
ಚನ್ನಮ್ಮನ ಕಿತ್ತೂರು: ‘ಬರುವ ಎಸ್ಎಸ್ಎಲ್ ಸಿ ಪರೀಕ್ಷೆಯಲ್ಲಿ ವಿದ್ಯಾರ್ಥಿಗಳು ಹೆಚ್ಚಿನ ಅಂಕಗಳನ್ನು ಗಳಿಸಬೇಕು. ಅದಕ್ಕೆ ಪೂರಕವಾಗಿ ಮನೆಯಲ್ಲಿಯ ಪಾಲಕರು ಸಂಜೆ ಟಿವಿ ಹಚ್ಚುವುದನ್ನು ಮುಂದಿನ 40ದಿನಗಳ ವರೆಗೆ ಬಂದ್ ಮಾಡಬೇಕು’ ಎಂದು ಶಾಸಕ ಬಾಬಾಸಾಹೇಬ ಪಾಟೀಲ ಪೋಷಕರಲ್ಲಿ ಮನವಿ ಮಾಡಿದರು.
ಇಲ್ಲಿನ ರಾಣಿ ಚನ್ನಮ್ಮ ಸ್ಮಾರಕ ಸಭಾಭವನದಲ್ಲಿ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯದಿಂದ ಶುಕ್ರವಾರ ಆಯೋಜಿಸಿದ್ದ ಎಸ್ಎಸ್ಎಲ್ ಸಿ ವಿದ್ಯಾರ್ಥಿಗಳ ಪೋಷಕರ ಮಹಾಸಭೆ, ಪೂರ್ಣಾಂಕ ಗಳಿಸುವ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಉಚಿತ ವಸತಿ ಸೌಲಭ್ಯಯುತ ತರಬೇತಿ ಶಿಬಿರ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
‘ಪರೀಕ್ಷೆಯಲ್ಲಿ ಪೂರ್ಣಾಂಕ ಗಳಿಸುವ ನಿರೀಕ್ಷೆಯೊಂದಿಗೆ ವಸತಿ ಸೌಲಭ್ಯದೊಂದಿಗೆ ತರಬೇತಿ ನೀಡಲು 50 ವಿದ್ಯಾರ್ಥಿಗಳನ್ನು ತಾಲ್ಲೂಕಿನ ವಿವಿಧ ಶಾಲೆಗಳಿಂದ ಆಯ್ಕೆ ಮಾಡಲಾಗಿದೆ. ಮನೆಯಲ್ಲಿ ಓದುವ ಪ್ರತಿಭಾವಂತ ವಿದ್ಯಾರ್ಥಿಗಳಿಗೂ ಕೊರತೆಯಿಲ್ಲ. ವಿಧಾನಸಭೆ ಕ್ಷೇತ್ರದಲ್ಲಿ ಪರೀಕ್ಷೆ ಬರೆಯಲಿರುವ ಎಲ್ಲ ವಿದ್ಯಾರ್ಥಿಗಳಿಗೆ ಪರೀಕ್ಷಾ ಕೈಪಿಡಿ ಉಚಿತವಾಗಿ ಒದಗಿಸಲಾಗಿದೆ. ಅವುಗಳನ್ನು ಉಪಯೋಗಿಸಿಕೊಂಡು ಹೆಚ್ಚಿನ ಅಂಕ ಪಡೆಯಲು ಪ್ರಯತ್ನಿಸಬೇಕು’ ಎಂದು ಸಲಹೆ ನೀಡಿದರು.
ಸಾನ್ನಿಧ್ಯ ವಹಿಸಿದ್ದ ನಿಷ್ಕಲ ಮಂಟಪದ ನಿಜಗುಣಾನಂದ ಸ್ವಾಮೀಜಿ ಮಾತನಾಡಿ, ‘ಕಷ್ಟಕ್ಕೆ ದೇವರು ಪರಿಹಾರವಲ್ಲ, ಶಿಕ್ಷಣ ಪರಿಹಾರವಾಗಿದೆ, ಜ್ಞಾನ ನಮ್ಮನ್ನು ಬದುಕಿಸುತ್ತದೆ’ ಎಂದು ನುಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಚನಬಸಪ್ಪ ತುಬಾಕದ ಮಾತನಾಡಿ, ‘ಮಿಷನ್-625ರ ಈಡೇರಿಕೆಗಾಗಿ ಸುಮಾರು ಎರಡು ನೂರು ಶಿಕ್ಷಕರು ಪ್ರಯತ್ನ ಮಾಡುತ್ತಿದ್ದಾರೆ. ತಾಲ್ಲೂಕಿನ ನಾಲ್ಕು ಕಡೆಗಳಲ್ಲಿ ನಿಗದಿತ ಗುರಿಯ ಫಲಿತಾಂಶ ಪಡೆಯುವುದಕ್ಕಾಗಿ ಪ್ರಯತ್ನ ಸಾಗಿದೆ’ ಎಂದರು.
ತಹಶೀಲ್ದಾರ್ ಕಲಗೌಡ ಪಾಟೀಲ, ಶಿವಾನಂದ ಗುಡಗನಟ್ಟಿ, ಅಲ್ಪಸಂಖ್ಯಾತರ ಇಲಾಖೆಯ ಎಫ್. ಐ. ಪೂಜಾರ ಮಾತನಾಡಿದರು. ಪಟ್ಟಣ ಪಂಚಾಯಿತಿ ಅಧ್ಯಕ್ಷ ಜೈಸಿದ್ದರಾಮ ಮಾರಿಹಾಳ ಕಾರ್ಯಕ್ರಮ ಉದ್ಘಾಟಿಸಿದರು.
ತಾಲ್ಲೂಕು ಪಂಚಾಯಿತಿ ಇಒ ನಿಂಗಪ್ಪ ಮಸಳಿ, ಕ್ಷೇತ್ರ ಸಮನ್ವಯಾಧಿಕಾರಿ ಗಾಯತ್ರಿ ಅಜ್ಜನ್ನವರ, ಸಹಾಯಕ ನಿರ್ದೇಶಕಿ ಮಹಾದೇವಿ ಕುಡವಕ್ಕಲಗಿ, ಶಿಕ್ಷಕರಾದ ಶೇಖರ ಹಲಸಗಿ, ಗಜಾನಂದ ಸೊಗಲನ್ನವರ, ಶಿಕ್ಷಕರು, ವಿದ್ಯಾರ್ಥಿಗಳು, ಪಾಲಕರು ಪಾಲ್ಗೊಂಡಿದ್ದರು. ಶಿಕ್ಷಕ ಎಂ. ಪಿ. ಕದಂ, ಬಿಆರ್ ಪಿ ಸ್ನೇಹಲ್ ಪೂಜಾರಿ ನಿರೂಪಿಸಿದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.