ಬೆಳಗಾವಿ: ಜಿಲ್ಲಾ ಉಸ್ತುವಾರಿ ಸಚಿವ ರಮೇಶ ಜಾರಕಿಹೊಳಿ ಹಾಗೂ ಕಾಂಗ್ರೆಸ್ ಶಾಸಕಿ ಲಕ್ಷ್ಮಿ ಹೆಬ್ಬಾಳಕರ ಇಲ್ಲಿನ ಜಿಲ್ಲಾ ಪಂಚಾಯಿತಿಯಲ್ಲಿ ನಡೆದ ವೇದಿಕೆ ಹಂಚಿಕೊಂಡರಾದರೂ ಪರಸ್ಪರ ಮುಖ ಕೊಟ್ಟು ಮಾತನಾಡಲಿಲ್ಲ. ಅಲ್ಲದೇ ಟಾಂಗ್ ಕೊಡುವ ಹೇಳಿಕೆಗಳನ್ನು ನೀಡಿದ್ದು ಗಮನಸೆಳೆಯಿತು.
ನಗರಕ್ಕೆ ಕುಡಿಯುವ ನೀರು ಪೂರೈಸುವ ರಕ್ಕಸಕೊಪ್ಪ ಜಲಾಶಯ ನಿರ್ಮಾಣಕ್ಕೆ 780 ಎಕರೆ ಜಾಗ ನೀಡಿದ್ದೇವೆ. ಆದರೆ, ಜಲಾಶಯ ಪಕ್ಕದ ಗ್ರಾಮಗಳಿಗೆ ಕುಡಿಯುವ ನೀರಿಲ್ಲ. ರಕ್ಕಸಕೊಪ್ಪ, ಬಿಜಗರ್ಣಿ, ಬೆಳಗುಂದಿ ಗ್ರಾಮಗಳ ಕುಡಿಯುವ ನೀರಿನ ಸಮಸ್ಯೆಗೆ ಶಾಶ್ವತ ಪರಿಹಾರ ಒದಗಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಸದಸ್ಯರು ಒತ್ತಾಯಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಶಾಸಕಿ, ಈ ಸಂಬಂಧ ₹ 220 ಕೋಟಿ ವೆಚ್ಚದ ಪ್ರಸ್ತಾವ ಸಿದ್ಧಪಡಿಸಿ ಸರ್ಕಾರಕ್ಕೆ ಕಳುಹಿಸಲಾಗಿದೆ. ಅಧಿಕಾರಿಗಳ ಜೊತೆ ಸಭೆ ನಡೆಸಿ ಚರ್ಚಿಸಿದ್ದೇನೆ. ಸರ್ಕಾರದ ಮಟ್ಟದಲ್ಲಿ ಅನುದಾನ ಕೊರತೆ ಉಂಟಾಗಿದೆ. ಹೀಗಾಗಿ ಅನುದಾನ ಸಿಗುತ್ತಿಲ್ಲ. ಈಗಿನ ಸಚಿವರು ಗಮನಿಸಬೇಕು ಎಂದರು.
ಮಧ್ಯಪ್ರವೇಶಿಸಿದ ಸಚಿವ ರಮೇಶ ಜಾರಕಿಹೊಳಿ, ಸರ್ಕಾರಕ್ಕೆ ಪ್ರಸ್ತಾವ ಕೊಟ್ಟು, ಸಭೆ ನಡೆಸಿದರೆ ಸಾಲದು. ನಾನೇ ಸ್ವತಃ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸುತ್ತೇನೆ. ನನ್ನ ಇಲಾಖೆಯಿಂದ ಅಗತ್ಯ ಅನುದಾನ ಕೊಡಿಸುತ್ತೇನೆ ಎನ್ನುವ ಮೂಲಕ ಪರೋಕ್ಷವಾಗಿ ಹೆಬ್ಬಾಳಕರಗೆ ಟಾಂಗ್ ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.