ADVERTISEMENT

ನೆರೆ ಹಾನಿ: ಕಟಾವಿಗೆ ಬಂದಿದ್ದ ಸೋಯಾಬೀನ್ ಕೈಗೆ ಬರಲಿಲ್ಲ...

ಕೇಂದ್ರ ಅಧ್ಯಯನ ತಂಡ ಭೇಟಿ, ಪರಿಶೀಲನೆ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2020, 7:49 IST
Last Updated 8 ಸೆಪ್ಟೆಂಬರ್ 2020, 7:49 IST
ಪ್ರವಾಹದಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿತ್ತು.
ಪ್ರವಾಹದಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡ ಭೇಟಿ ನೀಡಿತ್ತು.   

ಬೆಳಗಾವಿ: ಜಿಲ್ಲೆಯಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದ ಹಾನಿಗೊಳಗಾಗಿರುವ ವಿವಿಧ ಪ್ರದೇಶಗಳಿಗೆ ಕೇಂದ್ರ ಅಧ್ಯಯನ ತಂಡವು ಮಂಗಳವಾರ ಭೇಟಿ ನೀಡಿ ಪರಿಶೀಲಿಸಿತು.

ಹೈದರಾಬಾದ್ ನಲ್ಲಿರುವ ಕೃಷಿ ಇಲಾಖೆಯ ಎಣ್ಣೆಬೀಜಗಳ ಅಭಿವೃದ್ಧಿ ನಿರ್ದೇಶನಾಲಯದ ನಿರ್ದೇಶಕ ಡಾ.ಮನೋಹರನ್ ಹಾಗೂ ಬೆಂಗಳೂರಿನ ಜಲಶಕ್ತಿ ಸಚಿವಾಲಯದ ಅಧೀಕ್ಷಕ ಎಂಜಿನಿಯರ್ ಗುರುಪ್ರಸಾದ್ ಜೆ. ಅವರು ಅತಿವೃಷ್ಟಿಯಿಂದ ಹಾನಿಗೊಳಗಾದ ಪ್ರದೇಶಗಳಲ್ಲಿ ಸಂಚರಿಸಿ ಮಾಹಿತಿ ಕಲೆಹಾಕಿದರು.

ನಗರಕ್ಕೆ ಬಂದ ಇಬ್ಬರು ಸದಸ್ಯರ ತಂಡವನ್ನು ಸ್ವಾಗತಿಸಿದ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಅವರು, ಅತಿವೃಷ್ಟಿಯಿಂದ ಉಂಟಾಗಿರುವ ಹಾನಿಯ ಬಗ್ಗೆ ವಿವರಿಸಿದರು.

ADVERTISEMENT

ಸೋಯಾಬಿನ್ ಬೆಳೆ ಪರಿಶೀಲನೆ:ಮೊದಲಿಗೆ ಹುಕ್ಕೇರಿ ತಾಲ್ಲೂಕಿನ ಬಡಕುಂದ್ರಿ ಗ್ರಾಮಕ್ಕೆ ಭೇಟಿ ನೀಡಿದ ತಂಡವು ಅತಿವೃಷ್ಟಿಯಿಂದ ಸೋಯಾಬಿನ್ ಬೆಳೆ ಹಾನಿ ಆಗಿರುವುದನ್ನು ಪರಿಶೀಲಿಸಿತು.

1.17 ಎಕರೆಯಲ್ಲಿ ಬೆಳೆದ ಸೋಯಾಬೀನ್ ಬೆಳೆ ಕಟಾವಿಗೆ ಬಂದಿತ್ತು. ಆದರೆ ಮಳೆಯಿಂದಾಗಿ‌ ಸಂಪೂರ್ಣ ಹಾನಿಯಾಗಿದೆ. ಎಕರೆಗೆ ₹ 15 ಸಾವಿರ ಖರ್ಚು ಮಾಡಿದ್ದು, 15 ಕ್ವಿಂಟಲ್ ಇಳುವರಿ ನಿರೀಕ್ಷೆಯಿತ್ತು. ಮಳೆಯಿಂದ ಇದೀಗ ಸಂಪೂರ್ಣ ಬೆಳೆ ನಾಶವಾಗಿದೆ ಎಂದು ರೈತ ಅಳಲು ತೋಡಿಕೊಂಡರು.

ಬಡಕುಂದ್ರಿ ಗ್ರಾಮದಲ್ಲಿ 30 ಹೆಕ್ಟೇರ್ ಬೆಳೆ ಸಂಪೂರ್ಣ ನಾಶವಾಗಿದೆ ಎಂದು ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ವಿವರಿಸಿದರು.

