ADVERTISEMENT

‘ಪುತ್ಥಳಿ ಸ್ಥಾಪನೆ ಹಿಂದೆ ರಾಜಕೀಯ ಉದ್ದೇಶವಿಲ್ಲ’: ಸಚಿವೆ ಲಕ್ಷ್ಮೀ ಹೆಬ್ಬಾಳಕರ

​ಪ್ರಜಾವಾಣಿ ವಾರ್ತೆ
Published 19 ಮೇ 2025, 14:40 IST
Last Updated 19 ಮೇ 2025, 14:40 IST
ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಬಾವಿಯಲ್ಲಿ ಭಾನುವಾರ ಸಂಜೆ ಪ್ರತಿಷ್ಠಾಪಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ, ಸತೀಶ ಜಾರಕಿಹೊಳಿ, ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಗ್ರಾಮದ ಮುಖಂಡರು ನಮನ ಸಲ್ಲಿಸಿದರು
ಬೆಳಗಾವಿ ಗ್ರಾಮೀಣ ಕ್ಷೇತ್ರದ ಸುಳೇಬಾವಿಯಲ್ಲಿ ಭಾನುವಾರ ಸಂಜೆ ಪ್ರತಿಷ್ಠಾಪಿಸಿದ ಛತ್ರಪತಿ ಶಿವಾಜಿ ಮಹಾರಾಜರ ಪ್ರತಿಮೆಗೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ, ಸತೀಶ ಜಾರಕಿಹೊಳಿ, ವಿಧಾನ ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೊಳಿ ಹಾಗೂ ಗ್ರಾಮದ ಮುಖಂಡರು ನಮನ ಸಲ್ಲಿಸಿದರು   

ಬೆಳಗಾವಿ: ‘ಬೆಳಗಾವಿ ಗ್ರಾಮೀಣ ವಿಧಾನಸಭಾ ಕ್ಷೇತ್ರದಲ್ಲಿ ಮಹಾತ್ಮರ ಮೂರ್ತಿಗಳನ್ನು ಸ್ಥಾಪಿಸುವುದು ರಾಜಕೀಯ ಉದ್ದೇಶಕ್ಕಲ್ಲ, ಜನರನ್ನು ಖುಷಿಪಡಿಸಲೂ ಅಲ್ಲ. ಅವರ ಸಾಧನೆ ಹೋರಾಟ, ನಮ್ಮ ಮಕ್ಕಳಿಗೆ ಸ್ಫೂರ್ತಿಯಾಗಲಿ, ಈ ದೇಶದ ಸಂಸ್ಕೃತಿ‌ ಉಳಿಯಲಿ ಎಂಬ ಕಾರಣಕ್ಕೆ’ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಹೇಳಿದರು.

ತಾಲ್ಲೂಕಿನ ಸುಳೇಬಾವಿ‌ ಗ್ರಾಮದಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಮತ್ತು ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಸ್ವಂತ ಹಣದಿಂದ ಪ್ರತಿಷ್ಠಾಪಿಸಿದ ಛತ್ರಪತಿ ಶಿವಾಜಿ ಮಹಾರಾಜರ ನೂತನ ಪ್ರತಿಮೆಯನ್ನು ಭಾನುವಾರ ಸಂಜೆ ಅನಾವರಣಗೊಳಿಸಿ ಅವರು ಮಾತನಾಡಿದರು.

‘ಮುಂದಿನ ಪೀಳಿಗೆಗೆ ಉತ್ತಮ ಸಂಸ್ಕಾರ ಸಿಗಲಿ ಎಂಬುದೇ ನಮ್ಮ ಉದ್ದೇಶ. ಛತ್ರಪತಿ ಶಿವಾಜಿ, ಕಿತ್ತೂರು ಚನ್ನಮ್ಮ, ಜಗಜ್ಯೋತಿ ಬಸವೇಶ್ವರ, ಡಾ.ಬಿ.ಆರ್. ಅಂಬೇಡ್ಕರ್ ಅವರಂತಹ ಮಹಾತ್ಮರ ಜೀವನ ಆದರ್ಶವನ್ನು ನಮ್ಮ ಮಕ್ಕಳು ಮೈಗೂಡಿಸಿಕೊಳ್ಳಬೇಕು. ಅವರ ಜೀವನ ಚರಿತ್ರೆ ನಮ್ಮ ಮಕ್ಕಳಿಗೆ ಸ್ಫೂರ್ತಿ ತುಂಬಲಿ ಎನ್ನುವ ಕಾರಣಕ್ಕೆ ಅಂತವರ ಪ್ರತಿಮೆ ನಿರ್ಮಾಣ ಮಾಡಲಾಗುತ್ತಿದೆ’ ಎಂದು ವಿವರಿಸಿದರು.

