ಬೆಳಗಾವಿ: ‘ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಹಾಥರಸ್ಗೆ ಹೋಗದಂತೆ ಪೊಲೀಸರ ಮೂಲಕ ತಡೆ ಹಾಕಿರುವ ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ ಯೋಗಿನೋ, ರೋಗಿನೋ ಗೊತ್ತಿಲ್ಲ’ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಟೀಕಿಸಿದರು.
ಇಲ್ಲಿನ ಸಾಂಬ್ರಾ ವಿಮಾನನಿಲ್ದಾಣದಲ್ಲಿ ಶುಕ್ರವಾರ ಪತ್ರಕರ್ತರೊಂದಿಗೆ ಅವರು ಮಾತನಾಡಿದರು.
‘ಆದಿತ್ಯನಾಥ ಸರ್ಕಾರ ಕಾನೂನು–ಸುವ್ಯವಸ್ಥೆ ಹಾಳು ಮಾಡಿದ್ದು, ಅದು ಜಂಗಲ್ ರಾಜ್ ಆಗಿದೆ. ಕಾನೂನಿಗೆ ಬೆಲೆ ಇಲ್ಲದಂತಾಗಿದೆ. ಪೊಲೀಸರು ಸರ್ವಾಧಿಕಾರಿ ರೀತಿ ವರ್ತಿಸಿದ್ದಾರೆ. ರಾಹುಲ್ ಗಾಂಧಿ ಅವರು ಸಾಮೂಹಿಕ ಅತ್ಯಾಚಾರ ಸಂತ್ರಸ್ತೆಯ ಕುಟುಂಬದವರಿಗೆ ಸಾಂತ್ವನ ಹೇಳಲು ಹೋಗುತ್ತಿದ್ದರು. ಅದಕ್ಕೆ ಅವಕಾಶ ಕೊಟ್ಟಿಲ್ಲ. ದೇಶ ಬಿಜೆಪಿ ಅಥವಾ ಆದಿತ್ಯನಾಥ್ ಆಸ್ತಿ ಅಲ್ಲ’ ಎಂದು ವಾಗ್ದಾಳಿ ನಡೆಸಿದರು.
‘ಆದಿತ್ಯನಾಥ್ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಬೇಕು’ ಎಂದು ಆಗ್ರಹಿಸಿದರು.
‘ಸರ್ಕಾರವು ಹೋದ ವರ್ಷದ ನೆರೆ ಸಂತ್ರಸ್ತರಿಗೆ ಮನೆ ಕಟ್ಟಿ ಕೊಟ್ಟಿಲ್ಲ; ಪರಿಹಾರ ನೀಡಿಲ್ಲ. ಈಚೆಗೆ ಉಂಟಾದ ಪ್ರವಾಹದಿಂದ ಸಂಕಷ್ಟಕ್ಕೆ ಒಳಗಾದವರಿಗೆ ನಯಾ ಪೈಸೆ ಖರ್ಚು ಮಾಡಿಲ್ಲ’ ಎಂದು ಆರೋಪಿಸಿದರು.
‘ಈ ಸರ್ಕಾರ ಭ್ರಷ್ಟಾಚಾರದಲ್ಲಿ ತೊಡಗಿದೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚೆಕ್ ಮೂಲಕ ಹಣ ತೆಗೆದುಕೊಂಡರೆ, ಮಗ ಆರ್ಟಿಜಿಎಸ್ನಲ್ಲಿ ಪಡೆಯುತ್ತಿದ್ದಾರೆ’ ಎಂದು ಟೀಕಿಸಿದರು.
ಸಿದ್ದರಾಮಯ್ಯ ಬ್ರಿಟಿಷರಗಿಂತ ಹೆಚ್ಚಾಗಿ ಸಮಾಜ ಒಡೆದರು ಎಂಬ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್ಕುಮಾರ್ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಕಟೀಲ್ ಯಕಶ್ಚಿತ್ ರಾಜಕಾರಣಿ. ನನ್ನ ಕಾಲದಲ್ಲಿ ಒಂದೇ ಒಂದು ಚೆಕ್ ಬೌನ್ಸ್ ಆಗಿರಲಿಲ್ಲ. ಇವರ ಕಾಲದಲ್ಲಿ ಸಂಬಳ ಕೊಡಲೂ ದುಡ್ಡಿಲ್ಲ’ ಎಂದು ತಿರುಗೇಟು ನೀಡಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.