ಬೆಳಗಾವಿ: ‘ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರಿಗೆ ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರವಿಲ್ಲ. ಹೀಗಾಗಿ ಹೊಸ ಕ್ಷೇತ್ರ ಹುಡುಕುತ್ತಿದ್ದಾರೆ’ ಎಂದು ಜಿಲ್ಲಾ ಉಸ್ತುವಾರಿ ಸಚಿವ ಗೋವಿಂದ ಕಾರಜೋಳ ಹೇಳಿದರು.
ಇಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಮೈಸೂರಿನಿಂದ ಬಾಗಲಕೋಟೆ ಜಿಲ್ಲೆಗೆ ಬಂದರು. ಈಗ ಕೋಲಾರದಲ್ಲಿ ಕ್ಷೇತ್ರ ಹುಡುಕುತ್ತಿದ್ದಾರೆ. ಕಾಂಗ್ರೆಸ್ನ ಪರಿಸ್ಥಿತಿಯೂ ಇದಕ್ಕಿಂತ ಭಿನ್ನವಿಲ್ಲ. ಅದೀಗ ನಾವಿಕನಿಲ್ಲದ ಹಡಗಿನಂತಾಗಿದೆ. ಪ್ರಮುಖರು ಆ ಪಕ್ಷ ತೊರೆಯುತ್ತಿದ್ದಾರೆ’ ಎಂದರು.
‘ಗುಲಾಂ ನಬಿ ಆಜಾದ್ ದೀರ್ಘಕಾಲದಿಂದ ಕಾಂಗ್ರೆಸ್ನಲ್ಲಿದ್ದರು. ನಂತರ ಪಕ್ಷ ತೊರೆದರು. ಎಸ್.ಎಂ.ಕೃಷ್ಣ ಕೂಡ ರಾಜೀನಾಮೆ ನೀಡಿದ್ದಾರೆ. ಮುಂದಿನ ದಿನಗಳಲ್ಲಿ ಹಲವು ದಿಗ್ಗಜರು ಇದೇ ಹಾದಿ ಹಿಡಿಯಲಿದ್ದಾರೆ’ ಎಂದು ಹೇಳಿದರು.
‘ದೇಶದಲ್ಲಿ ಕಾಂಗ್ರೆಸ್ ಅವಸಾನದ ಅಂಚಿನಲ್ಲಿದ್ದು, ದಲಿತ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಎಐಸಿಸಿ ಅಧ್ಯಕ್ಷರನ್ನಾಗಿ ಮಾಡಿದೆ. ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರ ಅಧಿಕಾರದಲ್ಲಿದ್ದಾಗ ಈ ಹುದ್ದೆ ನೀಡಿದ್ದರೆ, ದಲಿತ ನಾಯಕರನ್ನು ಗುರುತಿಸಿದೆ ಎನ್ನಬಹುದಿತ್ತು. ಈಗ ಆ ಹುದ್ದೆಗೇರಲು ಯಾರೂ ಸಿದ್ಧರಿಲ್ಲ. ಪಕ್ಷವೂ ನೆಲೆ ಕಳೆದುಕೊಂಡಿದ್ದರಿಂದ ಸ್ಥಾನ ನೀಡಲಾಗಿದೆ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.