ADVERTISEMENT

ಕೃಷ್ಣಾ ನದಿಗೆ ನೀರು; ಮಹಾರಾಷ್ಟ್ರ ಸಿ.ಎಂ.ಗೆ ಕೋರಿಕೆ

​ಪ್ರಜಾವಾಣಿ ವಾರ್ತೆ
Published 1 ಜನವರಿ 2019, 14:19 IST
Last Updated 1 ಜನವರಿ 2019, 14:19 IST
ಮುಂಬೈನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರನ್ನು ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ವಿಧಾನ ಪರಿಷತ್‌ ವಿರೋಧ ಪಕ್ಷದ ಸಚೇತಕ ಮಹಾಂತೇಶ ಕವಟಗಿಮಠ ಮಂಗಳವಾರ ಭೇಟಿಯಾದರು. ಸಾಂಗ್ಲಿ ಸಂಸದ ಸಂಜಯ (ಕಾಕಾ) ಪಾಟೀಲ (ಬಲತುದಿ) ಉಪಸ್ಥಿತರಿದ್ದರು.
ಮುಂಬೈನಲ್ಲಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರನ್ನು ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ವಿಧಾನ ಪರಿಷತ್‌ ವಿರೋಧ ಪಕ್ಷದ ಸಚೇತಕ ಮಹಾಂತೇಶ ಕವಟಗಿಮಠ ಮಂಗಳವಾರ ಭೇಟಿಯಾದರು. ಸಾಂಗ್ಲಿ ಸಂಸದ ಸಂಜಯ (ಕಾಕಾ) ಪಾಟೀಲ (ಬಲತುದಿ) ಉಪಸ್ಥಿತರಿದ್ದರು.   

ಬೆಳಗಾವಿ: ಬೇಸಿಗೆ ಸಮಯದಲ್ಲಿ ಎದುರಾಗಬಹುದಾದ ನೀರಿನ ಕೊರತೆಯನ್ನು ನೀಗಿಸಲು ಕೃಷ್ಣಾ ನದಿಗೆ ಕೋಯ್ನಾ ಜಲಾಶಯದಿಂದ 4 ಟಿ.ಎಂ.ಸಿ ನೀರು ಬಿಡುಗಡೆ ಮಾಡಲು ಕ್ರಮಕೈಗೊಳ್ಳಬೇಕೆಂದು ಮಹಾರಾಷ್ಟ್ರದ ಮುಖ್ಯಮಂತ್ರಿ ದೇವೇಂದ್ರ ಫಡಣವೀಸ್‌ ಅವರಿಗೆ ರಾಜ್ಯಸಭಾ ಸದಸ್ಯ ಪ್ರಭಾಕರ ಕೋರೆ, ವಿಧಾನ ಪರಿಷತ್‌ನ ವಿರೋಧ ಪಕ್ಷದ ಸಚೇತಕ ಮಹಾಂತೇಶ ಕವಟಗಿಮಠ ಮನವಿ ಮಾಡಿದರು.

ಮುಂಬೈನಲ್ಲಿ ಫಡಣವೀಸ್‌ ಅವರನ್ನು ಮಂಗಳವಾರ ಭೇಟಿ ಮಾಡಿದ ಜಿಲ್ಲೆಯ ನಾಯಕರು, ಮನವಿ ಮಾಡಿಕೊಂಡರು.

ಚಿಕ್ಕೋಡಿ, ರಾಯಬಾಗ, ಅಥಣಿಯ ಮೂಲಕ ಹರಿಯುವ ಕೃಷ್ಣಾ ನದಿಯಲ್ಲಿ ಮಾರ್ಚ್‌, ಏಪ್ರಿಲ್‌ ಮತ್ತು ಮೇ ತಿಂಗಳಿನಲ್ಲಿ ನೀರಿನ ಪ್ರಮಾಣ ಕಡಿಮೆಯಾಗುತ್ತದೆ. ಅಂತಹ ಸಮಯದಲ್ಲಿ ಕೋಯ್ನಾ ಜಲಾಶಯದಿಂದ ನದಿಗೆ ನೀರು ಬಿಟ್ಟರೆ ಈ ಭಾಗದ ಜನರಿಗೆ ಹಾಗೂ ಜಾನುವಾರುಗಳಿಗೆ ಹೆಚ್ಚು ಅನುಕೂಲವಾಗಲಿದೆ ಎಂದು ಮನವರಿಕೆ ಮಾಡಿಕೊಟ್ಟರು.

ADVERTISEMENT

ಇದಕ್ಕೆ ಪ್ರತಿಯಾಗಿ ರಾಜ್ಯದ ತುಬಚಿ ಬಬಲೇಶ್ವರ ಏತ ನೀರಾವರಿ ಮೂಲಕ ಮಹಾರಾಷ್ಟ್ರ ರಾಜ್ಯದ ಸಾಂಗಲಿ ಜಿಲ್ಲೆಯ ಜತ್ತ ತಾಲ್ಲೂಕಿನ ಕೆಲವು ಭಾಗಗಳಿಗೆ ಮತ್ತು ಆಲಮಟ್ಟಿ ಜಲಾಶಯದಿಂದ ಇಂಡಿ ಕಾಲುವೆಯಿಂದ ಮಹಾರಾಷ್ಟ್ರದ ಸೊಲ್ಲಾಪೂರ ತಾಲ್ಲೂಕಿನ ಅಕ್ಕಲಕೋಟ ಹಾಗೂ ಕೆಲವು ಭಾಗಗಳಿಗೆ ಕುಡಿಯುವ ನೀರು ಹರಿಸುವುದರ ಬಗ್ಗೆಯೂ ಚರ್ಚಿಸಬೇಕಾಗಿದೆ ಎಂದು ಕೋರಿದರು.

ಇದರ ಬಗ್ಗೆ ಮಹಾರಾಷ್ಟ್ರ ಮತ್ತು ಕರ್ನಾಟಕ ರಾಜ್ಯಗಳ ನಡುವೆ ಶಾಶ್ವತ ಒಡಂಬಡಿಕೆ ಮಾಡಿಕೊಳ್ಳಲು ಎರಡೂ ರಾಜ್ಯಗಳ ನೀರಾವರಿ ಸಚಿವರ ಹಾಗೂ ಅಧಿಕಾರಿಗಳ ಸಭೆ ಆಯೋಜಿಸಬೇಕೆಂದು ಅವರು ಕೋರಿಕೆ ಸಲ್ಲಿಸಿದರು.

ಇದಕ್ಕೆ ಪ್ರತಿಕ್ರಿಯಿಸಿದ ಫಡಣವೀಸ್‌, ಆದಷ್ಟು ಶೀಘ್ರವೇ ಸಭೆ ಆಯೋಜಿಸಲಾಗುವುದು ಎಂದು ಭರವಸೆ ನೀಡಿದರು. ಈ ಸಂದರ್ಭದಲ್ಲಿ ಸಾಂಗ್ಲಿ ಸಂಸದ ಸಂಜಯ (ಕಾಕಾ) ಪಾಟೀಲ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.