ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೊಸ ಹೆಲಿಕಾಪ್ಟರ್ ಖರೀದಿಸಿದ್ದು, ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್ನಲ್ಲಿ ಶುಕ್ರವಾರ ಅದನ್ನು ಪರಿಶೀಲನೆ ಮಾಡಿದರು
ಬೆಳಗಾವಿ: ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಹೊಸ ಹೆಲಿಕಾಪ್ಟರ್ ಖರೀದಿಸಿದ್ದಾರೆ.
ಬೆಂಗಳೂರು ಸಮೀಪದ ಜಕ್ಕೂರು ಏರೋಡ್ರೋಮ್ನಲ್ಲಿ ಹೆಲಿಕಾಪ್ಟರ್ ಪರಿಶೀಲಿಸಿದ ಅವರು ‘ಶೀಘ್ರವೇ ಇದು ನಮ್ಮೊಂದಿಗೆ ಹಾರಾಟಕ್ಕೆ ಸಿದ್ಧವಾಗಲಿದೆ’ ಎಂದು ತಮ್ಮ ಫೇಸ್ಬುಕ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಸ್ವಂತ ಹೆಲಿಕಾಪ್ಟರ್ ಹೊಂದಿರುವ ಜಿಲ್ಲೆಯ ಮೊದಲ ರಾಜಕಾರಣಿ ಎಂಬ ಹೆಗ್ಗಳಿಕೆಗೂ ಅವರು ಪಾತ್ರರಾಗಿದ್ದಾರೆ.
ದಿನದಲ್ಲಿ 18 ಗಂಟೆಗಳ ಕಾಲ ಕೆಲಸ ಮಾಡುತ್ತಿರುವ ಸಚಿವ, ರಾಜ್ಯದಾದ್ಯಂತ ಪಕ್ಷ ಸಂಘಟನೆ ಸೇರಿದಂತೆ 2028ರ ಚುನಾವಣೆಗೆ ಸಿದ್ದತೆ ಮಾಡಿಕೊಳ್ಳಲು ಈ ನೂತನ ಹೆಲಿಕಾಪ್ಟರ್ ಖರೀದಿಸಿದ್ದಾರೆ ಎಂದು ಹೇಳಲಾಗಿದೆ.
ಹೆಲಿಕಾಪ್ಟರ್ನ ವಿಶೇಷತೆ:
ಅತ್ಯಾಧುನಿಕ ಸುರಕ್ಷತಾ ವೈಶಿಷ್ಟ್ಯಗಳನ್ನು ಹೊಂದಿರುವ ಡಬಲ್ ಎಂಜಿನ್ ಹೊಂದಿರುವ ಈ ಹೆಲಿಕಾಪ್ಟರ್; ಐದು ಪ್ರಯಾಣಿಕರು ಮತ್ತು ಇಬ್ಬರು ಪೈಲಟ್ಗಳನ್ನು ಹೊತ್ತು ಹಾರುವ ಸಾಮರ್ಥ್ಯ ಹೊಂದಿದೆ. ಈ ಹೆಲಿಕಾಪ್ಟರ್ ಎತ್ತರದಿಂದಲೂ ಲ್ಯಾಂಡಿಂಗ್ ಮತ್ತು ಟೇಕ್ ಆಫ್ ಸಾಮರ್ಥ್ಯವನ್ನು ಹೊಂದಿದೆ. ಚಾಪರ್ ಶಕ್ತಿ ಹೀರಿಕೊಳ್ಳುವ ಆಸನಗಳನ್ನು ಹೊಂದಿದೆ. ಇದು ಅಪಘಾತದ ಸಂದರ್ಭದಲ್ಲಿ ಅದರ ಪ್ರಯಾಣಿಕರ ಸುರಕ್ಷತೆಯನ್ನು ಖಚಿತಪಡಿಸುತ್ತದೆ. ಇದಲ್ಲದೇ ಸುಧಾರಿತ ವೈರ್ಲೆಸ್ ಸಂವಹನ ವ್ಯವಸ್ಥೆಯನ್ನು ಸಹ ಹೊಂದಿದೆ.
ಸಚಿವರ ಜೊತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್ ಹುನುಮಣ್ಣರ, ಅಲಿ ಗೊರವನಕೋಲ್ ಇತರರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.