ಬೆಳಗಾವಿ: ಶೈಕ್ಷಣಿಕ ಹಾಗೂ ಸಾಮಾಜಿಕ ಕ್ಷೇತ್ರದಲ್ಲಿ ಸೇವೆಗೈದ, ಸಿಂದಗಿಯ ವೀರಶೈವ ಪರಂಪರೆಯ ಸಾರಂಗ ಮಠದ ಪೀಠಾಧಿಪತಿ ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಅವರಿಗೆ ಹಾಗೂ ಸಾವಿರಾರು ಅಂಧರಿಗೆ ಉದ್ಯೋಗಾವಕಾಶ ನೀಡಿದ ಮಹಾರಾಷ್ಟ್ರದ ಸಾತಾರಾ ಪಟ್ಟಣದ ಭಾವೇಶ ಭಾಟಿಯಾ ಅವರಿಗೆ ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಗೌರವ ಡಾಕ್ಟರೇಟ್ ಪ್ರಕಟಿಸಿದೆ.
ನಗರದಲ್ಲಿ ಮಂಗಳವಾರ ನಡೆದ ಪತ್ರಿಕಾಗೋಷ್ಟಿಯಲ್ಲಿ ಮಾತನಾಡಿದ ಕುಲಪತಿ ಶಿವಾನಂದ ಹೊಸಮನಿ, ಬುಧವಾರ ನಡೆಯುವ ವಿಶ್ವವಿದ್ಯಾಲಯದ 7ನೇ ಘಟಿಕೋತ್ಸವದಲ್ಲಿ ಇವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಲಾಗುವುದು ಎಂದು ತಿಳಿಸಿದರು.
ಶಿಕ್ಷಣ ಪ್ರಸಾರ
ಪ್ರಭು ಸಾರಂಗದೇವ ಶಿವಾಚಾರ್ಯ ಸ್ವಾಮೀಜಿ ಅವರು ಶಿಕ್ಷಣ ಪ್ರಸಾರದಲ್ಲಿ ತೊಡಗಿಸಿಕೊಂಡಿದ್ದಾರೆ. ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದಲ್ಲಿ ಪ್ರಾಥಮಿಕ ತರಗತಿಯಿಂದ ಹಿಡಿದು ಸ್ನಾತಕೋತ್ತರ ಪದವಿಯವರೆಗೆ ಶೈಕ್ಷಣಿಕ ಸಂಸ್ಥೆಗಳನ್ನು ತೆರೆದಿದ್ದಾರೆ. ಚಿಂತನಾ ಗೋಷ್ಠಿ, ರಕ್ತದಾನ ಶಿಬಿರ, ಉಚಿತ ನೇತ್ರ ತಪಾಸಣೆ ಹಾಗೂ ನೇತ್ರದಾನ ಶಿಬಿರಗಳನ್ನು ಆಯೋಜಿಸಿದ್ದಾರೆ.
ಅಂಧರ ಬಾಳಿಗೆ ಆಶಾಕಿರಣ: ಮಹಾರಾಷ್ಟ್ರದ ಸಾತಾರದವರಾದ ಭಾವೇಶ ಚಿಕ್ಕ ವಯಸ್ಸಿನವರಿದ್ದಾಗಲೇ ದೃಷ್ಟಿ ಕಳೆದುಕೊಂಡಿದ್ದಾರೆ. ಅರ್ಥಶಾಸ್ತ್ರ ಮತ್ತು ಮನೋವಿಜ್ಞಾನದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದಾರೆ. ಹಲವು ಅಂತರರಾಷ್ಟ್ರೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸಿ, ಪದಕಗಳನ್ನು ಗೆದ್ದಿದ್ದಾರೆ. ಸನ್ರೈಸ್ ಕ್ಯಾಂಡಲ್ಸ್ ಸಂಸ್ಥೆ ಕಟ್ಟಿ, 2,500 ಜನ ಅಂಧರಿಗೆ ಉದ್ಯೋಗ ಕಲ್ಪಿಸಿಕೊಟ್ಟಿದ್ದಾರೆ. ಹಲವು ರಾಷ್ಟ್ರೀಯ, ಅಂತರರಾಷ್ಟ್ರೀಯ ಪ್ರಶಸ್ತಿಗಳಿಗೆ ಭಾಜನರಾಗಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.