಿದೆ.
ಚಿಕ್ಕೋಡಿ ಹಾಗೂ ಗೋಕಾಕ ತಾಲ್ಲೂಕಿನ ಘಟಪ್ರಭಾದಲ್ಲಿ ಬಿರುಗಾಳಿ, ಆಲಿಕಲ್ಲು ಸಹಿತ ಜೋರು ಮಳೆ ಬಿದ್ದಿದೆ. ಎಂ.ಕೆ. ಹುಬ್ಬಳ್ಳಿ ಹಾಗೂ ಕಿತ್ತೂರಿನಲ್ಲೂ ಗುಡುಗುಸಹಿತ ಮಳೆಯಾಗಿದೆ.
ಚನ್ನಮ್ಮನ ಕಿತ್ತೂರಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿ ನಿಲ್ಲಿಸಿದ್ದ ಕಾರಿನ ಮೇಲೆ ಮರವೊಂದು ಉರುಳಿ ಬಿದ್ದು ಕಾರು ಜಖಂಗೊಂಡಿದೆ.
ಚಿಕ್ಕೋಡಿ ಪಟ್ಟಣ ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲಿ ಮಂಗಳವಾರ ಸಂಜೆ ಅರ್ಧ ಗಂಟೆಗೂ ಹೆಚ್ಚು ಕಾಲ ಬಿರುಗಾಳಿ ಮತ್ತು ಆಲಿಕಲ್ಲು ಸಹಿತ ಜೋರು ಮಳೆಯಾಗಿದೆ. ಚಿಕ್ಕೋಡಿ ಮತ್ತು ಹಿರೇಕೋಡಿಯಲ್ಲಿ ಭಾರಿ ಗಾಳಿಯೊಂದಿಗೆ ಮಳೆ ಸುರಿಯಿತು. ಕೇರೂರ, ಯಕ್ಸಂಬಾ, ನನದಿವಾಡಿ, ಜೋಡಕುರಳಿ, ಚಿಂಚಣಿ ಗ್ರಾಮಗಳಲ್ಲಿ ಸಾಧಾರಣ ಮಳೆಯಾಗಿದೆ. ಕೆಲವೆಡೆ ಗಿಡಗಳು ನೆಲಕ್ಕುರುಳಿ, ವಾಹನಗಳ ಸಂಚಾರಕ್ಕೆ ತೊಂದರೆಯಾಯಿತು. ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.
ಭಾರಿ ಗಾಳಿ, ಮಳೆ: ಮರ ಬಿದ್ದು ಕಾರ್ ಜಖಂ
ಚನ್ನಮ್ಮನ ಕಿತ್ತೂರು: ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಮಂಗಳವಾರ ಭಾರಿ ಗಾಳಿ ಸಹಿತ ಮಳೆಯಾಗಿದೆ.
ಇಲ್ಲಿನ ತಹಶೀಲ್ದಾರ್ ಕಚೇರಿ ಆವರಣದಲ್ಲಿ ನಿಲ್ಲಿಸಿದ್ದ ಕಾರ್ ಮೇಲೆ ಮರವೊಂದು ಉರುಳಿ ಬಿದ್ದು ಕಾರು ಜಖಂಗೊಂಡಿದೆ. ಕಚೇರಿ ಕೆಲಸಕ್ಕೆಂದು ಖೋದಾನಪುರ ಗ್ರಾಮದಿಂದ ಬಂದಿದ್ದ ಇನಾಂದಾರ್ ಅವರು ಒಳಗೆ ಹೋದಾಗ ಈ ಘಟನೆ ಸಂಭವಿಸಿದೆ.
ತಂಪು ತಂದ ಮಳೆ: ಪಟ್ಟಣ ಸೇರಿ ತಾಲ್ಲೂಕಿನ ಕೆಲವು ಗ್ರಾಮಗಳಲ್ಲಿ ಸುಮಾರು ಅರ್ಧಗಂಟೆ ಸುರಿದ ಮಳೆಯು ಬಿಸಿಲಿನ ಬೇಗೆಯಿಂದ ಬಸವಳಿದಿದ್ದ ಜನತೆಗೆ ತಂಪೆರೆಯಿತು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.