ADVERTISEMENT

ಮರಾಠಾ ಸಮುದಾಯದಕ್ಕೆ ಸಚಿವ ಸ್ಥಾನ ಕೊಡಬೇಕು: ರಮೇಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 6 ಮೇ 2022, 2:41 IST
Last Updated 6 ಮೇ 2022, 2:41 IST
ರಮೇಶ ಜಾರಕಿಹೊಳಿ
ರಮೇಶ ಜಾರಕಿಹೊಳಿ   

ಅಥಣಿ (ಬೆಳಗಾವಿ ಜಿಲ್ಲೆ): ಸಚಿವ ಸಂಪುಟ ಪುನರ್‌ರಚನೆ ಮಾತುಗಳು ಕೇಳಿಬರುತ್ತಿರುವ ನಡುವೆ, ಆಕಾಂಕ್ಷಿಗಳಾಗಿರುವ ಗೋಕಾಕ ಶಾಸಕ ರಮೇಶ ಜಾರಕಿಹೊಳಿ ಹಾಗೂ ಕಾಗವಾಡದ ಶಾಸಕ ಶ್ರೀಮಂತ ಪಾಟೀಲ ಇಲ್ಲಿ ಮಾತುಕತೆ ನಡೆಸಿರುವುದು ಚರ್ಚೆಗೆ ಗ್ರಾಸವಾಗಿದೆ.

ಬಳಿಕ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ‘ಸಚಿವ ಸ್ಥಾನ ಕೊಡುವುದು, ಬಿಡುವುದು ಮುಖ್ಯಮಂತ್ರಿ ಮತ್ತು ಹೈಕಮಾಂಡ್‌ಗೆ ಬಿಟ್ಟಿದ್ದು’ ಎಂದು ಪ್ರತಿಕ್ರಿಯಿಸಿದರು.

‘ಅಥಣಿ ಶಾಸಕ ಮಹೇಶ ಕುಮಠಳ್ಳಿ ಸಚಿವ ಸ್ಥಾನದ ಆಕಾಂಕ್ಷಿಯಲ್ಲ. ಮಂತ್ರಿ ಸ್ಥಾನ ಬೇಡ; ಕ್ಷೇತ್ರದಲ್ಲಿ ನೀರಾವರಿ ಯೋಜನೆ ಅನುಷ್ಠಾನವಾದರೆ ಸಾಕು ಎಂದಿದ್ದಾರೆ. ಮರಾಠಾ ಸಮುದಾಯದಕ್ಕೆ ಸಚಿವ ಸ್ಥಾನ ಕೊಡಬೇಕೆಂದು ಪಕ್ಷದ ವೇದಿಕೆಯಲ್ಲಿ ಮಾತನಾಡಿದ್ದೇನೆ. ಶೀಘ್ರದಲ್ಲೇ ಒಳ್ಳೆಯ ಸುದ್ದಿ ಬರಲಿದೆ’ ಎಂದು ಹೇಳಿದರು.

ADVERTISEMENT

‘ಮಾಸಂತ್ಯ ಅಥವಾ ಜೂನ್‌ನಲ್ಲಿ ಗೋಕಾಕದಲ್ಲಿ ಕೇಂದ್ರ ಸಚಿವ ಅಮಿತ್‌ ಶಾ ನೇತೃತ್ವದಲ್ಲಿ ಕಾರ್ಯಕರ್ತರ ಬೃಹತ್ ಸಮಾವೇಶ ನಡೆಸುವ ಯೋಜನೆ ಇದೆ. ಕೇಂದ್ರ ಸಚಿವ ಪ್ರಲ್ಹಾದ ಜೋಶಿ, ಪಕ್ಷದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಂತೋಷ್, ರಾಜ್ಯ ಘಟಕದ ಅಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭಾಗವಹಿಸಲಿದ್ದಾರೆ. ಆಗಸ್ಟ್‌ನಲ್ಲಿ ಅಹಿಂದ ಸಮಾವೇಶ ನಡೆಸಲಾಗುವುದು. 4ರಿಂದ 5 ಲಕ್ಷ ಮಂದಿ ಸೇರಿಸಲಾಗುವುದು’ ಎಂದರು.

