ಬೆಳಗಾವಿ: ‘ಇಲ್ಲಿನ ಸುವರ್ಣ ವಿಧಾನಸೌಧದಲ್ಲಿ ವಿಧಾನಮಂಡಲ ಅಧಿವೇಶನ ನಡೆಸಿ, ಈ ಭಾಗದ ಸಮಸ್ಯೆಗಳಿಗೆ ಪರಿಹಾರ ಕಲ್ಪಿಸಬೇಕು’ ಎಂದು ಶಾಸಕ, ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ಒತ್ತಾಯಿಸಿದರು.
ಇಲ್ಲಿ ಶನಿವಾರ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ‘ಬೆಳಗಾವಿಯಲ್ಲಿ ಅಧಿವೇಶನ ನಡೆಸಲು ಸರ್ಕಾರಕ್ಕೆ ಇಚ್ಛಾಶಕ್ತಿ ಇಲ್ಲ’ ಎಂದು ದೂರಿದರು.
‘ನೂರಾರು ಕೋಟಿ ರೂಪಾಯಿ ವೆಚ್ಚದಲ್ಲಿ ಸೌಧ ನಿರ್ಮಿಸಲಾಗಿದೆ. ಆದರೆ, ಬಳಸಿಕೊಳ್ಳಲು ಕ್ರಮವಾಗಿಲ್ಲ. ಆಗಾಗ ಇಲ್ಲಿ ಸಚಿವ ಸಂಪುಟ ಸಭೆ ನಡೆಸಬೇಕು. ಸಚಿವರು ಬಂದಾಗ ಅಲ್ಲೇ ಸಭೆ ನಡೆಸಬೇಕು’ ಎಂದು ಆಗ್ರಹಿಸಿದರು.
‘ಮುಖ್ಯಮಂತ್ರಿಯನ್ನೆ ಬದಲಿಸಿ ಅಥವಾ ಸಚಿವ ಸ್ಥಾನದಿಂದ ಯಾರನ್ನಾದರೂ ಕೈಬಿಡಲಿ. ಅದು ಬಿಜೆಪಿಯ ಆಂತರಿಕ ವಿಚಾರ. ಆದರೆ, ಈ ಸರ್ಕಾರದ ಜನ ವಿರೋಧಿ ನೀತಿಯ ಬಗ್ಗೆ ಹೋರಾಟ ಮುಂದುವರಿಸುತ್ತೇವೆ’ ಎಂದರು.
‘ಪಕ್ಷ ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ, ಮಿಷನ್–2023 ಆರಂಭಿಸಿದ್ದೇವೆ. ಮುಂದಿನ ಚುನಾವಣೆ ಎದುರಿಸಲು ಪಕ್ಷ ಸಂಘಟನೆ ಮಾಡುತ್ತಿದ್ದೇವೆ’ ಎಂದು ಹೇಳಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.