ADVERTISEMENT

ಸನಾತನ ವಿರುದ್ಧ ಅಪಪ್ರಚಾರ ಖಂಡಿಸಿ ಸೆ.1ರಂದು ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 30 ಆಗಸ್ಟ್ 2018, 13:57 IST
Last Updated 30 ಆಗಸ್ಟ್ 2018, 13:57 IST

ಬೆಳಗಾವಿ: ಪತ್ರಕರ್ತೆ ಗೌರಿ ಲಂಕೇಶ್‌ ಹತ್ಯೆ ಪ್ರಕರಣವನ್ನೇ ನೆಪವಾಗಿಟ್ಟುಕೊಂಡು ಸನಾತನ ಸಂಸ್ಥೆಯ ಮೇಲೆ ನಿಷೇಧ ಹೇರಲು ಪ್ರಯತ್ನಿಸುತ್ತಿರುವುದನ್ನು ಖಂಡಿಸಿ ಸೆಪ್ಟೆಂಬರ್‌ 1ರಂದು ನಗರದ ಧರ್ಮವೀರ ಸಂಭಾಜಿ ಚೌಕದಿಂದ ಜಿಲ್ಲಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ ಎಂದು ಹಿಂದೂ ಜನಜಾಗೃತಿ ಸಮಿತಿಯ ಜಿಲ್ಲಾ ಸಂಯೋಜಕ ಹೃಷಿಕೇಶ ಗುರ್ಜರ್‌ ಹೇಳಿದರು.

ನಗರದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಧರ್ಮ ಪ್ರಸಾರ ಮತ್ತು ಆಧ್ಯಾತ್ಮಿಕ ಶಿಕ್ಷಣವನ್ನು ಸನಾತನ ಸಂಸ್ಥೆ ನೀಡುತ್ತಿದೆ. ಗೌರಿ ಸೇರಿದಂತೆ ಪ್ರಗತಿಪರ ಚಿಂತಕರ ಹತ್ಯೆ ಪ್ರಕರಣಗಳಲ್ಲಿ ಸನಾತನ ಸಂಸ್ಥೆಯ ಸದಸ್ಯರ ಕೈವಾಡವಾಗಿದೆ ಎಂದು ಮಾಧ್ಯಮಗಳಲ್ಲಿ ವರದಿಯಾಗುತ್ತಿರುವುದು ಸತ್ಯಕ್ಕೆ ದೂರವಾದುದು ಎಂದು ವಿವರಿಸಿದರು.

ಬೆಳಗಾವಿಯಲ್ಲಿ ಅಷ್ಟೇ ಅಲ್ಲದೇ, ಇತರ ನಗರಗಳಲ್ಲಿಯೂ ಪ್ರತಿಭಟನಾ ಮೆರವಣಿಗೆಗಳನ್ನು ಹಮ್ಮಿಕೊಳ್ಳಲಾಗಿದೆ. ಸೆ.4ರಂದು ಶಿವಮೊಗ್ಗ, ಉಡುಪಿ, ಮಂಗಳೂರಿನಲ್ಲಿ ಹಾಗೂ ಸೆ.5ರಂದು ಬೆಂಗಳೂರಿನಲ್ಲಿ ನಡೆಸಲಿದ್ದೇವೆ ಎಂದು ಹೇಳಿದರು.

ADVERTISEMENT

ವಕೀಲ ಚೇತನ ಪನೇರಿಕರ ಮಾತನಾಡಿ, ಗೌರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಭರತ ಕುರ್ನೆ ಅವರಿಗೆ ಎಸ್‌ಐಟಿ ಅಧಿಕಾರಿಗಳು ಮಾನಸಿಕ ಹಿಂಸೆ ನೀಡುತ್ತಿದ್ದಾರೆ. ಕುಟುಂಬದವರು, ವಕೀಲರ ಜೊತೆ ಮಾತನಾಡಲು ಅವಕಾಶ ಮಾಡಿಕೊಡುತ್ತಿಲ್ಲ. ಅವರ ಆರೋಗ್ಯ ಹದೆಗೆಟ್ಟಿದ್ದು, ಅವರಿಗೆ ಸೂಕ್ತ ಚಿಕಿತ್ಸೆ ನೀಡುತ್ತಿಲ್ಲ ಎಂದು ಆರೋಪಿಸಿದರು.

ನಾವು ಗೌರಿ ಹತ್ಯೆಯನ್ನು ಸಮರ್ಥಿಸುವುದಿಲ್ಲ. ಆದರೆ, ಅಮಾಯಕರನ್ನು ಬಂಧಿಸಬಾರದು ಎನ್ನುವುದಷ್ಟೇ ನಮ್ಮ ಕಳಕಳಿ. ಸನಾತನ ಸಂಸ್ಥೆಯು ವಾಸ್ತವದಲ್ಲಿ ಧರ್ಮ ಪ್ರಚಾರದ ಕೆಲಸ ಮಾಡುತ್ತದೆ. ಆದರೆ, ಮಾಧ್ಯಮಗಳಲ್ಲಿ ಸಂಸ್ಥೆಯ ಬಗ್ಗೆ ಅಪಪ್ರಚಾರ ಮಾಡಲಾಗುತ್ತಿದೆ. ತಕ್ಷಣ ಇದನ್ನು ತಡೆಯಬೇಕು ಎಂದು ಒತ್ತಾಯಿಸಿದರು.

ವಕೀಲ ಶರತಚಂದ್ರ ಮುಂಡರಗಿ, ಹಿಂದೂ ರಾಷ್ಟ್ರ ಸೇನಾ ಸಂಘಟಕ ಸಮೀರ ಪಾಟೀಲ, ಮಾರುತಿ ಸುತಾರ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.