ಬೆಳಗಾವಿ:ಗುಂಡ್ಲುಪೇಟೆ ತಾಲ್ಲೂಕಿನ ವೀರನಪುರ ಗ್ರಾಮದಲ್ಲಿ ಇತ್ತೀಚೆಗೆ ದಲಿತ ಸಮುದಾಯದ ವ್ಯಕ್ತಿಯ ಮೇಲೆ ಹಲ್ಲೆ ಮಾಡಿ, ಬೆತ್ತಲೆ ಮೆರವಣಿಗೆ ಮಾಡಿರುವಆರೋಪಿಗಳವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರ್ನಾಟಕ ಜೈ ಭೀಮ ಸಂಘರ್ಷ ಸಮಿತಿ ಸದಸ್ಯರು ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.
ರಾಜ್ಯ ಘಟಕದ ಅಧ್ಯಕ್ಷ ರಮೇಶ ರಾಯಪ್ಪಗೋಳ ಮಾತನಾಡಿ, ‘ದಲಿತ ಸಮುದಾಯದ ವ್ಯಕ್ತಿಯನ್ನು ಬೆತ್ತಲೆ ಮೆರವಣಿಗೆ ಮಾಡಿರುವುದು ಸಮಾಜದಲ್ಲಿ ಇಂದಿಗೂ ಇರುವ ಜಾತೀಯತೆಗೆ ನಿದರ್ಶನವಾಗಿದೆ. ಇಂತಹ ಅಮಾನವಿಯ ಕೃತ್ಯ ಖಂಡನೀಯ. ಘಟನೆ ನಡೆದು 15 ದಿನಗಳು ಕಳೆದರೂ ಕೂಡ ಪೊಲೀಸರು ಆರೋಪಿಗಳ ಮೇಲೆ ಕ್ರಮ ಜರುಗಿಸಲು ವಿಫಲವಾಗಿದ್ದಾರೆ’ ಎಂದು ಆರೋಪಿಸಿದರು.
‘ಪೊಲೀಸರು ಯಾವುದೇ ಒತ್ತಡಕ್ಕೂ ಮಣಿಯದೇಆರೋಪಿಗಳ ಮೇಲೆ ಶಿಸ್ತು ಕ್ರಮಕೈಗೊಳ್ಳಬೇಕು. ಆರೋಪಿಗಳನ್ನು ಗಡಿಪಾರು ಮಾಡಬೇಕು’ ಎಂದು ಒತ್ತಾಯಿಸಿದರು. ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಮುಖಂಡರಾದ ಯಲ್ಲಪ್ಪ ಹುದಲಿ, ಯಲ್ಲೇಶ ಬಚ್ಚಲಪುರಿ, ಸುಲೇಮಾನ ಜಮಾದಾರ, ಮಲ್ಲಿಕಾರ್ಜುನ ಮರೇಗುದ್ದಿ ಪಾಲ್ಗೊಂಡಿದ್ದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.