ADVERTISEMENT

ಪಂಚಮಸಾಲಿ ಸಮಾಜಕ್ಕೆ ಮೀಸಲಾತಿ: ಸಚಿವ ಸಂಪುಟದಲ್ಲಿ ವಿರೋಧವಿಲ್ಲ: ಸವದಿ

​ಪ್ರಜಾವಾಣಿ ವಾರ್ತೆ
Published 20 ಫೆಬ್ರುವರಿ 2021, 9:08 IST
Last Updated 20 ಫೆಬ್ರುವರಿ 2021, 9:08 IST
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ
ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ   

ಬೆಳಗಾವಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ ಹಿಂದುಳಿದ ವರ್ಗ 2ಎಗೆ ಸೇರಿಸಬೇಕು ಎಂಬ ಆಗ್ರಹದ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ವಿರೋಧ ವ್ಯಕ್ತವಾಗಿದೆ ಎನ್ನುವುದು ವದಂತಿಯಷ್ಟೆ ಎಂದು ಉಪ ಮುಖ್ಯಮಂತ್ರಿ ಲಕ್ಷ್ಮಣ ಸವದಿ ತಿಳಿಸಿದರು.

ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, 'ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಬಸವ ಜಯ ಮೃತ್ಯುಂಜಯ ಸ್ವಾಮೀಜಿ ಅವರಿಗೆ ತಪ್ಪು ಮಾಹಿತಿ ನೀಡಲಾಗಿದೆ. ಮೀಸಲಾತಿಗೆ ಸಂಬಂಧಿಸಿದಂತೆ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ವಾದ ವಿವಾದ ಆಗಿಲ್ಲ. ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸ್ವಾಮೀಜಿ ಉಪವಾಸ ಸತ್ಯಾಗ್ರಹ ನಡೆಸಿದ ಸಂದರ್ಭದಲ್ಲಿ ನಾನೇ ಬೆಂಬಲ ನೀಡಿದ್ದೆ. ಈಗ ಯಾರೋ ವದಂತಿಗಳನ್ನು ಹಬ್ಬಿಸಿದ್ದಾರೆ. ಸಮಾಜದ ಹೋರಾಟಕ್ಕೆ ನನ್ನ ಬೆಂಬಲವಿದೆ ಎಂದರು.

ಮಹಾರಾಷ್ಟ್ರ, ‌ಕೇರಳದಲ್ಲಿ ಹೊಸ ಪ್ರಬೇಧದ ಕೋವಿಡ್ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಗಡಿಯಲ್ಲಿ ನಿಗಾ ವಹಿಸುವಂತೆ ಸೂಚಿಸಲಾಗಿದೆ ಎಂದರು.

ADVERTISEMENT

ಸಾರ್ವಜನಿಕರು ಹೆಚ್ಚಿನ ಜಾಗೃತಿ ವಹಿಸಬೇಕು. ಮಾಸ್ಕ್ ಧರಿಸಬೇಕು. ಅಂತರವನ್ನು ಕಡ್ಡಾಯವಾಗಿ ಕಾಯ್ದುಕೊಳ್ಳಬೇಕು. ಈಗಾಗಲೇ ಅಂತರರಾಜ್ಯ ಸಾರಿಗೆ ಆರಂಭವಾಗಿದೆ. ಈ ಮೊದಲಿನಂತೆ ಜಾಗೃತಿ ವಹಿಸಲು ಸೂಚನೆ ನೀಡಲಾಗಿದೆ ಎಂದರು.

ಮಹಾರಾಷ್ಟ್ರ ಸರ್ಕಾರದಿಂದ ಗಡಿಯಲ್ಲಿ ಕನ್ನಡಿಗರ ಸಮೀಕ್ಷೆ ನಡೆಸುತ್ತಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಆ ವಿಚಾರಕ್ಕೆ ಹೆಚ್ಚಿನ ಮಹತ್ವ ಕೊಡಬೇಕಿಲ್ಲ. ಜತ್ತ ಭಾಗದಲ್ಲಿ ಹೆಚ್ಚು ಕನ್ನಡ ಮಾತನಾಡುವ ಜನ ಇದ್ದಾರೆ. ಆ ಸರ್ಕಾರದವರು ಸಮೀಕ್ಷೆ ಮಾಡಿಕೊಂಡು ಏನು ಮಾಡುತ್ತಾರೆಯೋ ಮಾಡಿಕೊಳ್ಳಲಿ. ಅಲ್ಲಿನ ಕನ್ನಡಿಗರಿಗೆ ತೊಂದರೆ ಕೊಡುವ ಕೆಲಸ ಮಾಡಿದಾಗ ನಾವು ಯೋಚನೆ ಮಾಡುತ್ತೇವೆ. ಹೊರ ನಾಡ ಕನ್ನಡಿಗರ ಜೊತೆಗೆ ನಮ್ಮ ಸರ್ಕಾರ ಸದಾ ಇರಲಿದೆ ಎಂದು ಪ್ರತಿಕ್ರಿಯಿಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.