ADVERTISEMENT

ಆರ್‌ಸಿ ಕಚೇರಿ ರದ್ದತಿಗೆ ವಿರೋಧ

​ಪ್ರಜಾವಾಣಿ ವಾರ್ತೆ
Published 15 ಜುಲೈ 2021, 13:36 IST
Last Updated 15 ಜುಲೈ 2021, 13:36 IST
ಸಿದಗೌಡ ಮೋದಗಿ
ಸಿದಗೌಡ ಮೋದಗಿ   

ಬೆಳಗಾವಿ: ‘ಕಂದಾಯ ಇಲಾಖೆ ಆಧೀನದಲ್ಲಿರುವ ಪ್ರಾದೇಶಿಕ ಆಯುಕ್ತರ ಕಚೇರಿಗಳನ್ನು ರದ್ದುಗೊಳಿಸುವುದನ್ನುಭಾರತೀಯ ಕೃಷಿಕ ಸಮಾಜ (ಸಂಯುಕ್ತ) ತೀವ್ರವಾಗಿ ವಿರೋಧಿಸುತ್ತದೆ’ ಎಂದು ಅಧ್ಯಕ್ಷ ಸಿದಗೌಡ ಮೋದಗಿ ತಿಳಿಸಿದ್ದಾರೆ.

‘ಬೆಳಗಾವಿ ಪ್ರಾದೇಶಿಕ ಆಯುಕ್ತರ ಕಚೇರಿಯು ಬೆಳಗಾವಿ, ಬಾಗಲಕೋಟೆ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಹಾವೇರಿ, ಗದಗ ಜಿಲ್ಲೆಗಳ ವ್ಯಾಪ್ತಿಯನ್ನು ಹೊಂದಿದೆ. ಇಂತಹ ಕಚೇರಿಗಳನ್ನು ರದ್ದುಪಡಿಸಿ ಬೆಂಗಳೂರಿನಲ್ಲೇ ಕಂದಾಯ ಆಯುಕ್ತಾಲಯ ಸ್ಥಾಪಿಸುವಂತೆ ಆಡಳಿತ ಸುಧಾರಣೆ ಆಯೋಗ ಶಿಫಾರಸು ಮಾಡಿರುವುದು ಖಂಡನೀಯ’ ಎಂದು ಹೇಳಿದ್ದಾರೆ.

‘ಈ ಕಚೇರಿಗೆ ಮೇಲ್ಮನವಿ ವಿಚಾರಣೆ ಮತ್ತು ಕ್ರಮ ಕೈಗೊಳ್ಳುವ ಅಧಿಕಾರ ಇರುವುದರಿಂದ ರೈತರು ಮತ್ತು ಸಾರ್ವಜನಿಕರ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಬಹುದಾಗಿದೆ. ಜೊತೆಗೆ ಅಧಿಕಾರ ವಿಕೇಂದ್ರೀಕರಣದಿಂದ ಸಾಮಾನ್ಯರ ಮನೆ ಬಾಗಿಲಲ್ಲೇ ನ್ಯಾಯ ದೊರಕಿಸಿಕೊಟ್ಟಂತಾಗುತ್ತದೆ. ಪ್ರಾದೇಶಿಕ ಆಯುಕ್ತರಿಗೆ ಇನ್ನಷ್ಟು ಅಧಿಕಾರ ನೀಡಿದರೆ ಆಡಳಿತ ಬಲಗೊಳ್ಳುತ್ತದೆ. ಇದರ ಬದಲಿಗೆ ಕಚೇರಿಯನ್ನೇ ರದ್ದುಪಡಿಸಿದರೆ ಉತ್ತರ ಕರ್ನಾಟಕದ ಜನತೆ ಸಮಸ್ಯೆಗಳನ್ನು ಹಿಡಿದುಕೊಂಡು ಬೆಂಗಳೂರಿಗೆ ಅಲೆಯಬೇಕಾಗುತ್ತದೆ. ಅಲ್ಲದೇ ನ್ಯಾಯ ಪಡೆಯಲು ಸಾಧ್ಯವಾಗದೆಯೂ ಹೋಗಬಹುದು’ ಎಂದು ತಿಳಿಸಿದ್ದಾರೆ.

ADVERTISEMENT

‘ಹೀಗಾಗಿ, ಕಚೇರಿಯನ್ನು ಇಲ್ಲಿಯೇ ಮುಂದುವರಿಸಬೇಕು. ಪ್ರಾದೇಶಿಕ ಆಡಳಿತ ಅಸಮತೋಲನ ನಿವಾರಣೆಗೆ ಕ್ರಮ ವಹಿಸಬೇಕು. ಇಲ್ಲವಾದಲ್ಲಿ ಪ್ರಾದೇಶಿಕ ಕಚೇರಿ ಎದುರು ಸತ್ಯಾಗ್ರಹ ನಡೆಸಬೇಕಾಗುತ್ತದೆ’ ಎಂದು ಪ್ರಕಟಣೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.