ADVERTISEMENT

ಸಹಕಾರ ಸಚಿವಾಲಯ ಸ್ಥಾಪನೆ ಸ್ವಾಗತಾರ್ಹ: ಮಹಾಂತೇಶ ಕವಟಗಿಮಠ

​ಪ್ರಜಾವಾಣಿ ವಾರ್ತೆ
Published 8 ಜುಲೈ 2021, 15:19 IST
Last Updated 8 ಜುಲೈ 2021, 15:19 IST
ಮಹಾಂತೇಶ ಕವಟಗಿಮಠ
ಮಹಾಂತೇಶ ಕವಟಗಿಮಠ   

ಬೆಳಗಾವಿ: ‘ಸಹಕಾರ ಸಚಿವಾಲಯ ಸ್ಥಾಪನೆಗೆ ಕೇಂದ್ರ ಸರ್ಕಾರ ಕ್ರಮ ಕೈಗೊಂಡಿರುವುದು ಸ್ವಾಗತಾರ್ಹವಾಗಿದೆ’ ಎಂದು ವಿಧಾನಪರಿಷತ್ ಮುಖ್ಯಸಚೇತಕ ಮಹಾಂತೇಶ ಕವಟಗಿಮಠ ಹೇಳಿದ್ದಾರೆ.

ಈ ಬಗ್ಗೆ ಪ್ರಕಟಣೆ ನೀಡಿರುವ ಅವರು, ‘ಸಹಕಾರ ಕ್ಷೇತ್ರವು ದೇಶದ ಬಹುತೇಕ ಗ್ರಾಮಗಳಲ್ಲಿ ವ್ಯಾಪಿಸಿದೆ. ಜನರ ಜೀವನ ಪದ್ಧತಿಯಾಗಿ ಬೆಳೆದಿದೆ. ಆಡು ಮುಟ್ಟದ ಸೊಪ್ಪಿಲ್ಲ ಎನ್ನುವಂತೆ ಈ ರಂಗ ವ್ಯಾಪಿಸದಿರುವ ಯಾವ ಕ್ಷೇತ್ರವೂ ಉಳಿದಿಲ್ಲ. ಸಹಕಾರ ತಜ್ಞರು ವಿವರಿಸುವಂತೆ ದೇಶದ ಆರ್ಥಿಕ ವ್ಯವಸ್ಥೆಯಲ್ಲಿ
ಶೇ. 40ರಷ್ಟು ಪಾಲನ್ನು ಈ ಕ್ಷೇತ್ರದ ಮೂಲಕವೇ ನಿರ್ವಹಿಸಲಾಗುತ್ತಿದೆ. ಸರ್ಕಾರದ ಹಲವು ಕಾರ್ಯಕ್ರಮಗಳನ್ನು ಇದರ ಮೂಲಕವೇ ಜಾರಿಗೊಳಿಸಲಾಗುತ್ತಿದೆ’ ಎಂದಿದ್ದಾರೆ.

‘ಇಷ್ಟೊಂದು ಬೃಹದಾಕಾರವಾಗಿ ಬೆಳೆದಿದ್ದರೂ ಮತ್ತು ಅನೇಕ ಸಾಧನೆಗಳನ್ನು ಮಾಡಿದ್ದರೂ ಸಮಸ್ಯೆಗಳಿಗೆ ಸ್ಪಂದಿಸಲು ಕೇಂದ್ರದಲ್ಲಿ ಪ್ರತ್ಯೇಕ ಸಹಕಾರ ಸಚಿವಾಲಯ ಇದುವರೆಗೂ ಇರಲಿಲ್ಲ. ತೊಂದರೆಗಳ ನಿವಾರಣೆಗೆ, ಕೃಷಿ ಇಲಾಖೆಯ ಜೊತೆಗೆ ಕಾರ್ಯನಿರ್ವಹಿಸುತ್ತಿರುವ ಸಹಕಾರಿ ಸಚಿವರನ್ನು ಭೇಟಿಯಾಗಬೇಕಿತ್ತು. ದೇಶದ ಕೃಷಿ ಕ್ಷೇತ್ರ ಅತ್ಯಂತ ದೊಡ್ಡದಾಗಿರುವುದರಿಂದ ಆ ಸಚಿವಾಲಯವು ಸಹಕಾರ ರಂಗದತ್ತ ಗಮನಹರಿಸುವುದು ಸಾಧ್ಯವಾಗುತ್ತಿರಲಿಲ್ಲ. ಈಗ ಕೊರತೆ ನೀಗಿದಂತಾಗಿದೆ’ ಎಂದು ಹೇಳಿದ್ದಾರೆ.

ADVERTISEMENT

‘ಸಹಕಾರದಿಂದ ಸಮೃದ್ಧಿ ಎನ್ನುವುದನ್ನು ಸಾಕಾರಗೊಳಿಸಲು ಕ್ರಮ ವಹಿಸಲಾಗಿದೆ. ಇದು ಸಹಕಾರಿ ಆಂದೋಲನ ಬಲಪಡಿಸಲು ಪ್ರತ್ಯೇಕ ಆಡಳಿತ, ಕಾನೂನು ಮತ್ತು ನೀತಿಗಳನ್ನು ಒದಗಿಸುತ್ತದೆ. ಇದರೊಂದಿಗೆ, ಸಮುದಾಯ ಆಧಾರಿತ ಅಭಿವೃದ್ಧಿ ಸಹಭಾಗಿತ್ವಕ್ಕೆ ಸರ್ಕಾರ ತನ್ನ ಬದ್ಧತೆ ಪ್ರದರ್ಶಿಸಿದೆ. ಪ್ರತ್ಯೇಕ ಸಚಿವರ ನೇಮಕವಾಗುವುದರಿಂದಾಗಿ ಕ್ಷೇತ್ರವು ಮತ್ತಷ್ಟು ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲಿದೆ’ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.