ಸಂಕೇಶ್ವರ (ಬೆಳಗಾವಿ ಜಿಲ್ಲೆ): ಕೊಲೆ ಆರೋಪದಡಿ ಜೈಲು ಸೇರಿರುವ ಸಂಕೇಶ್ವರ ಪುರಸಭೆಯ ಸದಸ್ಯರೊಬ್ಬರು ವಿಡಿಯೊ ಕಾನ್ಫರೆನ್ಸ್ ಮೂಲಕ ಸಾಮಾನ್ಯ ಸಭೆಗೆ ಹಾಜರಾಗಿ ಗಮನ ಸೆಳೆದರು.
ಸಂಕೇಶ್ವರದ 14ನೇ ವಾರ್ಡ್ ಸದಸ್ಯ ಉಮೇಶ ರಮೇಶ ಕಾಂಬಳೆ ಅವರು ಮಹಿಳೆಯೊಬ್ಬರನ್ನು ಗುಂಡಿಕ್ಕಿ ಕೊಲೆ ಮಾಡಿದ ಆರೋಪದ ಮೇಲೆ, ಎಂಟು ತಿಂಗಳಿನಿಂದ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿದ್ದಾರೆ. ಆದರೂ ನ್ಯಾಯಾಲಯದ ಅನುಮತಿ ಪಡೆದು ಸಾಮಾನ್ಯ ಸಭೆಯಲ್ಲಿ ಪಾಲ್ಗೊಂಡು, ತಮ್ಮ ವಾರ್ಡ್ನ ಸಮಸ್ಯೆಗಳ ಬಗ್ಗೆ ಚರ್ಚಿಸಿ ಎಲ್ಲರೂ ಹುಬ್ಬೇರಿಸುವಂತೆ ಮಾಡಿದರು.
‘ಬುಧವಾರ (ಸೆ.21) ಪುರಸಭೆಯ ಸಾಮಾನ್ಯ ಸಭೆ ನಿಗದಿಯಾಗಿತ್ತು. ಇದರಲ್ಲಿ ಪಾಲ್ಗೊಳ್ಳಲು ಅವಕಾಶ ನೀಡುವಂತೆ ಉಮೇಶ ಅವರು ನ್ಯಾಯಾಲಯಕ್ಕೆ ಕೋರಿದ್ದರು. ಕೇಂದ್ರ ಕಾರಾಗೃಹದಿಂದಲೇ ವಿಡಿಯೊ ಕಾನ್ಫರೆನ್ಸ್ ಮೂಲಕ ಸಭೆಗೆ ಹಾಜರಾಗಲು ಅವಕಾಶ ಸಿಕ್ಕಿತ್ತು. ಅದರಂತೆ ಪುರಸಭೆಯಲ್ಲಿ ವ್ಯವಸ್ಥೆ ಮಾಡಿದ್ದೆವು’ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.