ಸೋಯಾಬೀನ್ ಬೆಳೆಯಲು ಬ್ಯಾಂಕಿನಿಂದ ಸಾಲ ಪಡೆಯಲಾಗಿದೆಯೇ ಎಂದು ತಂಡದ ಮುಖ್ಯಸ್ಥ ಮನೋಹರನ್ ರೈತನನ್ನು ಪ್ರಶ್ನಿಸಿದರು.ಇದಲ್ಲದೇ ಬೇರೆ ಬೆಳೆ ನಾಶವಾಗಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.

ಈ ಸಂದರ್ಭದಲ್ಲಿ ಮಾತನಾಡಿದ ವಿಧಾನಪರಿಷತ್ತಿನ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ಕಟಾವಿಗೆ ಬಂದಿದ್ದ ಸೋಯಾಬೀನ್ ಬೆಳೆ ಸಂಪೂರ್ಣ ನಾಶವಾಗಿದೆ. ಪ್ರತಿ ವರ್ಷವೂ ಇದೇ ರೀತಿ ಬೆಳೆ ಹಾನಿಯಾಗುತ್ತಿದೆ ಎಂದು ಕೇಂದ್ರ ಅಧ್ಯಯನ ತಂಡಕ್ಕೆ ತಿಳಿಸಿದರು.

ಹಿರಣ್ಯಕೇಶಿ ನದಿ ದಂಡೆಯಲ್ಲಿರುವ ಚೌಗಲಾ ಎಂಬುವವರ ಜಮೀನನಲ್ಲಿ ಸೋಯಾಬೀನ್ ಹಾಗೂ ಪಕ್ಕದಲ್ಲಿದ್ದ ಕಬ್ಬು ಬೆಳೆಹಾನಿ ಬಗ್ಗೆ ಪರಿಶೀಲಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸ್ಥಳೀಯ ರೈತರು ಪ್ರತಿವರ್ಷ ಬೆಳೆಹಾನಿ ತಪ್ಪಿಸಲು ನದಿ ದಂಡೆಯ ಅಗಲೀಕರಣ ಮಾಡಬೇಕು ಎಂದು ಒತ್ತಾಯಿಸಿದರು.

ಬಿಜೆಪಿ ಮುಖಂಡ ಶಶಿಕಾಂತ ನಾಯಿಕ, ಪ್ರತಿವರ್ಷ ಎದುರಾಗುತ್ತಿರುವ ಸಮಸ್ಯೆಯನ್ನು ವಿವರಿಸಿದರು.

ಹೊಸೂರಿನಲ್ಲಿ ಗಜ್ಜರಿ ಬೆಳೆಹಾನಿ ಪರಿಶೀಲಿಸಿದರು. ಎಕರೆಗೆ ಮೂರು ಲಕ್ಷ ರೂಪಾಯಿ ಆದಾಯ ಬರುತ್ತಿತ್ತು. ಆದರೆ ಬೆಳೆ ಹಾನಿಯಿಂದ ದಿಕ್ಕು ತೋಚದಂತಾಗಿದೆ ಎಂದು ರೈತರು ಕೇಂದ್ರ ತಂಡಕ್ಕೆ ತಿಳಿಸಿದರು. ನಂತರ ಪಕ್ಕದ ಇಂಗಳಿ ಗ್ರಾಮದ ಕಲ್ಲಪ್ಪ ಅವರ ಜಮೀನಿನಲ್ಲಿ ಹಿನ್ನೀರಿನಿಂದ ಹಾನಿಗೊಳಗಾದ ಮೆಕ್ಕೆಜೋಳದ ಬೆಳೆಯನ್ನು ಪರಿಶೀಲಿಸಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವನಗೌಡ ಪಾಟೀಲ, ಹುಕ್ಕೇರಿ, ಗೋಕಾಕ ಸೇರಿದಂತೆ ಜಿಲ್ಲೆಯಲ್ಲಿ ಉಂಟಾಗಿರುವ ಬೆಳೆಹಾನಿಯ ಕುರಿತು ಮಾಹಿತಿ ನೀಡಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ದರ್ಶನ್ ಎಚ್.ವಿ., ಉಪ ವಿಭಾಗಾಧಕಾರಿ ಅಶೋಕ ತೇಲಿ, ಕೃಷಿ ಇಲಾಖೆಯ ಉಪ ನಿರ್ದೇಶಕ ಎಚ್.ಡಿ. ಕೋಳೇಕರ, ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ರವೀಂದ್ರ ಹಕಾಟಿ ಇದ್ದರು.
ತಂಡದ ಪ್ರವಾಸ ಮುಂದುವರಿದಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.