ಬೆಳಗಾವಿ: ‘ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಸರ್ಕಾರಿ ವೈದ್ಯಕೀಯ ಕಾಲೇಜು, ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗಳನ್ನು ಆರಂಭಿಸಲಾಗುವುದು’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಹೇಳಿದರು.
ಇಲ್ಲಿನ ಜಿಲ್ಲಾಸ್ಪತ್ರೆ ಆವರಣದಲ್ಲಿ ₹120 ಕೋಟಿ ವೆಚ್ಚದಲ್ಲಿ ನಿರ್ಮಿಸಿದ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ, ಗೃಹವೈದ್ಯರ ವಸತಿ ನಿಲಯ ನಿರ್ಮಾಣಕ್ಕೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು.
‘ರಾಜ್ಯದಲ್ಲಿ ಈಗಾಗಲೇ 22 ವೈದ್ಯಕೀಯ ಕಾಲೇಜುಗಳಿವೆ. ಯಾವ ಜಿಲ್ಲೆಗಳಲ್ಲಿ ಇಲ್ಲವೋ ಆ ಜಿಲ್ಲೆಗಳಲ್ಲೂ ಸ್ಥಾಪಿಸಲು ಕ್ರಮವಹಿಸಲಾಗುವುದು’ ಎಂದು ಹೇಳಿದರು.
ಸ್ಮಾರ್ಟ್ ಸಿಟಿ ಯೋಜನೆ ಅಡಿ ನಿರ್ಮಿಸಿದ ಬಸ್ ನಿಲ್ದಾಣ ಉದ್ಘಾಟಿಸಿದ ಸಿ.ಎಂ, ರಾಣಿ ಚನ್ನಮ್ಮ ವಿಶ್ವವಿದ್ಯಾನಿಲಯದ ಪಿ.ಎಂ ಉಷಾ (ಮೇರು) ಕಟ್ಟಡ ಕಾಮಗಾರಿ ಮತ್ತು ವಿ.ವಿ ರಸ್ತೆ ನಿರ್ಮಾಣ ಕಾಮಗಾರಿಗೆ ಇದೇ ವೇಳೆ ಚಾಲನೆ ನೀಡಿದರು.
ಇದಕ್ಕೂ ಮುನ್ನ ಮಾಧ್ಯಮದವರ ಪ್ರಶ್ನೆಗೆ ಪ್ರತಿಕ್ರಿಯಿಸಿ, ‘ನೈಸರ್ಗಿಕ ವಿಕೋಪ ಪರಿಹಾರ ನಿಧಿ (ಎನ್ಡಿಆರ್ಎಫ್) ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಲ್ಲ’ ಎಂದು ಸ್ಪಷ್ಟಪಡಿಸಿದರು.
‘ಬಿಜೆಪಿಯವರಿಗೆ ಕಾಮಾಲೆ ರೋಗ ಅಂಟಿಕೊಂಡಿದ್ದು, ಗ್ಯಾರಂಟಿ ಯೋಜನೆಗಳು ಕಣ್ಣು ಕುಕ್ಕುತ್ತಿವೆ. ಪ್ರಧಾನಿ ಮೋದಿ ಅವರೂ ಗ್ಯಾರಂಟಿಗಳ ಅನುಷ್ಠಾನ ಸಾಧ್ಯವಿಲ್ಲ ಎಂದಿದ್ದರು. ಹರಿಯಾಣ, ದೆಹಲಿ, ಮಹಾರಾಷ್ಟ್ರ ಸೇರಿ ಬಿಜೆಪಿ ಆಡಳಿತ ಇರುವೆಡೆ ಈ ಉಪಾಯ ಅನುಕರಣೆ ಮಾಡುತ್ತಿದ್ದಾರೆ’ ಎಂದು ಲೇವಡಿ ಮಾಡಿದರು.
‘ಮುಖ್ಯಮಂತ್ರಿ ಸ್ಥಾನವನ್ನು ಉಳಿಸಿಕೊಳ್ಳಲು ಪಕ್ಷದ ಹೈಕಮಾಂಡ್ಗೆ ಸಡ್ಡು ಹೊಡೆದಿದ್ದಾರೆ’ ಎಂಬ ಸಿ.ಟಿ ರವಿ ಅವರ ಹೇಳಿಕೆಗೆ ಪ್ರತಿಕ್ರಿಯಿಸಿ, ‘ನಮ್ಮ ಪಕ್ಷದ ಆಂತರಿಕ ವಿಚಾರಗಳ ಬಗ್ಗೆ ತಲೆ ಕೆಡಿಸಿಕೊಳ್ಳಲು ಸಿ.ಟಿ ರವಿ ಯಾರು?’ ಎಂದು ಅವರು ಪ್ರಶ್ನಿಸಿದರು.
ಅತಿವೃಷ್ಟಿಯಿಂದಾಗಿ ಈ ಬಾರಿ ರಾಜ್ಯದಲ್ಲಿ 10 ಲಕ್ಷ ಹೆಕ್ಟೇರ್ನಷ್ಟು ಬೆಳೆ ಹಾನಿಯಾಗಿದೆ. ಸಮೀಕ್ಷೆ ಮುಗಿದ ತಕ್ಷಣ ಪರಿಹಾರ ಒದಗಿಸಲಾಗುವುದು
–ಸಿದ್ದರಾಮಯ್ಯ ಮುಖ್ಯಮಂತ್ರಿ
‘1000 ವೈದ್ಯಕೀಯ ಸೀಟು ಹೆಚ್ಚಳ’
ಶ್ರೀ‘ರಾಜ್ಯದಲ್ಲಿ 13 ಸಾವಿರ ವೈದ್ಯಕೀಯ ಸೀಟುಗಳಿದ್ದವು. ಈ ವರ್ಷದಿಂದ 1000 ಸೀಟು ಹೆಚ್ಚಲಿದೆ’ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು. ’ಸರ್ಕಾರಿ ವೈದ್ಯಕೀಯ ಕಾಲೇಜುಗಳನ್ನು ತೆರೆದು ಹೆಚ್ಚಿನ ಸಂಖ್ಯೆಯಲ್ಲಿ ಬಡವರ ಮಕ್ಕಳಿಗೆ ಅವಕಾಶ ಕೊಡಲು ಉದ್ದೇಶಿಸಲಾಗಿದೆ’ ಎಂದು ಹೇಳಿದರು. ‘₹50 ಕೋಟಿ ವೆಚ್ಚದಲ್ಲಿ ಕ್ಯಾನ್ಸರ್ ಆಸ್ಪತ್ರೆ ₹50 ಲಕ್ಷದಲ್ಲಿ ಟ್ರಾಮಾ ಸೆಂಟರ್ಗಳನ್ನು ಪ್ರತಿ ಜಿಲ್ಲೆಯಲ್ಲೂ ನಿರ್ಮಿಸಲಾಗುವುದು’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.