
ನಂದಗಡ (ಖಾನಾಪುರ ತಾ): ‘ಇಲ್ಲಿ ನಿರ್ಮಿಸುತ್ತಿರುವ ಸಂಗೊಳ್ಳಿ ರಾಯಣ್ಣ ವಸ್ತು ಸಂಗ್ರಹಾಲಯ ‘ವೀರ ಭೂಮಿ’ಯನ್ನು ಜ.19ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕಾರ್ಪಣೆ ಮಾಡಲಿದ್ದಾರೆ. ಅಂತಿಮ ಹಂತದ ಕಾಮಗಾರಿಗಳನ್ನು ತ್ವರಿತಗೊಳಿಸಲಾಗಿದೆ’ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಶಿವರಾಜ ತಂಗಡಗಿ ತಿಳಿಸಿದರು.
ನಂದಗಡಲ್ಲಿ ಶುಕ್ರವಾರ ‘ವೀರಭೂಮಿ’ಗೆ ಭೇಟಿ ನೀಡಿ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ‘ವಸ್ತು ಸಂಗ್ರಹಾಲಯ, ಹಾಲೊಗ್ರಾಮ ವೀಕ್ಷಣೆಯ ಗುಣಮಟ್ಟ, ಮೂರ್ತಿಗಳು, ಧ್ವನಿವರ್ಧಕ, ಗುಹೆ, ಕವಳ ಗುಡ್ಡ, ಡೈಮೆನ್ಶನ್ ಚಿತ್ರಮಂದಿರ, ಘಟನಾ ಚಿತ್ರಣದ ವಿವರ, ರಸ್ತೆ, ಉದ್ಯಾನ, ಅಲ್ಪೋಪಹಾರ ಗೃಹ, ವಾಹನಗಳ ಪಾರ್ಕಿಂಗ್ ವ್ಯವಸ್ಥೆ, ಶೌಚಾಲಯ, ಕಂಪೌಂಡ, ದೀಪಾಲಂಕಾರ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಪರಿಶೀಲಿಸಿದ ಬಳಿಕ ಕಾಮಗಾರಿಗಳ ಗುಣಮಟ್ಟ ಕಾಪಾಡಿಕೊಂಡು ಕಾಲಮಿತಿಯೊಳಗೆ ಬಾಕಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು’ ಎಂದರು.
‘ಇದಕ್ಕೆ ಅಂದಾಜು ₹75 ಕೋಟಿ ಖರ್ಚು ಮಾಡಲಾಗಿದೆ. ಈಗಾಗಲೇ ಮ್ಯೂಸಿಯಂ ಕೆಲಸ ಮುಗಿದಿದೆ. ಪ್ರವಾಸಿಗರ ಬೇಡಿಕೆಯಂತೆ ಅವರಿಗೆ ತೊಂದರೆಯಾಗದ ರೀತಿಯಲ್ಲಿ ಶೀಘ್ರ ಸಂಗ್ರಹಾಲಯ ಪ್ರಾರಂಭಕ್ಕೆ ಯೋಜನೆ ರೂಪಿಸಲಾಗಿದೆ’ ಎಂದು ಮಾಹಿತಿ ನೀಡಿದರು.
‘ಶಾಲೆ, ಕಾಲೇಜು ಮಕ್ಕಳಿಗೆ ರಿಯಾಯಿತಿ ದರದಲ್ಲಿ ಪ್ರವೇಶ ನೀಡಲಾಗುವುದು. ನಾಡಿಗಾಗಿ ಪ್ರಾಣ ತ್ಯಾಗ ಮಾಡಿದ ರಾಯಣ್ಣನ ದೇಶ ಪ್ರೇಮ, ಪ್ರತಿಯೊಬ್ಬರು ಅರಿಯಬೇಕು ಎಂಬ ಉದ್ದೇಶದಿಂದ ಸಂಗ್ರಹಾಲಯ ನಿರ್ಮಾಣ ಮಾಡಲಾಗಿದೆ’ ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಎಚ್.ಎಂ. ರೇವಣ್ಣ ಮಾತನಾಡಿ, ‘ರಾಯಣ್ಣನ ವೀರಭೂಮಿ ನಂದಗಡದಲ್ಲಿರುವ ಕಾರಣ ರಾಯಣ್ಣ ಜೀವನ ಚರಿತ್ರೆ ಸಾರುವ ಮೂರ್ತಿಗಳಿರುವ ಮ್ಯೂಸಿಯಂ ನಂದಗಡದಲ್ಲಿ ನಿರ್ಮಾಣ ಮಾಡಲಾಗಿದೆ. ಮುಂಬರುವ ದಿನಗಳಲ್ಲಿ ಸಾಕಷ್ಟು ಪ್ರೇಕ್ಷಕರನ್ನು ವಸ್ತು ಸಂಗ್ರಹಾಲಯ ಸೆಳೆಯಲಿದೆ’ ಎಂದರು.
ಶಾಸಕ ವಿಠ್ಠಲ ಹಲಗೇಕರ, ಸಂಗೊಳ್ಳಿ ರಾಯಣ್ಣ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತೆ ಆರ್.ಶಾಲಿನಿ, ಪ್ರೊಬೇಷನರಿ ಐಎಎಸ್ ಅಧಿಕಾರಿ ಅಭಿನವ ಜೈನ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಉಪ ನಿರ್ದೇಶಕಿ ವಿದ್ಯಾವತಿ ಭಜಂತ್ರಿ, ಜಿಲ್ಲಾ ಪಂಚಾಯಿತಿ ಯೋಜನಾ ನಿರ್ದೇಶಕ ರವಿ ಬಂಗಾರಪ್ಪನವರ ಸೇರಿದಂತೆ ವಿವಿಧ ಜಿಲ್ಲಾಮಟ್ಟದ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.