
ಕಾಗವಾಡ: ಪಟ್ಟಣದ ಪ್ರಮುಖ ರಸ್ತೆಗಳು ಸಂಪೂರ್ಣ ಹದಗೆಟ್ಟು ನಿತ್ಯ ಹಲವು ಅಪಘಾತಗಳು ಸಂಭವಿಸುತ್ತಿದ್ದು ರಸ್ತೆ ಅಭಿವೃದ್ಧಿ ಪಡಿಸಬೇಕು ಎಂದು ಕರ್ನಾಟಕ ರಕ್ಷಣಾ ವೇದಿಕೆಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ ಶಾಸಕ ರಾಜು ಕಾಗೆ ಹಾಗೂ ತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಸೋಮವಾರ ಕಾಗವಾಡ ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಸೇರಿ ಸರ್ಕಾರ ಹಾಗೂ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಕರವೇ ಅಧ್ಯಕ್ಷ ಸಿದ್ದು ವಡೆಯರ, ಪಟ್ಟಣದಲ್ಲಿ ಕಳೆದ ಹಲವು ವರ್ಷಗಳಿಂದ ರಸ್ತೆಗಳಲ್ಲಿ ಗುಂಡಿಗಳು ನಿರ್ಮಾಣವಾಗಿ ಇದರ ಬಗ್ಗೆ ಹಲವು ಬಾರಿ ಶಾಸಕ, ಮಂತ್ರಿ, ಮುಖ್ಯಮಂತ್ರಿಗಳಿಗೂ ಸಹಿತ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದರು.
ಕಾಗವಾಡ ತಾಲ್ಲೂಕು ಕೇಂದ್ರವಾಗಿ ಹಲವು ವರ್ಷಗಳು ಕಳೆದರೂ ಇಲ್ಲಿ ಪೂರ್ಣ ಪ್ರಮಾಣದ ಕಚೇರಿ ಆರಂಭವಾಗಿಲ್ಲ. ಶಾಸಕರು ಹಾಗೂ ಅಧಿಕಾರಿಗಳು ಎಂಟು ದಿನಗಳಲ್ಲಿ ಸಮಸ್ಯೆ ಪರಿಹರಿಸುವ ಕೆಲಸ ಮಾಡಬೇಕು. ಇಲ್ಲವಾದಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಕೆ ನೀಡಿದರು.
ಈ ವೇಳೆ ಕರವೇ ಉಪಾಧ್ಯಕ್ಷ ಗಣೇಶ ಕೋಳೆಕರ, ಪಾರುಖ ಅಲಾಸ್ಕರ, ಕೃಷ್ಣಾ ದೊಂಡಾರೆ,ಪ್ರವೀಣ ಪಾಟೀಲ, ಅಸ್ಲಂ ಜಮಾದರ, ಸುನೀಲ, ದೊಂಡಾರೆ, ಬಾಬಾಸಾಬ ಕತ್ತಲಗೆ, ಶಂಕರ ಕಾಂಬಳೆ, ಅಮುಲ ಮಾಳಿ, ಸಚಿನ ಗಾವಡೆ, ಮಹೇಶ ಮಟಗರಿ, ಅಪ್ಪಾಸಾಬ ಗುಮಟೆ, ಹಸನ ಪಾನಾರೆ, ಜೋತು ಪಾಟೀಲ, ರಂಜಿತ ಕೋಳಿ, ಸೂರಜ ಪರಿಟ ಸೇರಿದಂತೆ ಅನೇಕರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.