ADVERTISEMENT

ಗೋವಾ ವಾದ ಸಾಬೀತಾದರೆ ರಾಜೀನಾಮೆ ನೀಡುವೆ: ರಮೇಶ ಜಾರಕಿಹೊಳಿ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2020, 9:05 IST
Last Updated 30 ನವೆಂಬರ್ 2020, 9:05 IST
ರಮೇಶ ಜಾರಕಿಹೊಳಿ
ರಮೇಶ ಜಾರಕಿಹೊಳಿ   

ಬೆಳಗಾವಿ: ‘ಕರ್ನಾಟಕವು ಮಹದಾಯಿ ನದಿಯ ನೀರನ್ನು ತಿರುಗಿಸಿಕೊಂಡಿದೆ ಎಂದು ಗೋವಾ ಮುಖ್ಯಮಂತ್ರಿ ಹೇಳಿಕೆ ನೀಡಿರುವುದನ್ನು ಗಮನಿಸಿದ್ದೇನೆ. ಅದನ್ನು ಅವರು ಸಾಬೀತುಪಡಿಸಿದರೆ ತಕ್ಷಣವೇ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುತ್ತೇನೆ’ ಎಂದು ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಸವಾಲು ಹಾಕಿದರು.

ಇಲ್ಲಿ ಸೋಮವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಕಳಸಾ ನಾಲೆಗೆ ನಿರ್ಮಾಣವಾಗಿರುವ ಗೋಡೆಯನ್ನು ನಾವು ಮುಟ್ಟಿಲ್ಲ. ರಾಜ್ಯದಿಂದ ಕಾನೂನು ಬಾಹಿರವಾಗಿ ಯಾವುದೇ ಕೆಲಸ ಮಾಡಿಲ್ಲ. ಬೇಕಿದ್ದರೆ ಅವರು ಇಲ್ಲಿಗೆ ಬಂದು ನೋಡಲಿ’ ಎಂದು ಹೇಳಿದರು.

‘ರಾಜಕೀಯ ಗಿಮಿಕ್‌ಗಾಗಿ ಅವರು ಈ ರೀತಿಯ ಹೇಳಿಕೆ ಕೊಟ್ಟಿದ್ದಾರೆ. ಅವರ ರಾಜ್ಯದ ಹಿತ ಕಾಪಾಡಿಕೊಳ್ಳಲು ಹೀಗೆ ಮಾತನಾಡಿದ್ದಾರೆ. ಈ ವಿಷಯದಲ್ಲಿ ಅಲ್ಲಿ ರಾಜಕೀಯ ನಡೆಯುತ್ತದೆ. ಆದರೆ, ನಮ್ಮ ರಾಜ್ಯದ ಹಿತ ಕಾಯಲು ನಾವು ಬದ್ಧವಾಗಿದ್ದೇವೆ. ಇದು ಅತ್ಯಂತ ಸೂಕ್ಷ್ಮ ಹಾಗೂ ಗಂಭೀರ ವಿಷಯ ಆಗಿರುವುದರಿಂದ ಎಲ್ಲವನ್ನೂ ಮಾಧ್ಯಮದ ಮುಂದೆ ಹೇಳಲಾಗುವುದಿಲ್ಲ. ಕಾಮಗಾರಿ ಆರಂಭಕ್ಕೆ ಸಂಬಂಧಿಸಿದಂತೆ ಕೇಂದ್ರ ಪರಿಸರ ಇಲಾಖೆಯಿಂದ ಅಗತ್ಯ ಅನುಮತಿ ಪಡೆದುಕೊಳ್ಳಲು ಬೇಕಾದ ಕ್ರಮಗಳನ್ನು ನಾವು ಕೈಗೊಂಡಿದ್ದೇವೆ’ ಎಂದರು.

ADVERTISEMENT

‘ಮಹದಾಯಿ ನದಿ ನೀರು ಹಂಚಿಕೆ ವಿಷಯದಲ್ಲಿ ಕರ್ನಾಟಕ ಮತ್ತು ಗೋವಾ ಮುಖ್ಯಮಂತ್ರಿಗಳ ಮಾತುಕತೆ ಅವಶ್ಯವಿಲ್ಲ’ ಎಂದು ತಿಳಿಸಿದರು.

ಸಭೆ ಮುಂದೂಡಿಕೆ

ಕಳಸಾ–ಬಂಡೂರಿ ಯೋಜನೆ ಬಗ್ಗೆ ಚರ್ಚಿಸಲು ಸಚಿವರು ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರಿಗಳ ಸಭೆ ಕರೆದಿದ್ದರು. ಆದರೆ, ಗ್ರಾಮ ಪಂಚಾಯಿತಿ ಚುನಾವಣೆ ನೀತಿಸಂಹಿತೆ ಜಾರಿಯಾದ ಕಾರಣದಿಂದ ಸಭೆ ಮುಂದೂಡಲಾಯಿತು. ಕೋವಿಡ್–19 ವಿಷಯದ ಬಗ್ಗೆ ಕೆಲವು ನಿಮಿಷಗಳಷ್ಟೇ ಚರ್ಚಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.