ADVERTISEMENT

ಬೆಳಗಾವಿ | ಅಸಂಘಟಿತ ಕಾರ್ಮಿಕರಿಗೆ ವಿಶೇಷ ಪಿಂಚಣಿ: ಜಿಲ್ಲಾಧಿಕಾರಿ ಮೊಹಮ್ಮದ್

ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್–ಧನ್: ವಿಶೇಷ ನೋಂದಣಿ ಅಭಿಯಾನ

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2026, 2:02 IST
Last Updated 5 ಫೆಬ್ರುವರಿ 2026, 2:02 IST
ಮೊಹಮ್ಮದ್‌ ರೋಷನ್‌
ಮೊಹಮ್ಮದ್‌ ರೋಷನ್‌   

ಬೆಳಗಾವಿ: ‘ಅಸಂಘಟಿತ ವಲಯದ ಕಾರ್ಮಿಕರಿಗೆ ವೃದ್ಧಾಪ್ಯದಲ್ಲಿ ಸಾಮಾಜಿಕ ಭದ್ರತೆ ಕಲ್ಪಿಸುವ ಉಶದೊಂದಿಗೆ ಕೇಂದ್ರ ಸರ್ಕಾರ ಪ್ರಧಾನ ಮಂತ್ರಿ ಮಾನ್–ಧನ್ ವಂತಿಗೆ ಆಧಾರಿತ ಪಿಂಚಣಿ ಯೋಜನೆ ಜಾರಿಗೆ ತಂದಿದೆ. ಜಿಲ್ಲೆಯ ಅಸಂಘಟಿತ ವಲಯದ ಕಾರ್ಮಿಕರನ್ನು ಗುರುತಿಸಿ ಈ ಯೋಜನೆ ವ್ಯಾಪ್ತಿಗೊಳಪಡಿಸಬೇಕು’ ಎಂದು ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಜರುಗಿದ ಪ್ರಧಾನ ಮಂತ್ರಿ ಶ್ರಮಯೋಗಿ ಮಾನ್–ಧನ್ ಯೋಜನೆಯಡಿ ಅಸಂಘಟಿತ ಕಾರ್ಮಿಕರ ನೋಂದಣಿ ಕುರಿತ ವಿಶೇಷ ನೋಂದಣಿ ಅಭಿಯಾನದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

‘ಜಿಲ್ಲೆಯಲ್ಲಿನ ಕೃಷಿ ಕಾರ್ಮಿಕರು, ಮನರೇಗಾ ಕೂಲಿ ಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕರು, ಅಕ್ಷರ ದಾಸೋಹ ಅಡುಗೆ ಸಹಾಯಕರು, ಬೀದಿ ಬದಿ ವ್ಯಾಪಾರಸ್ಥರನ್ನು ಸಿಬ್ಬಂದಿಯನ್ನು ಅದೇ ರೀತಿ ಜಿಲ್ಲೆಯ ಕೌಶಲ ಆಧಾರಿತ ಕಾರ್ಮಿಕರನ್ನು ಗುರುತಿಸಿ ನೋಂದಣಿ ಮಾಡಿಸಬೇಕು’ ಎಂದರು.

ADVERTISEMENT

ಸಹಾಯಕ ಕಾರ್ಮಿಕ ಆಯುಕ್ತ ಕೆ.ಬಿ.ನಾಗರಾಜ ಮಾತನಾಡಿ, ‘ಜಿಲ್ಲೆಯ ಅಸಂಘಟಿತ ಕಾರ್ಮಿಕರ ನೊಂದಣಿಗಾಗಿ ವಿಶೇಷ ಅಭಿಯಾನ ಹಮ್ಮಿಕೊಳ್ಳಲಾಗುತ್ತಿದೆ. ಮಾಸಿಕ ₹3000 ನಿಶ್ಚಿತ ಪಿಂಚಣಿ ಒದಗಿಸುವ ಈ ಯೋಜನೆಗೆ 18 ರಿಂದ 40 ವರ್ಷದೊಳಗಿನ ಅಸಂಘಟಿತ ಕಾರ್ಮಿಕರು ಸಿ.ಎಸ್.ಸಿ. ಸೆಂಟರುಗಳಲ್ಲಿ ಆಧಾರ್‌ ಕಾರ್ಡ್‌ ಹಾಗೂ ಆರಂಭಿಕ ಶುಲ್ಕ ಪಾವತಿಸುವುದರ ಮೂಲಕ ನೋದಣಿ ಮಾಡಿಕೊಳ್ಳಬಹುದು’ ಎಂದರು.

ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಬಸವರಾಜ ಹೆಗನಾಯಕ, ಜಂಟಿ ಕೃಷಿ ನಿರ್ದೆಶಕ ಕೊಳೆಕರ, ಜಿಲ್ಲಾ ಕಾರ್ಮಿಕ ಅಧಿಕಾರಿಗಳಾದ ಮಲ್ಲಿಕಾರ್ಜುನ ಜೋಗುರ, ರಾಜೇಶ ಜಾಧವ, ಕಾರ್ಮಿಕ ನೀರಿಕ್ಷಕರು ಸೇರಿದಂತೆ ಜಿಲ್ಲೆಯ ವಿವಿಧ ಕಾರ್ಮಿಕ ಸಂಘಟನೆಗಳ ಪದಾಧಿಕಾರಿಗಳು ಹಾಜರಿದ್ದರು.

ಯಾರು ಅರ್ಹರು?

ಅಸಂಘಟಿತ ವಲಯದಲ್ಲಿ ಕೆಲಸ ನಿರ್ವಹಿಸುತ್ತಿರುವ ಗೃಹ ಕಾರ್ಮಿಕರು ಬೀದಿಬದಿ ವ್ಯಾಪಾರಿಗಳು ಬಿಸಿಯೂಟ ತಯಾರಕರು ಹಮಾಲಿಗಳು ಇಟ್ಟಿಗೆ ಕಾರ್ಮಿಕರ ಭಟ್ಟಿ ಕಾರ್ಮಿಕರು ಚಮ್ಮಾರರು ಚಿಂದಿ ಆಯುವವರು ಮನೆಗೆಲಸದವರು ಅಗಸರು ರಿಕ್ಷಾ ಚಾಲಕರು ಭೂರಹಿತ ಕಾರ್ಮಿಕರು ಸ್ವಯಂ ಉದ್ಯೋಗಿಗಳು ಕೃಷಿ ಕಾರ್ಮಿಕರು ಕಟ್ಟಡ ಕಾರ್ಮಿಕರು ಬೀಡಿ ಕಾರ್ಮಿಕರು ಚರ್ಮೋದ್ಯಮ ಕಾರ್ಮಿಕರು ದ್ವನಿ ಮತ್ತು ದೃಶ್ಯ ಕಾರ್ಮಿಕರು ಮೆಕ್ಯಾನಿಕಗಳು ಕೈಮಗ್ಗ ಕಾರ್ಮಿಕರು ನೋಂದಾಯಿಸಿಕೊಳ್ಳುಬಹುದು. ಮಾಸಿಕ ಆದಾಯ ₹15 ಸಾವಿರಕ್ಕಿಂತ ಕಡಿಮೆ ಇರಬೇಕು. ಆದಾಯ ತೆರಿಗೆ ಇ.ಎಸ್.ಐ ಪಿ.ಎಫ್ ಎನ್.ಪಿ.ಎಸ್ ಯೋಜನೆ ವ್ಯಾಪ್ತಿಗೆ ಒಳಪಡಬಾರದು.

ಹೆಚ್ಚಿನ ಮಾಹಿತಿಗೆ ಟೋಲ್ ಫ್ರೀ ಕೇಂದ್ರ 1800 267 6888 ಸಂಪರ್ಕಿಸಬಹುದು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.