ADVERTISEMENT

‘ಚುನಾವಣೆ 6 ತಿಂಗಳಿರುವಾಗ ಕೆಲವರು ಬಂದು ರಾಜಕಾರಣ ಮಾಡುತ್ತಾರೆ. ಆದರೆ, ನಾನು ಚುನಾವಣೆಗಾಗಿ ಕೆಲಸ ಮಾಡುವವಳಲ್ಲ. ದಿನದ 24 ಗಂಟೆಗೆ ಗ್ರಾಮೀಣ ಕ್ಷೇತ್ರದ ಅಭಿವೃದ್ಧಿಗಾಗಿಯೇ ಚಿಂತಿಸುತ್ತೇನೆ. ಬೇರೆಯವರು ಜಾತಿಗಳ ಮಧ್ಯೆ ಬೆಂಕಿ ಹಚ್ಚುತ್ತಾರೆ. ಚುನಾವಣೆ ಮುಗಿದ ಬಳಿಕ ನಾಪತ್ತೆಯಾಗುತ್ತಾರೆ. ಆದರೆ ನಾನು ಸುಳೇಬಾವಿ ಗ್ರಾಮದ ಮನೆ ಮಗಳಾಗಿ ನನ್ನೂರು ಎಂದು ಅನುದಾನ ತಂದು ಗ್ರಾಮದ ಅಭಿವೃದ್ಧಿ ಮಾಡಿದ್ದೇನೆ’ ಎಂದರು.

‘ನನ್ನ ಕ್ಷೇತ್ರದಲ್ಲಿ ಮೂರು ಗ್ರಾಮ ಪಂಚಾಯಿತಿಗಳನ್ನು ಮೇಲ್ದರ್ಜೆಗೇರಿಸುವ ಕೆಲಸ ಮಾಡಿದ್ದೇ‌ನೆ. ಹಿಂಡಲಗಾ, ಹಿರೇಬಾಗೇವಾಡಿ, ಬೆನಕನಹಳ್ಳಿ ಗ್ರಾಮಗಳನ್ನು ಮೇಲ್ದರ್ಜೆಗೇರಿಸಿದ್ದು, ಪಟ್ಟಣ ಪಂಚಾಯಿತಿಗಳಾಗಿವೆ. ಪ್ರತಿ ವರ್ಷ ₹15 ಕೋಟಿ ವಿಶೇಷ ಅನುದಾನ ಬಂದು ಇಡೀ ಗ್ರಾಮವೇ ಅಭಿವೃದ್ಧಿ ಆಗಲಿದೆ. ಗ್ರಾಮಗಳ ಚಿತ್ರಣವೇ ಬದಲಾಗಲಿದೆ’ ಎಂದು ಹೇಳಿದರು.

ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಮಾತನಾಡಿ, ‘ಇದೊಂದು ಐತಿಹಾಸಿಕ ದಿನ. ಸಮಸ್ತ ಗ್ರಾಮಸ್ಥರು ಶಿವಾಜಿ ಪ್ರತಿಮೆ ಸ್ಥಾಪನೆಗೆ ಸಹಕಾರ ನೀಡಿದ್ದಾರೆ. ಶಿವಾಜಿ ಮಹಾರಾಜರ ಶೌರ್ಯ, ಪರಾಕ್ರಮ ವೈರಿಗಳ ಎದೆ ನಡುಗಿಸುವಂಥದ್ದು. ಪರಾಕ್ರಮ ಮೆರೆದು ಭಾರತ ದೇಶವನ್ನು ಸುರಕ್ಷಿತವಾಗಿ ಇಟ್ಟವರು. ಯುವಕರಲ್ಲಿ ಜಾಗೃತಿ ಮೂಡಿಸಲು, ತ್ಯಾಗ, ಶ್ರಮ ಜೀವಂತವಾಗಿ ಇಡಲು ಮಹಾನ್ ಪುರುಷರ ಮೂರ್ತಿ ಸ್ಥಾಪನೆ ಮಾಡುತ್ತಿದ್ದೇವೆ’ ಎಂದರು.

ಮುಖಂಡರಾದ ಬಸನಗೌಡ ಹುಂಕ್ರಿಪಾಟೀಲ, ನಾಗೇಶ ದೇಸಾಯಿ, ಶಂಕರಗೌಡ ಪಾಟೀಲ, ಬಸವರಾಜ ಮ್ಯಾಗೋಟಿ ಮಾತನಾಡಿದರು. ವೇದಮೂರ್ತಿ ಶ್ರೀಶೈಲ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ದೇವಣ್ಣ ಬಂಗೇನ್ನವರ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪಕೀರವ್ವ ಅಮರಾಪುರ, ನೀಲೇಶ ಚಂದಗಡಕರ, ಸುರೇಶ ಕಟಬುಗೋಳ, ಮಹೇಶ ಸುಗಣೆನ್ನವರ, ಸಂಭಾಜಿ ಯಮೋಜಿ, ವಿಠ್ಠಲ ಕಲಾದಗಿ, ಲಕ್ಷ್ಮಣ ಮಂಡು, ಶಿವಾಜಿ ಹುಂಕ್ರಿಪಾಟೀಲ, ಮಹೇಶ ಸುಗಣೆನ್ನವರ, ಜೀವನಪ್ಪ‌ ಶಿಂಧೆ, ಅಶೋಕ ಯರಝರವಿ, ಯಮನಪ್ಪ ಕಲಾಬಾರ, ರುದ್ರಪ್ಪ ಅಮರಾಪುರ ಸೇರಿದಂತೆ ಇತರರು ಇದ್ದರು. ಭೈರೋಬಾ ಕಾಂಬಳೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಬಸವರಾಜ ಮ್ಯಾಗೋಟಿ ಸ್ವಾಗತಿಸಿದರು.

