ಬೆಳಗಾವಿ: ‘ಕೃಷಿಗೆ ಸಂಬಂಧಿಸಿದ ತಿದ್ದುಪಡಿ ಕಾಯ್ದೆಗಳನ್ನು ಹಿಂಪಡೆಯಬೇಕು ಹಾಗೂ ಕೃಷಿ ಉತ್ಪನ್ನಗಳಿಗೆ ಬೆಂಬಲ ಬೆಲೆ ಖಾತ್ರಿಗೊಳಿಸಬೇಕು’ ಎನ್ನುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಮಾರ್ಚ್ 31ರಂದು ಇಲ್ಲಿ ಆಯೋಜಿಸಿರುವ ರೈತರ ಮಹಾಪಂಚಾಯತ್ಗೆ ಜಿಲ್ಲಾ ಕ್ರೀಡಾಂಗಣ ಸೇರಿದಂತೆ ಯಾವುದೇ ಮೈದಾನವನ್ನೂ ಜಿಲ್ಲಾಡಳಿತ ನೀಡುತ್ತಿಲ್ಲ’ ಎಂದು ರೈತ ಸಂಘದ ನಾಯಕಿ ಚುಕ್ಕಿ ನಂಜುಂಡಸ್ವಾಮಿ ದೂರಿದರು.
ಇಲ್ಲಿ ಶನಿವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಜಿಲ್ಲಾಡಳಿತದ ಅಸಹಕಾರದ ನಡುವೆಯೂ ನಾವು ಚಳವಳಿ ನಡೆಸಿಯೇ ತೀರುತ್ತೇವೆ. ಕೇಂದ್ರದ ರೈತ ವಿರೋಧಿ ಧೋರಣೆಯನ್ನು ಜನರ ಮುಂದೆ ತೆರೆದಿಡಬೇಕಾಗಿದೆ. ಹೀಗಾಗಿ, ರಾಣಿ ಚನ್ನಮ್ಮ ವೃತ್ತದಲ್ಲೇ ವಿಭಾಗ ಮಟ್ಟದ ಮಹಾಪಂಚಾಯತ್ ನಡೆಸುವುದು ಅನಿವಾರ್ಯವಾಗಿದೆ. ಸಹಸ್ರಾರು ಮಂದಿ ಪಾಲ್ಗೊಳ್ಳಲಿದ್ದಾರೆ’ ಎಂದರು.
‘ಭಾರತೀಯ ಸಂಯುಕ್ತ ಕಿಸಾನ್ ಮೋರ್ಚಾದ ನಾಯಕರಾದ ರಾಕೇಶ್ ಟಿಕಾಯತ್, ಯುದ್ಧವೀರ್ ಸಿಂಗ್, ಡಾ. ದರ್ಶನ್ ಪಾಲ್ ಭಾಗವಹಿಸಲಿದ್ದಾರೆ. ಮುಖಂಡ ಯೋಗೇಂದ್ರ ಯಾದವ್ ಅವರಿಗೂ ಆಹ್ವಾನ ನೀಡಿದ್ದೇವೆ. ನಮ್ಮಲ್ಲಿನ ಹೋರಾಟಗಾರರಾದ ಕೋಡಿಹಳ್ಳಿ ಚಂದ್ರಶೇಖರ, ಬಡಗಲಪುರ ನಾಗೇಂದ್ರ ಮೊದಲಾದವರನ್ನೂ ಕರೆದಿದ್ದೇವೆ’ ಎಂದು ಮಾಹಿತಿ ನೀಡಿದರು.
‘ಶಿವಮೊಗ್ಗದಲ್ಲಿ ಮಾರ್ಚ್ 20ರಂದು ಹಾಗೂ ಹಾವೇರಿಯಲ್ಲಿ ಮಾರ್ಚ್ 21ರಂದು ಮಹಾಪಂಚಾಯತ್ ಹಮ್ಮಿಕೊಂಡಿದ್ದು, ಅಲ್ಲಿ ಮೈದಾನಗಳು ದೊರೆತಿವೆ. ಆದರೆ, ಇಲ್ಲಿ ಮುಂಬರುವ ಬೆಳಗಾವಿ ಲೋಕಸಭಾ ಕ್ಷೇತ್ರದ ಉಪ ಚುನಾವಣೆ ಹಿನ್ನೆಲೆಯಲ್ಲಿ ಮುಜುಗರ ಆಗಬಾರದೆಂದು ಸರ್ಕಾರವು ಅಧಿಕಾರಿಗಳ ಮೇಲೆ ಒತ್ತಡ ತಂದು ಮೈದಾನ ಸಿಗದಂತೆ ನೋಡಿಕೊಂಡಿದೆ. ಖಾಸಗಿ ಸಂಸ್ಥೆಗಳಿಗೆ ಸೇರಿದ ಮೈದಾನವೂ ಸಿಗದಂತೆ ಮಾಡುತ್ತಿದೆ’ ಎಂದು ಆರೋಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.