ಕರ್ನಲ್ ಸೋಫಿಯಾ ಖುರೇಷಿ
ಪಪಿಟಿಐ ಚಿತ್ರ
ಬೆಳಗಾವಿ: ‘ಜಿಲ್ಲೆಯ ಗೋಕಾಕ ತಾಲ್ಲೂಕಿನ ಕೊಣ್ಣೂರ ಗ್ರಾಮದಲ್ಲಿರುವ ಕರ್ನಲ್ ಸೋಫಿಯಾ ಖುರೇಷಿ ಅವರ ಮಾವ ಗೌಸ್ಸಾಬ್ ಮನೆಯ ಮೇಲೆ ಆರ್ಎಸ್ಎಸ್ ಕಾರ್ಯಕರ್ತರು ದಾಳಿ ಮಾಡಿ ಧ್ವಂಸಗೊಳಿಸಿದ್ದಾರೆ ಎಂಬ ಸುಳ್ಳು ಸುದ್ದಿ ಹರಡಲಾಗಿದೆ. ಈ ಬಗ್ಗೆ ಸಾರ್ವಜನಿಕರು ಗಮನ ಕೊಡಬಾರದು’ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಭೀಮಾಶಂಕರ ಗುಳೇದ ಹೇಳಿದರು.
‘ಕರ್ನಲ್ ಸೋಫಿಯಾ ಖುರೇಷಿ ಅವರು ‘ಆಪರೇಷನ್ ಸಿಂಧೂರ’ ಬಗ್ಗೆ ಮಾಹಿತಿ ನೀಡಿದ್ದರು. ಅವರ ಹೆಸರನ್ನು ಬಳಸಿ ಕೆನಡಾ ಮೂಲದ ವ್ಯಕ್ತಿಯೊಬ್ಬ ‘ಎಕ್ಸ್’ ಖಾತೆಯಲ್ಲಿ ಸುಳ್ಳು ಸುದ್ದಿ ಹರಡಿದ್ದ. ಆತನನ್ನು ಮೆಸೇಜ್ ಮೂಲಕ ಸಂಪರ್ಕಿಸಿ ಅದು ಸುಳ್ಳು ಸುದ್ದಿ ಎಂದು ತಿಳಿಸಿದ ಬಳಿಕ ಪೋಸ್ಟ್ ಡಿಲೀಟ್ ಮಾಡಿದ್ದಾನೆ. ವ್ಯಕ್ತಿಯ ಬಗ್ಗೆ ಹುಡುಕಾಟ ನಡೆದಿದ್ದು, ಆತ ಭಾರತದವನಾಗಿದ್ದರೆ ಬಂಧಿಸಲಾಗುವುದು’ ಎಂದು ಅವರು ಬುಧವಾರ ಸುದ್ದಿಗಾರರಿಗೆ ತಿಳಿಸಿದರು.
‘ಸೇನೆಯಲ್ಲಿರುವ ಸೋಫಿಯಾ ಅವರು ಕುಟುಂಬದವರಿಗೆ ಇದರ ಅರಿವು ಇದೆ. ಆದರೂ ಮುಂಜಾಗ್ರತಾ ಕ್ರಮವಾಗಿ ಅವರ ಮನೆಗೆ ಭದ್ರತೆ ಒದಗಿಸಲಾಗಿದೆ. ಸಾಮಾಜಿಕ ಜಾಲತಾಣದಲ್ಲಿ ಕೋಮು ಗಲಭೆ, ಸಮುದಾಯದ ನಡುವೆ ವಿಷಬೀಜ ಬಿತ್ತುವ ಕಿಡಿಗೇಡಿಗಳ ಮೇಲೆ ಜಿಲ್ಲಾ ಪೊಲೀಸ್ ಹದ್ದಿನ ಕಣ್ಣು ಇಟ್ಟಿದೆ’ ಎಂದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.