ಸಚಿವೆ ಲಕ್ಷ್ಮೀ ಕಾರ್ಯ ಪ್ರಶಂಸನೀಯ’

ಛತ್ರಪತಿ ಶಿವಾಜಿ ಮಹಾರಾಜರ ತಂದೆ ಶಹಾಜಿ ಮಹಾರಾಜರ ಸಮಾಧಿ‌ ಇರುವ ಚನ್ನಗಿರಿ ತಾಲ್ಲೂಕಿನ ಹೊದಗೆರೆ ಗ್ರಾಮದಲ್ಲಿ ಭವ್ಯ ಸ್ಮಾರಕ ಮಾಡಲು ಲೋಕೋಪಯೋಗಿ ಇಲಾಖೆಯಿಂದ ₹5 ಕೋಟಿ ಅನುದಾನ ಬಿಡುಗಡೆ ಮಾಡಲಾಗಿದ್ದು ಇನ್ನು ಕೆಲವೇ ದಿನಗಳಲ್ಲಿ ಕೆಲಸ ಆರಂಭವಾಗಲಿದೆ’ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ‌ ತಿಳಿಸಿದರು. ಶಿವಾಜಿ ಮಹಾರಾಜರ ಪ್ರತಿಮೆ ಅನಾವರಣಗೊಳಿಸಿ ಮಾತನಾಡಿದ ಅವರು ‘ಸಚಿವೆ ಲಕ್ಷ್ಮೀ ಹೆಬ್ಬಾಳಕರ ಮತ್ತು ಚನ್ನರಾಜ ಹಟ್ಟಿಹೊಳಿ ಅವರು ಅಭಿವೃದ್ಧಿ ಜತೆಗೆ ಸಮಾಜಮುಖಿ ಕೆಲಸಗಳನ್ನೂ ಮಾಡುತ್ತಿದ್ದಾರೆ. ಇದೊಂದು ಐತಿಹಾಸಿಕ ದಿನ. ಇಲ್ಲಿ ಶಿವಾಜಿ ಮಹಾರಾಜರ ಭವ್ಯ ಪ್ರತಿಮೆ ಆಗಬೇಕೆಂದು ಬಹಳ ವರ್ಷದ ಕನಸಿತ್ತು. ಅದನ್ನು ಇವರು ನೆರವೇರಿಸಿದ್ದಾರೆ. ಸರ್ಕಾರದ ಹಣದಲ್ಲಿ ಇಂತಹ ಪ್ರತಿಮೆ ಸ್ಥಾಪಿಸಲು ಅವಕಾಶ ಕಡಿಮೆ. ಆದರೆ ಹೆಬ್ಬಾಳಕರ ಅವರು ಸ್ವಂತ ಹಣದಿಂದ ನೆರವೇರಿಸಿದ್ದಾರೆ. ಅಭಿವೃದ್ಧಿ ಜೊತೆಗೆ ಸಮಾಜಮುಖಿ ಕೆಲಸವನ್ನೂ ಮಾಡುತ್ತಿದ್ದಾರೆ’ ಎಂದು ಪ್ರಶಂಸಿಸಿದರು. ‘ಸುಳೇಬಾವಿ ಗ್ರಾಮದಲ್ಲಿ ಯಾವುದೇ ಜಾತಿ ಧರ್ಮ‌ದ ಭೇದ ಭಾವ ಇಲ್ಲದೇ ಇರುವುದು ಹೆಮ್ಮೆಯ ವಿಷಯ. ‌ ಶಿವಾಜಿ ಮಹಾರಾಜರ ಹೋರಾಟ ಆದರ್ಶ ನಮಗೆಲ್ಲರಿಗೂ ಪ್ರೇರಣೆ. ಇಂಥ ಕಾರ್ಯಕ್ರಮಗಳು ನಮಗೆ ದಾರಿದೀಪ ಆಗಬೇಕು. ಸುಂದರವಾದ ಸ್ಮಾರಕ‌ ನಿರ್ಮಾಣ ಮಾಡಿರುವುದು ಸಂತೋಷದ ವಿಷಯ. ಇಡೀ ಜಿಲ್ಲೆಯಲ್ಲೇ ಇಂತಹ ಸುಂದರ ಪ್ರತಿಮೆ ಬೇರೆಲ್ಲೂ ಇಲ್ಲ’ ಎಂದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.