ಬೆಳಗಾವಿ: ‘ಪ್ರಧಾನಿ ನರೇಂದ್ರ ಮೋದಿ ಅವರು ಹಲವು ಜನಪರ ಯೋಜನೆಗಳನ್ನು ಜಾರಿಗೆ ತಂದಿದ್ದಾರೆ. ಅವುಗಳನ್ನು ಫಲಾನುಭವಿಗಳಿಗೆ ಮುಟ್ಟಿಸುವಲ್ಲೂ ಯಶಸ್ಸು ಸಾಧಿಸಲಾಗಿದೆ’ ಎಂದು ಕೆಎಲ್ಇ ಸಂಸ್ಥೆಯ ಕಾರ್ಯಾಧ್ಯಕ್ಷ ಪ್ರಭಾಕರ ಕೋರೆ ಹೇಳಿದರು.
ನಗರದ ಕೆಎಲ್ಇ ಸಂಸ್ಥೆಯ ಲಿಂಗರಾಜ ಕಾಲೇಜಿನಲ್ಲಿ ಜಿಲ್ಲಾಡಳಿತ, ನಗರ ಪಾಲಿಕೆ ಮತ್ತು ಲಿಂಗರಾಜ ಕಾಲೇಜು ಸಹಯೋಗದಲ್ಲಿ ಶನಿವಾರ ಆಯೋಜಿಸಿದ್ದ ‘ಆವಾಸ್ ಪರ್ ಸಂವಾದ’ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು.
‘ಪ್ರಧಾನ ಮಂತ್ರಿ ಆವಾಸ್ ಯೋಜನೆಯ ಜನಸಾಮಾನ್ಯರ ಬದುಕಿಗೆ ಬೆಳಕಾಗಿದೆ’ ಎಂದರು.
‘ಯೋಜನೆಗಳನ್ನು ತರುವಂತೆ ಕಾರ್ಯಗತಗೊಳಿಸುವುದು ಕೂಡ ಮುಖ್ಯವಾಗುತ್ತದೆ. ಕೇಂದ್ರ ಸರ್ಕಾರವು ಜನತೆಗೆ ಮುಟ್ಟಿಸುವ ಕೆಲಸ ಮಾಡಿದೆ. ಆವಾಸ್ ಯೋಜನೆಯಲ್ಲಿ ಗ್ರಾಮೀಣ ಹಾಗೂ ನಗರ ಪ್ರದೇಶದ ಲಕ್ಷಾಂತರ ಜನರು ಲಾಭ ಪಡೆದಿದ್ದಾರೆ. 2020ರ ವೇಳೆಗೆ ಪ್ರತಿ ಕುಟುಂಬಕ್ಕೂ ಮನೆ ಸಿಗುವಂತಾಗಬೇಕು ಎನ್ನುವುದು ಸರ್ಕಾರದ ಉದ್ದೇಶ’ ಎಂದು ಹೇಳಿದರು.
‘ಕೇಂದ್ರದ ಸಹಾಯದೊಂದಿಗೆ ನಗರ ಸ್ಥಳೀಯ ಸಂಸ್ಥೆಗಳು, ಬ್ಯಾಂಕ್ಗಳ ಸಹಯೋಗದಲ್ಲಿ ಮನೆಗಳನ್ನು ನಿರ್ಮಿಸಲಾಗುತ್ತಿದೆ. ಅರ್ಹ ಫಲಾನುಭವಿಗಳು ಲಾಭ ಪಡೆಯಬೇಕು’ ಎಂದು ಸಲಹೆ ನೀಡಿದರು.
ಅಧ್ಯಕ್ಷತೆ ವಹಿಸಿದ್ದ ವಿಧಾನಪರಿಷತ್ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ, ‘ಪ್ರಧಾನ ಮಂತ್ರಿ ಆವಾಸ್ ಯೋಜನೆ ದೇಶ ಹಾಗೂ ರಾಜ್ಯದಲ್ಲಿಯಶಸ್ಸು ಕಂಡಿದೆ’ ಎಂದರು.
ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಮಾತನಾಡಿದರು. ಮಹಾನಗರ ಪಾಲಿಕೆ ಆಯುಕ್ತ ರುದ್ರೇಶ ಗಾಳಿ, ನಗರ ಯೋಜನಾ ನಿರ್ದೇಶಕ ಈಶ್ವರ ಉಳ್ಳಾಗಡ್ಡಿ, ಕೆಎಲ್ಇ ಸಂಸ್ಥೆಯ ಆಜೀವ ಸದಸ್ಯ ಪ್ರಕಾಶ ಕಟಕೋಳ, ಎಂ.ಪಿ. ಸತೀಶ, ಪ್ರೊ.ಶೀತಲ ನಂಜಪ್ಪನವರ ಉಪಸ್ಥಿತರಿದ್ದರು.
ಪ್ರಾಚಾರ್ಯ ಡಾ.ಬಿ.ಎಂ. ತೇಜಸ್ವಿ ಸ್ವಾಗತಿಸಿದರು. ಬಸಮ್ಮ ಮಠದ ಪ್ರಾರ್ಥಿಸಿದರು. ಎಚ್.ಎಂ.ಚನ್ನಪ್ಪಗೋಳ ವಂದಿಸಿದರು. ಮಹೇಶ ಸಿ.ಗುರನಗೌಡರ ನಿರೂಪಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.