ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಪ್ರದೇಶದಲ್ಲಿ ಕೃಷ್ಣಾ ಜಲಾಯನ ಪ್ರದೇಶ ವ್ಯಾಪ್ತಿಯಲ್ಲಿ ಮಳೆ ಪ್ರಮಾಣ ಇಳಿಮುಖವಾಗಿದ್ದರಿಂದ ಕಳೆದೊಂದು ವಾರದಿಂದ ಜಲಾವೃತಗೊಂಡಿದ್ದ ದೂಧಗಂಗಾ, ವೇದಗಂಗಾ ನದಿಯ 4 ಸೇತುವೆಗಳು ಭಾನುವಾರ ಸಂಚಾರಕ್ಕೆ ಮುಕ್ತಗೊಂಡಿವೆ. ಕೃಷ್ಣಾ ಹಾಗೂ ದೂಧಗಂಗಾ ನದಿಯ ತಲಾ ಒಂದು ಸೇತುವೆ ಜಲಾವೃತಗೊಂಡ ಸ್ಥಿತಿಯಲ್ಲಿಯೇ ಇವೆ.
ಉಪವಿಭಾಗ ವ್ಯಾಪ್ತಿಯಲ್ಲಿ ದೂಧಗಂಗಾ ನದಿಯ ಕಾರದಗಾ–ಭೋಜ, ಭೋಜವಾಡಿ–ಕುನ್ನೂರ, ವೇದಗಂಗಾ ನದಿಯ ಅಕ್ಕೋಳ–ಸಿದ್ನಾಳ, ಜತ್ರಾಟ– ಭಿವಶಿ ಕಿರು ಸೇತುವೆಗಳು ಸಂಚಾರಕ್ಕೆ ಮುಕ್ತವಾಗಿದ್ದು, ದೂಧಗಂಗಾ ನದಿಯ ಮಲಕವಾಡ–ದತ್ತವಾಡ, ಕೃಷ್ಣಾ ನದಿಯ ಕಲ್ಲೋಳ– ಯಡೂರ ಸೇತುವೆಗಳು ಇನ್ನೂ ಜಲಾವೃತಗೊಂಡ ಸ್ಥಿತಿಯಲ್ಲಿವೆ.
ಕೊಲ್ಹಾಪುರ ಜಿಲ್ಲೆಯ ರಾಜಾಪೂರೆ ಬ್ಯಾರೇಜ್ ಬಳಿಯಲ್ಲಿ ಕೃಷ್ಣಾ ನದಿಗೆ 49,000 ಕ್ಯೂಸೆಕ್ ಹೊರ ಹರಿವು ಇದ್ದು, ಸದಲಗಾ ಪಟ್ಟಣದ ಬಳಿಯಲ್ಲಿ ದೂಧಗಂಗಾ ನದಿಗೆ 13,376 ಕ್ಯೂಸೆಕ್ ಇದೆ. ತಾಲ್ಲೂಕಿನ ಕಲ್ಲೋಳ– ಯಡೂರ ಬ್ಯಾರೇಜ್ ಬಳಿಯಲ್ಲಿ ಕೃಷ್ಣಾ ನದಿಯ ಹೊರ ಹರಿವು 62,376 ಕ್ಯೂಸೆಕ್ ಇದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.