‘ಬಸವರಾಜ ಬೊಮ್ಮಾಯಿ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವುದಿಲ್ಲ. ಅವರ ನೇತೃತ್ವದಲ್ಲೇ ಮುಂದಿನ ಚುನಾವಣೆ ಎದುರಿಸುತ್ತೇವೆ ಎಂದು ವರಿಷ್ಠರೆ ಹೇಳಿದ್ದಾರೆ’ ಎಂದರು.

ದಾಖಲೆ ಇದ್ದರೆ ಬಿಡುಗಡೆ ಮಾಡಲಿ

‘ಶಾಸಕ ಪ್ರಿಯಾಂಕ್‌ ಖರ್ಗೆ ಅವರು ಪಿಎಸ್‌ಐ ಪರೀಕ್ಷಾ ಅಕ್ರಮದ ಬಗ್ಗೆ ದಾಖಲೆ ಇದ್ದರೆ ಸಿಐಡಿಗೆ ಕೊಡಲಿ. 3 ಬಾರಿ ನೋಟಿಸ್ ಕೊಟ್ಟಿದ್ದರೂ ಹಾಜರಾಗಿಲ್ಲ. ಬಿಟ್ ಕಾಯಿನ್ ವಿಚಾರದಲ್ಲೂ ಕೇವಲ ಹೇಳಿಕೆ ನೀಡಿ ದಾರಿ ತಪ್ಪಿಸಿದ್ದರು’ ಎಂದು ಟೀಕಿಸಿದರು.

‘ಅಕ್ರಮದಲ್ಲಿ ಯಾವುದೇ ಅಧಿಕಾರಿ ಅಥವಾ ಪ್ರಭಾವಿ ರಾಜಕಾರಣಿಗಳು ಭಾಗಿಯಾಗಿದ್ದರೂ ಅವರ ತಲೆದಂಡ ಆಗಲೇಬೇಕು. ಭ್ರಷ್ಟಾಚಾರದ ವಿಷಯದಲ್ಲಿ ಕ್ಷಮೆ ಇಲ್ಲ’ ಎಂದರು.

‘ಕಾಂಗ್ರೆಸ್ ನಾಯಕರ ಕುರಿತು ಮಾತನಾಡಲು ಬಹಳಷ್ಟು ವಿಷಯಗಳಿವೆ. ಆದರೆ, ಪಕ್ಷದ ವರಿಷ್ಠರು ಆದೇಶಿಸಿದ್ದರಿಂದ ಎರಡು ಬಾರಿ ಹಿಂದೆ ಸರಿದೆ. ವರಿಷ್ಠರು ಅವಕಾಶ ಕೊಟ್ಟರೆ ಕಾಂಗ್ರೆಸ್ ಮುಖಂಡರ ಬಂಡವಾಳ ಬಿಚ್ಚಿಡುತ್ತೇನೆ. ಆ ಕಾಲ ಬರಲಿದೆ’ ಎಂದು ಪ್ರತಿಕ್ರಿಯಿಸಿದರು.

‘ಸೌಭಾಗ್ಯಲಕ್ಷ್ಮಿ ಸಕ್ಕರೆ ಕಾರ್ಖಾನೆಗೆ ನಾನು ಅಧ್ಯಕ್ಷನೇ ಅಲ್ಲ. ನನ್ನ ಮಗ ಅಧ್ಯಕ್ಷ ಆಗಿದ್ದಾನೆ. ಸ್ವತಂತ್ರವಾಗಿ ಉದ್ಯೋಗ ಮಾಡುತ್ತಿದ್ದಾನೆ. ಅವ್ಯವಹಾರ ಆಗಿದ್ದರೆ, ಹಣ ತುಂಬದಿದ್ದರೆ ಬ್ಯಾಂಕ್‌ನವರು ಈವರೆಗೆ ಬಿಡುತ್ತಿದ್ದರೇ?’ ಎಂದು ಕೇಳಿದರು. ‘ಕಾಂಗ್ರೆಸ್‌ನವರ ಆರೋಪ ಸುಳ್ಳು’ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.