ಚಿಕ್ಕೋಡಿ: ಮಹಾರಾಷ್ಟ್ರದಲ್ಲಿ ಗುರುವಾರ ಮಳೆ ಹೆಚ್ಚಿದ್ದ ಕಾರಣ, ಚಿಕ್ಕೋಡಿ ಉಪವಿಭಾಗ ವ್ಯಾಪ್ತಿಯ ಕೃಷ್ಣಾ, ದೂಧಗಂಗಾ, ವೇದಗಂಗಾ ನದಿಯ 7 ಸೇತುವೆಗಳು ಜಲಾವೃತಗೊಂಡ ಸ್ಥಿತಿಯಲ್ಲಿಯೇ ಇವೆ.
ಕೊಲ್ಹಾಪುರ ಜಿಲ್ಲೆಯ ರಾಜಾಪೂರೆ ಬ್ಯಾರೇಜಿನಿಂದ ಕೃಷ್ಣಾ ನದಿಗೆ 84,083 ಕ್ಯೂಸೆಕ್ ಹೊರ ಹರಿವು ಇದ್ದು, ಕಲ್ಲೋಳ ಗ್ರಾಮದ ಬಳಿಯಲ್ಲಿ ದೂಧಗಂಗಾ ನದಿಗೆ ಒಳ ಹರಿವು 24,640 ಕ್ಯೂಸೆಕ್ ಇದೆ. ತಾಲ್ಲೂಕಿನ ಕಲ್ಲೋಳ-ಯಡೂರ ಸೇತುವೆ ಬಳಿಯಲ್ಲಿ ಕೃಷ್ಣಾ ನದಿಗೆ 1,08,723 ಕ್ಯೂಸೆಕ್ ಹೊರ ಹರಿವು ಇದೆ.
ಮಹಾರಾಷ್ಟ್ರದ ಪಶ್ಚಿಮ ಘಟ್ಟದಲ್ಲಿ ಕಳೆದ 15 ದಿನಗಳಿಂದ ಬಿಟ್ಟೂ ಬಿಡದೇ ಮಳೆ ಬೀಳುತ್ತಿರುವ ಪರಿಣಾಮವಾಗಿ ಕೃಷ್ಣಾ ಹಾಗೂ ಉಪನದಿಗಳು ಪಾತ್ರ ಮೀರಿ ಹರಿಯುತ್ತಿವೆ. ನದಿ ನೀರು ಹೊಲ ಗದ್ದೆಗಳಿಗೆ ನುಗ್ಗಿದ್ದು, ಕಬ್ಬು, ಸೋಯಾ, ಮೆಕ್ಕೆಜೋಳ ಮುಂತಾದ ಬೆಳೆಗಳು ಜಲಾವೃತಗೊಂಡಿವೆ. ನದಿ ನೀರಿನ ಪ್ರಮಾಣದಲ್ಲಿ ಏರಿಕೆಯಾಗಿದ್ದರಿಂದ ನದಿ ತೀರದಲ್ಲಿರುವ ಪಂಪ್ಸೆಟ್ಗಳನ್ನು ತೆರವುಗೊಳಿಸಿ ಎತ್ತರದ ಪ್ರದೇಶಗಳಿಗೆ ತರುವ ಕಾರ್ಯದಲ್ಲಿ ರೈತರು ನಿರತರಾಗಿದ್ದಾರೆ.
ಕೃಷ್ಣಾ ನದಿ ತೀರದಲ್ಲಿರುವ ಕಲ್ಲೋಳ ಗ್ರಾಮದ ಬಳಿಯ ದತ್ತಾತ್ರೇಯ ಮಂದಿರ, ದೂಧಗಂಗಾ ನದಿ ತೀರದಲ್ಲಿರುವ ಯಕ್ಸಂಬಾ ಪಟ್ಟಣದ ಹೊರವಲಯದ ಮನಸೂರ ಪೀರ ದರ್ಗಾ, ಕಾರದಗಾ ಗ್ರಾಮದ ಬಳಿಯ ಬಂಗಾಲಿಬಾಬಾ ದೇವಸ್ಥಾನ ಜಲಾವೃತಗೊಂಡಿವೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.