ಬೆಳಗಾವಿ: ತಾಲ್ಲೂಕಿನ ಪೀರನವಾಡಿ ಗ್ರಾಮದಲ್ಲಿ ಕ್ರಾಂತಿವೀರ ಸಂಗೊಳ್ಳಿರಾಯಣ್ಣ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ಉಂಟಾಗಿರುವ ವಿವಾದ ಬಗೆಹರಿಸಲು ಪೊಲೀಸರು ಮುಖಂಡರೊಂದಿಗೆ ನಡೆಸಿದ ಸಂಧಾನ ಯತ್ನ ವಿಫಲವಾಗಿದೆ.
ರಾಜ್ಯದಾದ್ಯಂತ ಗಮನಸೆಳೆದಿರುವ ಈ ವಿವಾದ ಬಗೆಹರಿಸುವ ನಿಟ್ಟಿನಲ್ಲಿ ಪೊಲೀಸರು ಗ್ರಾಮದ ಮುಖಂಡರು ಹಾಗೂ ಕೆಲವು ಕನ್ನಡ ಹೋರಾಟಗಾರರ ಸಭೆ ಕರೆದಿದ್ದರು.
‘ಗ್ರಾಮದಲ್ಲಿ ಗ್ರಾಮ ಪಂಚಾಯಿತಿಯಿಂದ ಐದು ಗುಂಟೆ ಜಾಗ ಕೊಡಿಸುತ್ತೇವೆ. ಆ ಜಾಗದಲ್ಲಿ ಪ್ರತಿಮೆ ಪ್ರತಿಷ್ಠಾಪಿಸಿ, ಸುತ್ತಲೂ ಉದ್ಯಾನ ಅಭಿವೃದ್ಧಿಪಡಿಸಲು ಅವಕಾಶವಿದೆ’ ಎಂದು ಪೊಲೀಸರು ಸಲಹೆ ನೀಡಿದ್ದಾರೆ.
ಇದಕ್ಕೆ ಒಪ್ಪದ ರಾಯಣ್ಣನ ಅಭಿಮಾನಿಗಳು, ‘ಗ್ರಾಮದ ವೃತ್ತದಲ್ಲಿ ಪ್ರತಿಮೆ ಸ್ಥಾಪನೆಗೆ ಸಂಬಂಧಿಸಿದಂತೆ ಹಲವು ವರ್ಷಗಳಿಂದಲೂ ಹೋರಾಟ ಮಾಡುತ್ತಿದ್ದೇವೆ. ಮನವಿ ಸಲ್ಲಿಸಿದ್ದೇವೆ. ಅಲ್ಲಿಯೇ ಅವಕಾಶ ಕೊಡಬೇಕು ಎಂದು ಪಟ್ಟು ಹಿಡಿದರು. ಹೀಗಾಗಿ, ಮತ್ತೊಂದು ಸುತ್ತಿನ ಸಭೆ ನಡೆಸಲು ನಿರ್ಧರಿಸಲಾಗಿದೆ’ ಎಂದು ಮೂಲಗಳು ತಿಳಿಸಿವೆ.
ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸಬೇಕು ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಪೊಲೀಸರಿಗೆ ಸೂಚಿಸಿದ್ದರು. ಗ್ರಾಮಸ್ಥರು, ಕನ್ನಡಪರ ಹೋರಾಟಗಾರರು ಹಾಗೂ ಹಾಲುಮತ ಸಮಾಜದವರು ಬೃಹತ್ ಪ್ರತಿಭಟನೆ ನಡೆಸಿದ್ದರು. ರಾಜ್ಯದ ಹಲವು ಜಿಲ್ಲೆಗಳಲ್ಲೂ ಪ್ರತಿಭಟನೆಗಳು ನಡೆದಿವೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.